ಮೈಸೂರು: ರೈತರು ಮತ್ತು ಹೆಣ್ಣುಮಕ್ಕಳು ಭದ್ರವಾಗಿದ್ದರೆ ಯಾವುದೇ ಕಾರಣಕ್ಕೂ ಬಿಡದಿ ಟೌನ್ಶಿಪ್ ಯೋಜನೆ ಜಾರಿಯಾಗಲು ಬಿಡುವುದಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮೈಸೂರಿನಲ್ಲಿ ಜೆಡಿಎಸ್ ಪಾದಯಾತ್ರೆ ಕುರಿತು ಮಾತನಾಡಿದ ಅವರು, ಇದು ತಮ್ಮ ನೇತೃತ್ವದ ಪಾದಯಾತ್ರೆಯಲ್ಲ. ಜೆಡಿಎಸ್ ಯುವ ಘಟಕದ ವತಿಯಿಂದ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಪಾದಯಾತ್ರೆ ನಡೆಯುತ್ತಿದೆ. ಪಕ್ಷದ ಶಾಸಕರು ಕೂಡ ಪಾದಯಾತ್ರೆಯಲ್ಲಿ ಭಾಗವಹಿಸುತ್ತಿದ್ದಾರೆ ಎಂದು ಹೇಳಿದರು.
ಬಿಡದಿ ಟೌನ್ಶಿಪ್ ವಿಚಾರದಲ್ಲಿ ನನಗೆ ಯಾವುದೇ ಹಠವಿಲ್ಲ. ಬಹುಶಃ ಸರ್ಕಾರಕ್ಕೆ ಹಠ ಇರಬಹುದು ಎಂದು ವ್ಯಂಗ್ಯವಾಡಿದ ಕುಮಾರಸ್ವಾಮಿ, ಟೌನ್ಶಿಪ್ ಹೆಸರಿನಲ್ಲಿ ಹಣ ಲೂಟಿ ಮಾಡುವ ಯೋಜನೆ ಇದಾಗಿದೆ ಎಂದು ಆರೋಪಿಸಿದರು.
ತಾವು ಯಾವುದೇ ಕಿಕ್ಬ್ಯಾಕ್ ಪಡೆದಿದ್ದರೆ ತನಿಖೆ ನಡೆಸಲಿ. ತಮ್ಮನ್ನಾಗಲಿ ಅಥವಾ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರನ್ನಾಗಲಿ ಯಾರಿಂದಲೂ ಕೊಂಡುಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದರು.
ತಾವು ಲಾಟರಿ ನಿಷೇಧಿಸಿದ ಸಂದರ್ಭದಲ್ಲಿ ತಮಿಳುನಾಡಿನಿಂದ ಬ್ಯಾಗ್ ಹಿಡಿದುಕೊಂಡು ಬಂದವರು ಯಾರು ಎಂಬ ಕಾಂಗ್ರೆಸ್ ನಾಯಕರ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
‘ವಿಪಕ್ಷಗಳಿಗೆ ಗೌರವ ಕೊಡುತ್ತಿಲ್ಲ’:
ಅಧಿಕಾರದ ಮದದಿಂದ ಸರ್ಕಾರ ವಿಪಕ್ಷಗಳ ಮಾತಿಗೆ ಗೌರವ ನೀಡುತ್ತಿಲ್ಲ ಎಂದು ಕುಮಾರಸ್ವಾಮಿ ಆರೋಪಿಸಿದರು. ಬೀದಿ ಬದಿ ವ್ಯಾಪಾರಿಗಳನ್ನು ತೆರವುಗೊಳಿಸಲಾಗಿದೆ. ಆದರೆ ಅವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗಿದೆಯೇ ಎಂದು ಪ್ರಶ್ನಿಸಿದರು.
ಕೃಷ್ಣ ಬೈರೇಗೌಡ ಅವರು ತಾವು ಖರೀದಿಸಿದ ಜಾಗ ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಎಸ್ಐಟಿ ರಚಿಸಲಾಗಿತ್ತು. ಆದರೆ ಸರ್ಕಾರದ ಅಧಿಕಾರಾವಧಿ ಮುಗಿಯಲು ಇನ್ನೂ ಒಂದೂವರೆ ವರ್ಷ ಮಾತ್ರ ಬಾಕಿಯಿದೆ ಎಂದು ಅವರು ಹೇಳಿದರು.
ರೈತರು ಮತ್ತು ಹೆಣ್ಣುಮಕ್ಕಳಿಗೆ ಭದ್ರತೆ ಇದ್ದರೆ ಬಿಡದಿ ಟೌನ್ಶಿಪ್ ಯಾವುದೇ ಕಾರಣಕ್ಕೂ ಆಗುವುದಿಲ್ಲ. ಹಣ ಲೂಟಿ ಮಾಡಲು ಮುಂದಾಗಿರುವ ಸರ್ಕಾರಕ್ಕೆ ತಿರುಗೇಟು ನೀಡಲು ಜೆಡಿಎಸ್ ಶಾಸಕರು ಸಿದ್ಧರಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು.
ನೈಸ್ ರಸ್ತೆ ಟೋಲ್ ವಿಚಾರದಲ್ಲೂ ಸರ್ಕಾರದ ವಿರುದ್ಧ ವಾಗ್ದಾಳಿ:
ನೈಸ್ ರಸ್ತೆಯಲ್ಲಿ ಕಾನೂನುಬಾಹಿರವಾಗಿ ಟೋಲ್ ಸಂಗ್ರಹಿಸಲಾಗುತ್ತಿದೆ ಎಂದು ಕುಮಾರಸ್ವಾಮಿ ಆರೋಪಿಸಿದರು. ಟೋಲ್ ಸಂಗ್ರಹ ಕಾನೂನುಬದ್ಧವಲ್ಲ ಎಂಬುದನ್ನು ಸರ್ಕಾರದ ಪರ ವಾದ ಮಂಡಿಸಿರುವ ವಕೀಲರೇ ನ್ಯಾಯಾಲಯದಲ್ಲಿ ಹೇಳಿದ್ದಾರೆ ಎಂದು ಅವರು ತಿಳಿಸಿದರು.
ಹೀಗಾಗಿ ರೈತರಿಗೆ ಟೋಲ್ ಕಟ್ಟಬೇಡಿ ಎಂದು ತಾವು ಹೇಳಿದ್ದಾಗಿ ತಿಳಿಸಿದ ಕುಮಾರಸ್ವಾಮಿ, ಸಚಿವ ಪ್ರಿಯಾಂಕ್ ಖರ್ಗೆ ಅವರು ಸ್ಪರ್ಧೆಗೆ ಬಿದ್ದವರಂತೆ ಮಾತನಾಡುತ್ತಿದ್ದಾರೆ ಎಂದು ಟೀಕಿಸಿದರು.
ಟೋಲ್ ಸಂಗ್ರಹ ಮಾಡುತ್ತಿರುವವರು ಯಾರು ಎಂಬುದರ ಬಗ್ಗೆ ಮೊದಲು ಅರಿವು ಇರಬೇಕು. ತಮ್ಮನ್ನು ಮತ್ತು ಜೆಡಿಎಸ್ನ್ನು ಟೀಕಿಸಲು ಸರ್ಕಾರ ಕೆಲ ಸಚಿವರನ್ನು ಬಳಸಿಕೊಳ್ಳುತ್ತಿದೆ ಎಂದು ಕುಮಾರಸ್ವಾಮಿ ಆರೋಪಿಸಿದರು.



