HomeChikkamagaluruಧರ್ಮಗಳ ನಡುವೆ ದ್ವೇಷ ಬೇಡ... ಸಂವಾದ ಬೇಕು: ರಂಭಾಪುರಿ ಶ್ರೀ

ಧರ್ಮಗಳ ನಡುವೆ ದ್ವೇಷ ಬೇಡ… ಸಂವಾದ ಬೇಕು: ರಂಭಾಪುರಿ ಶ್ರೀ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಬಾಳೆಹೊನ್ನೂರು: ಜವಾಬ್ದಾರಿಯುತ ಸ್ಥಾನದಲ್ಲಿರುವ ಕರ್ನಾಟಕ ಸರ್ಕಾರದ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ಅವರು ಸಾರ್ವಜನಿಕ ಸಭೆ-ಸಮಾರಂಭಗಳಲ್ಲಿ ಧರ್ಮದಂತಹ ಸೂಕ್ಷ್ಮ ವಿಷಯಗಳ ಕುರಿತು ಹೆಚ್ಚು ಸಂಯಮದಿಂದ ಮಾತನಾಡಬೇಕಿತ್ತು ಎಂದು ವೀರಶೈವ ಪಂಚಪೀಠಗಳ ಒಕ್ಕೂಟ ವ್ಯವಸ್ಥೆಯ ಸಂಚಾಲಕರಾದ ಬಾಳೆಹೊನ್ನೂರಿನ ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ವಿಷಾದ ಹಾಗೂ ಆತಂಕ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ಹಿಂದೂ ಸಂಸ್ಕೃತಿ ಹಾಗೂ ಇಸ್ಲಾಂ ಧರ್ಮದ ಕುರಿತು ಸಚಿವರು ನೀಡಿರುವ ಹೇಳಿಕೆ ಚರ್ಚೆಗೆ ಗ್ರಾಸವಾಗಿರುವ ಹಿನ್ನೆಲೆಯಲ್ಲಿ, ಬುಧವಾರ ಶ್ರೀ ಜಗದ್ಗುರು ರಂಭಾಪುರಿ ಪೀಠದಲ್ಲಿ ನಡೆದ ಶ್ರಾವಣ ಮಾಸದ ಧರ್ಮ ಸಮಾರಂಭದಲ್ಲಿ ತಮ್ಮನ್ನು ಭೇಟಿಯಾದ ಪತ್ರಕರ್ತರೊಂದಿಗೆ ಅವರು ಮಾತನಾಡಿದರು.

ಯಾವುದೇ ಧರ್ಮವನ್ನು ಗೌರವಿಸುವುದು ತಪ್ಪಲ್ಲ. ಆದರೆ, ಒಂದು ಧರ್ಮವನ್ನು ಮತ್ತೊಂದು ಧರ್ಮದೊಂದಿಗೆ ಹೋಲಿಸಿ ಶ್ರೇಷ್ಠತೆಯ ಮಾನದಂಡದಲ್ಲಿ ಮಾತನಾಡುವುದು ಸಮಾಜದಲ್ಲಿ ಅನಗತ್ಯ ಭಾವನಾತ್ಮಕ ಗೊಂದಲಕ್ಕೆ ಕಾರಣವಾಗಬಹುದು ಎಂದು ಹೇಳಿದರು.

ಭಾರತದ ವೈಶಿಷ್ಟ್ಯವೇ ಸರ್ವಧರ್ಮ ಸಮಭಾವ, ಪರಸ್ಪರ ಗೌರವ ಮತ್ತು ಸಹಬಾಳ್ವೆಯಾಗಿದೆ. ‘ಸರ್ವೇ ಜನಾಃ ಸುಖಿನೋ ಭವಂತು’ ಎಂಬ ವಿಶಾಲ ಮಾನವೀಯ ದೃಷ್ಟಿಕೋನವನ್ನು ನಮ್ಮ ಸಂಸ್ಕೃತಿ ಪ್ರತಿಪಾದಿಸಿದೆ ಎಂದು ತಿಳಿಸಿದರು.

ಸಚಿವರ ಹೇಳಿಕೆಯನ್ನು ವಿರೋಧಿಸುವ ನೆಪದಲ್ಲಿ ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿಕೊಂಡು ಮಾತನಾಡುವುದು ಕೂಡ ಸರಿಯಲ್ಲ ಎಂದು ಶ್ರೀ ರಂಭಾಪುರಿ ಜಗದ್ಗುರುಗಳು ಸ್ಪಷ್ಟಪಡಿಸಿದರು.

ವಿರೋಧ ಇರಬೇಕಾದುದು ವ್ಯಕ್ತಿಯ ಹೇಳಿಕೆಯ ವಿರುದ್ಧವೇ ಹೊರತು ಯಾವುದೇ ಸಮುದಾಯದ ವಿರುದ್ಧ ಅಲ್ಲ. ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಪರಸ್ಪರ ಗೌರವ ಉಳಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು ಹೇಳಿದರು.

ಉನ್ನತ ಶಿಕ್ಷಣ ಸಚಿವರಾದ ಬಸವರಾಜ ರಾಯರಡ್ಡಿ ಅವರು ವಿದ್ಯಾರ್ಥಿಗಳು ಹಾಗೂ ಯುವಜನಾಂಗಕ್ಕೆ ಮಾರ್ಗದರ್ಶನ ನೀಡುವ ಮಹತ್ವದ ಸ್ಥಾನದಲ್ಲಿದ್ದಾರೆ. ಆದ್ದರಿಂದ ಅವರ ಸಾರ್ವಜನಿಕ ಹೇಳಿಕೆಗಳು ಸಮಾಜದಲ್ಲಿ ಏಕತೆ, ಶಾಂತಿ ಮತ್ತು ಪರಸ್ಪರ ಗೌರವವನ್ನು ಬೆಳೆಸುವಂತಿರಬೇಕು ಎಂದು ಅಭಿಪ್ರಾಯಪಟ್ಟರು.

ಯಾವುದೇ ಧರ್ಮವನ್ನು ಮತ್ತೊಂದು ಧರ್ಮಕ್ಕಿಂತ ಮೇಲು ಅಥವಾ ಕೀಳು ಎಂದು ನೋಡುವ ಬದಲು ಎಲ್ಲ ಧರ್ಮಗಳಿಗೂ ಸಮಾನ ಗೌರವ ನೀಡುವ ನಿಲುವು ಸ್ಪಷ್ಟವಾಗಬೇಕು. ಅವರವರ ಧರ್ಮ ಅವರಿಗೆ ಶ್ರೇಷ್ಠವಾಗಿದೆ ಎಂದು ಹೇಳಿದರು.

ಹಿಂದೂ ಸಂಸ್ಕೃತಿಯ ಗೌರವವನ್ನು ಎತ್ತಿಹಿಡಿಯುವುದು ಮತ್ತೊಂದು ಧರ್ಮದ ವಿರೋಧವಲ್ಲ. ಅದೇ ರೀತಿ ಇತರ ಧರ್ಮಗಳನ್ನು ಗೌರವಿಸುವುದು ಹಿಂದೂ ಸಂಸ್ಕೃತಿಯನ್ನು ಕೀಳಾಗಿ ಕಾಣುವುದೂ ಅಲ್ಲ ಎಂದು ತಿಳಿಸಿದರು. ಶ್ರೀ ಉಜ್ಜಯಿನಿ, ಶ್ರೀ ಕೇದಾರ, ಶ್ರೀಶೈಲ ಹಾಗೂ ಶ್ರೀ ಕಾಶಿ ಜಗದ್ಗುರುಗಳ ಪರವಾಗಿಯೂ ಈ ಅಭಿಪ್ರಾಯವನ್ನು ವ್ಯಕ್ತಪಡಿಸಿರುವುದಾಗಿ ಶ್ರೀ ರಂಭಾಪುರಿ ಜಗದ್ಗುರುಗಳು ತಿಳಿಸಿದ್ದಾರೆ.

ಧರ್ಮಗಳ ನಡುವೆ ಸಂಘರ್ಷವಲ್ಲ, ಸಂವಾದ ಬೇಕು. ಸಮುದಾಯಗಳ ನಡುವೆ ದ್ವೇಷವಲ್ಲ, ಪರಸ್ಪರ ಗೌರವ ಬೇಕು. ಸಚಿವರಿಂದ ವಿಭಜನೆಯ ಮಾತಲ್ಲ, ಸಮಾಜವನ್ನು ಒಗ್ಗೂಡಿಸುವ ಮಾತುಗಳನ್ನು ನಿರೀಕ್ಷಿಸುತ್ತೇವೆ.

— ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img