ಮೈಸೂರು:- ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ಅಪ್ರಾಪ್ತೆ ದಿವ್ಯಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇದೀಗ ಹಲವು ಅನುಮಾನಗಳಿಗೆ ಕಾರಣವಾಗಿದೆ.
ಈ ಸಾವಿಗೆ ಪ್ರಿಯಕರನ ಪಾತ್ರವಿದೆಯಾ ಅಥವಾ ಪೋಷಕರ ಒತ್ತಡ ಕಾರಣವೇ? ಎಂಬ ಬಗ್ಗೆ ಪರಸ್ಪರ ಆರೋಪ–ಪ್ರತ್ಯಾರೋಪಗಳು ಕೇಳಿಬರುತ್ತಿವೆ. ದಿವ್ಯಾ ಸರ್ಕಾರಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದು, ಆದಿತ್ಯ ಎಂಬ ಯುವಕನೊಂದಿಗೆ ಪ್ರೀತಿಯ ಸಂಬಂಧ ಹೊಂದಿದ್ದಳು ಎನ್ನಲಾಗಿದೆ. ಇಬ್ಬರೂ ಚಾಮುಂಡಿಬೆಟ್ಟ ಸೇರಿದಂತೆ ಹಲವು ಸ್ಥಳಗಳಿಗೆ ತೆರಳಿದ್ದು, ಅವರ ಸೆಲ್ಫಿ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.
ಒಂದು ಕಡೆ, ಯುವಕನ ಕಿರುಕುಳದಿಂದ ಬೇಸತ್ತು ದಿವ್ಯಾ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂಬ ಆರೋಪಗಳು ಕೇಳಿಬರುತ್ತಿದ್ದರೆ, ಮತ್ತೊಂದು ಕಡೆ ಆಕೆಯ ಪೋಷಕರ ಒತ್ತಡವೇ ಸಾವಿಗೆ ಕಾರಣ ಎಂಬ ಮಾತುಗಳೂ ಕೇಳಿಬರುತ್ತಿವೆ. ಈ ನಡುವೆ ದಿವ್ಯಾ–ಆದಿತ್ಯ ನಡುವಿನ ಸಂಭಾಷಣೆಯ ಆಡಿಯೋ ಕ್ಲಿಪ್ ಬಹಿರಂಗವಾಗಿದ್ದು, ಅದರಲ್ಲಿ ದಿವ್ಯಾ ತನ್ನ ಭಯವನ್ನು ವ್ಯಕ್ತಪಡಿಸಿ, ಆದಿತ್ಯನನ್ನು ಮದುವೆಯಾಗುವಂತೆ ಮನವಿ ಮಾಡಿಕೊಂಡಿದ್ದಾಳೆ.
ಆದಿತ್ಯ ತನ್ನ ಮೇಲೆ ದಿವ್ಯಾ ತಂದೆ ಸುಳ್ಳು ಆರೋಪ ಮಾಡಿದ್ದಾರೆ ಎಂದು ಹೇಳಿಕೊಂಡಿದ್ದು, ತಾನು ಯಾವುದೇ ಕಿರುಕುಳ ನೀಡಿಲ್ಲ ಎಂಬುದಕ್ಕೆ ಸಾಕ್ಷಿಗಳನ್ನು ಪೊಲೀಸರಿಗೆ ಒದಗಿಸಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾನೆ. ಘಟನೆಯ ನಿಜಾಂಶವನ್ನು ತಿಳಿದುಕೊಳ್ಳಲು ಪೊಲೀಸರು ತನಿಖೆ ಕೈಗೊಂಡಿದ್ದು, ತನಿಖೆಯಿಂದಲೇ ದಿವ್ಯಾ ಸಾವಿನ ಹಿಂದಿನ ಅಸಲಿ ಕಾರಣ ಬಹಿರಂಗವಾಗಬೇಕಿದೆ.



