ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯದಲ್ಲಿ ಈಗಾಗಲೇ ನೂತನ ಜೈವಿಕ ಇಂಧನ ನೀತಿಯ ರಚನೆಯ ಕುರಿತು ಪೂರ್ವಭಾವಿ ಕಾರ್ಯ ಚಟುವಟಿಕೆಗಳನ್ನು ಪೂರ್ಣಗೊಳಿಸಿದೆ. ಶೀಘ್ರದಲ್ಲಿಯೇ ನೂತನ ಜೈವಿಕ ಇಂಧನ ನೀತಿಯು ರಾಜ್ಯ ಸರ್ಕಾರದಿಂದ ಘೋಷಣೆಯಾಗಲಿದೆ. ಈಗಾಗಲೇ ಅನುಷ್ಠಾನ ಪ್ರಕ್ರಿಯೆ ಮಾರ್ಗಸೂಚಿಗಳನ್ನು ಸಿದ್ಧಗೊಳಿಸಲಾಗಿದೆ ಎಂದು ಕರ್ನಾಟಕ ಜೈವಿಕ ಮಂಡಳಿ ಅಧ್ಯಕ್ಷ ಎಸ್.ಈ. ಸುಧೀಂದ್ರ ಹೇಳಿದರು.
ನಗರದ ಗ್ರಾಮೀಣಾಭಿವೃದ್ಧಿ ವಿಶ್ವವಿದ್ಯಾಲಯದಲ್ಲಿ ಬುಧವಾರ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ ವತಿಯಿಂದ ಆಯೋಜಿಸಿದ್ದ ಸದ್ಭಾವನ ದಿವಸ್, ಅಕ್ಷಯ ಊರ್ಜಾ ದಿವಸ್ ಮತ್ತು ವಿಶ್ವ ಜೈವಿಕ ಇಂಧನ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮುಂದಿನ 5 ವರ್ಷಗಳಲ್ಲಿ 1 ಲಕ್ಷ ಕೋಟಿಗೂ ಹೆಚ್ಚಿನ ಬಂಡವಾಳ ಹೂಡಿಕೆಯನ್ನು ಜೈವಿಕ ಇಂಧನ ಕ್ಷೇತ್ರದಲ್ಲಿ ನಿರೀಕ್ಷಿಸಲಾಗಿದೆ. 3 ಲಕ್ಷಕ್ಕೂ ಹೆಚ್ಚಿನ ಪ್ರತ್ಯಕ್ಷ ಹಾಗೂ ಪರೋಕ್ಷ ಉದ್ಯೋಗ ಸೃಜನೆ, ರೈತರ ಕುಟುಂಬಗಳ ಆದಾಯದ ಹೆಚ್ಚಳ, ಯುವ ಉದ್ದಿಮೆದಾರರಿಗೆ ಪ್ರೋತ್ಸಾಹ ದೊರೆಯಲಿದ್ದು, ಮುಂದಿನ ಐದು ವರ್ಷಗಳು ಕರ್ನಾಟಕ ರಾಜ್ಯದಲ್ಲಿ ಜೈವಿಕ ಇಂಧನ ಕ್ಷೇತ್ರದ ಅಭಿವೃದ್ಧಿಯಲ್ಲಿ ನಿರ್ಣಾಯಕವಾಗಲಿದೆ ಎಂದರು.
ಸದ್ಭಾವನಾ ದಿವಸ್ ಹಾಗೂ ಊರ್ಜಾ ದಿವಸ್ 21ನೇ ಶತಮಾನದ ವಿಜ್ಞಾನ, ತಂತ್ರಜ್ಞಾನ, ಮಾಹಿತಿ ಹಾಗೂ ಜೀವ ವಿಜ್ಞಾನಕ್ಕೆ ಮುನ್ನುಡಿ ಬರೆದ ದಿನಾಚರಣೆ. ರಾಟ್ರೀಯ ಐಕ್ಯತೆ, ಸಾಮಾಜಿಕ ಸೌಹಾರ್ದತೆ ಮತ್ತು ಸಹಿಷ್ಣತೆ ಕುರಿತು ಜನತೆಯಲ್ಲಿ ಅರಿವು ಮತ್ತು ಜಾಗೃತಿ ಮೂಡಿಸುವುದು ಈ ಊರ್ಜಾ ದಿವಸ್ ಮುಖ್ಯ ಉದ್ದೇಶವಾಗಿದೆ. ಪ್ರಸ್ತುತ ಸನ್ನಿವೇಶದಲ್ಲಿ ಜೈವಿಕ ಇಂಧನ ಕ್ಷೇತ್ರದ ಉನ್ನತೀಕರಣ ಮತ್ತು ವಾಣಿಜ್ಯೀಕರಣ ಅತ್ಯಗತ್ಯವಾಗಿದೆ ಎಂದರು.
ಗದಗ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷ ಕೆಂಚಪ್ಪಣ್ಣವರ ಮಾತನಾಡಿ, ದೇಶದಲ್ಲಿ ಹಸಿರು ಕ್ರಾಂತಿ, ಕ್ಷೀರ ಕ್ರಾಂತಿ ನಡೆದಿದೆ. ಈಗ ಜೈವಿಕ ಕ್ರಾಂತಿ ನಡೆದಿರುವುದು ದೇಶದ ಅಭಿವೃದ್ಧಿಗೆ ಪೂರಕವಾಗಲಿದೆ. ಈ ಮೊದಲು ಗಿಡ-ಮರಗಳಿಂದ ಉತ್ಪದಾನೆ ಆಗುವ ಇಂಧನಗಳಿಗೆ ಮಾತ್ರ ಪ್ರಾಮುಖ್ಯತೆ ನೀಡಲಾಗುತ್ತಿತ್ತು. ಇತ್ತೀಚೆಗೆ ಕಬ್ಬಿನಿಂದ ಎಥೆನಾಲ್ ಉತ್ಪಾದನೆ ಹೆಚ್ಚಾಗುತ್ತಿದೆ. ಕಬ್ಬಿನ ಕಸದಿಂದ ಸುಟ್ಟು ಬರುವ ಕಚ್ಚಾ ವಸ್ತುಗಳಿಂದ ವಿದ್ಯುತ್ ಉತ್ಪಾದನೆ ಆಗುತ್ತಿದೆ. ಸಕ್ಕರೆ ಕಾರ್ಖಾನೆಗಳಿಂದ ಜೈವಿಕ ಇಂಧನ ಅಧಿಕ ಉತ್ಪಾದನೆ ಆಗುತ್ತಿರುವುದು ಇಂಧನ ವಲಯಕ್ಕೆ ಶಕ್ತಿ ತುಂಬಿದೆ ಎಂದರು.
ಜೈವಿಕ ಇಂಧನ ಮಂಡಳಿ ವ್ಯವಸ್ಥಾಪಕ ನಿರ್ದೇಶಕ ಶಿವಶಂಕರ ಮಾತನಾಡಿ, ಶುಚಿತ್ವಕ್ಕೆ ಮೊದಲ ಆದ್ಯತೆ ನೀಡಬೇಕು. ಮುಂದಿನ 30 ವರ್ಷಗಳಲ್ಲಿ ಭಾರತ ಬಲಿಷ್ಠ ರಾಷ್ಟ್ರವಾಗಲಿದೆ. ಇಂದಿನ ವಿದ್ಯಾರ್ಥಿಗಳು ಸಂಪನ್ಮೂಲಗಳ ಸಮರ್ಪಕ ಬಳಕೆಗೆ ಒತ್ತು ನೀಡಬೇಕು. ಬದುಕಿಗೆ ಆಹಾರ, ವಸತಿ, ಶಿಕ್ಷಣ ಎಷ್ಟು ಮುಖ್ಯವೋ ಶಕ್ತಿಯು ಅಷ್ಟೇ ಮುಖ್ಯವಾಗಿದೆ. ಜೈವಿಕ ಪುನರ್ಬಳಕೆ ಇಂಧನವು ಭವಿಷ್ಯದಲ್ಲಿ ಅನಿವಾರ್ಯತೆಯಾಗಲಿದೆ ಎಂದು ಹೇಳಿದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಡಾ.ಸುರೇಶ್ ವಿ.ನಾಡಗೌಡ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿದ್ಯಾಲಯದ ವಿತ್ತಾಧಿಕಾರಿ ಪ್ರಶಾಂತ್ ಜೆ.ಸಿ, ಜೈವಿಕ ಇಂಧನ ಸಂಶೋಧನೆ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ ಕೇಂದ್ರದ ಸಂಯೋಜಕ ಡಾ. ರವಿ ಜಡೆ, ಸಹಾಯಕ ನಿರ್ದೇಶಕ ಗಿರೀಶ್ ದಿಕ್ಷಿತ್ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.
“ಯುವಕ, ಯುವತಿಯರು ಉದ್ಯಮಶೀಲತೆ ಬೆಳಸಿಕೊಂಡು ಇತರರಿಗೆ ಉದ್ಯೋಗ ನೀಡಬೇಕು. ಎಲ್ಲರೂ ಒಗ್ಗಟ್ಟಾಗಿದ್ದರೆ ಸಾಧನೆ ಮಾಡಬಹುದು. ನಮ್ಮನ್ನು ವಿಭಜಿಸುವ ಶಕ್ತಿಗಳಿಂದ ಎಚ್ಚರಿಕೆ ವಹಿಸಬೇಕು. ವಿಭಜಿಸುವ ಶಕ್ತಿಯನ್ನು ನಾಶ ಮಾಡಿ ಸಾಧನೆಗೆ ಗಮನ ಕೊಡಬೇಕು. ಅಂದಾಗ ಮಾತ್ರ ಸದ್ಭಾವನಾ ದಿವಸ ಆಚರಣೆ ಸಾರ್ಥಕವಾಗುತ್ತದೆ”
– ಸಂತೋಷ ಕೆಂಚಪ್ಪಣ್ಣವರ.
ಗದಗ ಅರಣ್ಯ ಸಂರಕ್ಷಣಾಧಿಕಾರಿ.
“ನವೀಕರಿಸಬಹುದಾದ ಶಕ್ತಿ ಮೂಲಗಳಾದ ಸೋಲಾರ್, ವಿಂಡ್ ಎನರ್ಜಿ ಕ್ಷೇತ್ರದಲ್ಲಿ ರಾಜ್ಯವು ಉತ್ತಮ ಸಾಧನೆ ಮಾಡಲು ಈಗಾಗಲೇ ಹಲವಾರು ಕಾರ್ಯಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಿದೆ. ಪ್ರಸ್ತುತ ಜೈವಿಕ ಇಂಧನ ಕ್ಷೇತ್ರದ ಅಭಿವೃದ್ಧಿಗೂ ಸರ್ಕಾರ ಆಸಕ್ತಿ ತೋರಿದೆ. ನೂತನ ಜೈವಿಕ ಇಂಧನ ನೀತಿಯು ಈ ಕ್ಷೇತ್ರದ ಅಭಿವೃದ್ಧಿಗೆ ವೇಗವರ್ಧಕವಾಗಲಿದೆ”
– ಎಸ್.ಈ. ಸುಧೀಂದ್ರ.
ಕರ್ನಾಟಕ ಜೈವಿಕ ಮಂಡಳಿ ಅಧ್ಯಕ್ಷರು.



