ಬೆಂಗಳೂರು: “ಎಸ್ಐಆರ್ ಪ್ರಕ್ರಿಯೆಗೆ ನಮ್ಮ ವಿರೋಧವಿದ್ದರೂ ಜನರ ಮತದಾನದ ಹಕ್ಕು ರಕ್ಷಣೆಗಾಗಿ ನಮ್ಮ ಸರ್ಕಾರ ಜನರಲ್ಲಿ ಜಾಗೃತಿ ಮೂಡಿಸುತ್ತಿದೆ. ಇದು ಚುನಾವಣಾ ಆಯೋಗದ ಪ್ರಕ್ರಿಯೆಯಾಗಿದ್ದು, ಇದರಲ್ಲಿ ಸರ್ಕಾರದ ಹಸ್ತಕ್ಷೇಪವಿಲ್ಲ.
ಆದರೆ ಬಡವರು ಹಾಗೂ ಅಲ್ಪಸಂಖ್ಯಾತರ ಮತದಾನದ ಹಕ್ಕು ಕಸಿಯುವುದು ವಿರೋಧ ಪಕ್ಷಗಳ ಕುತಂತ್ರ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿರುಗೇಟು ನೀಡಿದರು. ವಿಧಾನಸೌಧ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು.
ನಮ್ಮಂತೆ ಬೇರೆ ಯಾವುದೇ ರಾಜ್ಯದಲ್ಲಿ ಎಸ್ಐಆರ್ ಪ್ರಕ್ರಿಯೆಯಲ್ಲಿ ಸಹಕಾರ ನೀಡಿಲ್ಲ
ಎಸ್ ಐಆರ್ ವಿಚಾರವಾಗಿ ಕುಮಾರಸ್ವಾಮಿ ಹಾಗೂ ಪ್ರಹ್ಲಾದ್ ಜೋಷಿ ಅವರು ಮುಖ್ಯ ಚುನಾವಣಾ ಆಯುಕ್ತರಿಗೆ ದೂರು ನೀಡಿರುವ ಬಗ್ಗೆ ಕೇಳಿದಾಗ, “ಎಸ್ಐಆರ್ ವಿಚಾರದಲ್ಲಿ ನಮ್ಮದೇ ಆದ ಭಿನ್ನಾಭಿಪ್ರಾಯವಿದೆ. ನಾವು ಕೋರ್ಟ್ ನಲ್ಲಿ ನಮ್ಮ ವಾದ ಸಲ್ಲಿಸಿದ್ದು, ನ್ಯಾಯಾಲಯ ಈ ವಿಚಾರವಾಗಿ ತೀರ್ಪು ನೀಡಿದ್ದಾರೆ. ಈ ಪ್ರಕ್ರಿಯೆ ವೇಳಾಪಟ್ಟಿ ಬಗ್ಗೆ ನಮಗೆ ಅಸಮಾಧಾನವಿದ್ದು,
ಅದರ ವಿರುದ್ಧವೂ ಕೋರ್ಟ್ ಮೊರೆ ಹೋಗುತ್ತೇವೆ. ನಾವು ಎಲ್ಲರಿಗೂ ಮತದಾನದ ಹಕ್ಕು ರಕ್ಷಣೆ ಮಾಡಬೇಕು ಎಂದು ನಮ್ಮ ಸರ್ಕಾರ ಚುನಾವಣಾ ಆಯೋಗದ ಜೊತೆ ಕೈ ಜೋಡಿಸಿದೆ. ನಮ್ಮಂತೆ ಬೇರೆ ಯಾವುದೇ ರಾಜ್ಯದಲ್ಲಿ ಈ ರೀತಿ ಸಹಕಾರ ನೀಡಿಲ್ಲ. ನಿಮ್ಮ ಮತದಾನದ ಹಕ್ಕು, ಬದುಕಿನ ಹಕ್ಕು ಎಂದು ಹೇಳುವ ಮೂಲಕ ಜನರಿಗೆ ಮತದಾನದ ಹಕ್ಕು ಉಳಿಸಿಕೊಳ್ಳಲು ಸರ್ಕಾರ ಜಾಗೃತಿ ಮೂಡಿಸುತ್ತಿದ್ದೇವೆ” ಎಂದು ವಿವರಿಸಿದರು.
ಜನರಲ್ಲಿ ಜಾಗೃತಿ ಮೂಡಿಸುತ್ತಿರುವುದನ್ನು ನೋಡಿ ವಿರೋಧ ಪಕ್ಷಗಳಿಗೆ ಭಯ
“ಎಲ್ಲಾ ಪಕ್ಷದವರು ಬಿಎಲ್ಎ2 ನೇಮಕ ಮಾಡಲು ಚುನಾವಣಾ ಆಯೋಗವೇ ಅವಕಾಶ ನೀಡಿದೆ. ಕಾಂಗ್ರೆಸ್, ಬಿಜೆಪಿ ಹಾಗೂ ಜನತಾದಳದವರು ಬಿಎಲ್ಎ ನೇಮಕ ಮಾಡಿದ್ದಾರೆ. ಸಂಘ ಸಂಸ್ಥೆಗಳು ನೆರವು ನೀಡಲು ಅವಕಾಶ ಕಲ್ಪಿಸಲಾಗಿದೆ. ಅಧಿಕಾರಿಗಳು ತಮಗೆ ಆಯೋಗದಿಂದ ಬಂದಿರುವ ಮಾರ್ಗದರ್ಶನದಂತೆ ಕಾರ್ಯನಿರ್ವಹಿಸುತ್ತಿದ್ದಾರೆ.
ಸರ್ಕಾರ ಜನರಲ್ಲಿ ಜಾಗೃತಿ ಮೂಡಿಸುತ್ತಿರುವುದನ್ನು ನೋಡಿ ವಿರೋಧ ಪಕ್ಷಗಳಿಗೆ ಭಯ ಶುರುವಾಗಿದೆ. ಚುನಾವಣಾ ಆಯೋಗದ ಮೇಲೆ ಅವರಿಗೇ ನಂಬಿಕೆ ಇಲ್ಲ ಎಂದು ಅವರು ವ್ಯಕ್ತಪಡಿಸುತ್ತಿದ್ದಾರೆ. ಇದನ್ನು ರದ್ದು ಮಾಡಲು ಹೇಳುತ್ತಿದ್ದಾರೆ. ಇದು ಚುನಾವಣಾ ಆಯೋಗಕ್ಕೆ ಬಿಟ್ಟ ವಿಚಾರ” ಎಂದು ತಿಳಿಸಿದರು.
ಅವರು ಅಧಿಕಾರದಲ್ಲಿದ್ದಾಗ ಅಕ್ರಮ ವಲಸಿಗರನ್ನು ಯಾಕೆ ಓಡಿಸಲಿಲ್ಲ?
“ರಾಜ್ಯದಲ್ಲಿ ಸುಮಾರು 4.50 ಕೋಟಿ ಜನ ಜಾತಿ ಪ್ರಮಾಣಪತ್ರ ತೆಗೆದುಕೊಂಡಿದ್ದಾರೆ. ಇದನ್ನು ಆನ್ ಲೈನ್ ನಲ್ಲಿ ಡೌನ್ ಲೋಡ್ ಮಾಡಿಕೊಳ್ಳಲು ಅವಕಾಶ ಕಲ್ಪಿಸಿದ್ದೇವೆ. ಇನ್ನು ನಿವಾಸ ದೃಢೀಕರಣ ಪತ್ರ ನೀಡಲು ಉಪ ತಹಶೀಲ್ದಾರ್ ಅವರಿಗೆ ಅಧಿಕಾರ ನೀಡಲಾಗಿದೆ.
2002ನೇ ಮತಪತ್ರ ದಾಖಲೆ ಯಾರ ಬಳಿಯೂ ಇರುವುದಿಲ್ಲ. ಇದನ್ನು ಡೌನ್ ಲೋಡ್ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ. ಸರ್ಕಾರ ಕರ್ನಾಟಕ ಜನರ ಮತದಾನದ ಹಕ್ಕು ಉಳಿಸಿಕೊಳ್ಳಲು ಕರೆ ನೀಡುತ್ತಿದೆ. ವಿರೋಧ ಪಕ್ಷಗಳು ಸುಮ್ಮನೆ ಅಕ್ರಮ ಬಾಂಗ್ಲಾ ವಲಸಿಗರು ಎಂದು ಹೇಳುತ್ತಿದ್ದಾರೆ. ನಿಮ್ಮ ಕೈಯಲ್ಲಿ ಅಧಿಕಾರ ಇದ್ದಾಗ ಯಾಕೆ ಅವರನ್ನು ಓಡಿಸಲಿಲ್ಲ? ಆಗ ಯಾರು ತಡೆದಿದ್ದರು?” ಎಂದು ಪ್ರಶ್ನಿಸಿದರು.
ರಾಜಕೀಯ ಮಾಡುವವರು, ಟೀಕೆ ಮಾಡುವವರನ್ನು ಬೇಡ ಎನ್ನಲು ಸಾಧ್ಯವೇ?
“ಮನಮೋಹನ್ ಸಿಂಗ್ ಅವರು ದೇಶದ ಜನರಿಗಾಗಿ ಆಹಾರ ಭದ್ರತಾ ಕಾಯ್ದೆ ಜಾರಿಗೆ ತಂದರು. ಬಿಜೆಪಿಯವರು ಪಶ್ಚಿಮ ಬಂಗಾಳ ಹಾಗೂ ಬಿಹಾರದಲ್ಲಿ ಮತದಾನದ ಹಕ್ಕು ಇಲ್ಲದವರಿಗೆ ಆಹಾರ ಪೂರೈಕೆ ಮಾಡುವುದಿಲ್ಲ ಎಂದು ಆದೇಶ ಹೊರಡಿಸಿದ್ದಾರೆ. ನಾವು ಬೆಲೆ ಏರಿಕೆಯಿಂದ ತತ್ತರಿಸಿರುವ ಜನರಿಗೆ ಆಸರೆಯಾಗಲಿ ಎಂದು ಐದು ಗ್ಯಾರಂಟಿ ಯೋಜನೆ ನೀಡಲಾಗಿದೆ.
ನಮ್ಮ ಯೋಜನೆಯನ್ನು ಬಿಜೆಪಿಯವರು ಬೇರೆ ರಾಜ್ಯಗಳಲ್ಲಿ ಕೆಲಸ ಮಾಡಿದ್ದಾರೆ. ಚುನಾವಣೆಗೂ ಮುನ್ನ ಐದರಿಂದ ಹತ್ತು ತಿಂಗಳ ಹಣವನ್ನು ಹಾಕುತ್ತಿದ್ದಾರೆ. ಇದು ನನ್ನ ವೈಯಕ್ತಿಕ ವಿಚಾರವಲ್ಲ. ಮೊದಲ ಬಾರಿಗೆ ಪ್ರತಿ ಬೂತ್ ನಲ್ಲಿ ಜನರಿಗಾಗಿ ಸಹಾಯ ಕೇಂದ್ರ ಸ್ಥಾಪಿಸಲಾಗಿದೆ. ನಮ್ಮ ಕಾರ್ಯಕ್ಕೆ ಅವರು ಅಭಿನಂದನೆ ಸಲ್ಲಿಸಬೇಕು. ಬರಲಿ ತನಿಖೆ ಮಾಡಲಿ.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬಿಎಲ್ಎ ನೇಮಕಾತಿಗೆ ಅವಕಾಶವಿದೆ. ಶಾಸಕರು, ಪರಾಜಿತ ಅಭ್ಯರ್ಥಿಗಳಿಗೆ ಮತಪಟ್ಟಿ ರಕ್ಷಣೆ ಬಗ್ಗೆ ಮಾರ್ಗದರ್ಶನ ನೀಡುವುದು ನಮ್ಮ ಕರ್ತವ್ಯವಲ್ಲವೇ? ರಾಜಕಾರಣ ಮಾಡುವವರಿಗೆ, ಟೀಕೆ ಮಾಡುವವರಿಗೆ ಬೇಡ ಎನ್ನಲು ಸಾಧ್ಯವೇ? ಎಲುಬಿಲ್ಲದ ನಾಲಿಗೆ. ಅವರ ಟೀಕೆಗಳು ಸಾಯುತ್ತವೆ, ನಮ್ಮ ಕೆಲಸಗಳು ಉಳಿಯುತ್ತವೆ. ರಾಜ್ಯದ ಜನರಿಗೆ ಮತದಾನದ ಹಕ್ಕು ನೀಡುವುದು ನಮ್ಮ ಸರ್ಕಾರದ ಗುರಿ. ಈ ಪ್ರಕ್ರಿಯೆಗೆ ನಮ್ಮ ವಿರೋಧವಿದ್ದರೂ ಜನರ ಹಕ್ಕು ರಕ್ಷಣೆಗೆ ನಾವು ಕೆಲಸ ಮಾಡುತ್ತಿದ್ದೇವೆ” ಎಂದು ತಿರುಗೇಟು ನೀಡಿದರು.
“ನಾನು ಪರಮೇಶ್ವರ್ ಅವರು ಬೀದರ್ ಗೆ ಹೋಗುತಿದ್ದು, ಬಸವಣ್ಣನವರ ಅನುಭವ ಮಂಟಪಕ್ಕೆ ಹೋಗುತ್ತಿದ್ದು, ಕಲಬುರ್ಗಿ ವಿಭಾಗದಲ್ಲಿ ಮಳೆ ಕೊರತೆ ಪರಿಸ್ಥಿತಿ ಪರಿಶೀಲನೆ ಮಾಡಲಿದ್ದೇವೆ. ರಾಜ್ಯದ ಕೆಲವು ಭಾಗಗಳಲ್ಲಿ ಈಗ ಮಳೆ ಸುಧಾರಣೆ ಕಾಣುತ್ತಿದೆ. ಆಲಮಟ್ಟಿ ಹಾಗೂ ತುಂಗಭದ್ರಾ ಅಣೆಕಟ್ಟಿನ ಒಳಹರಿವು ಬರುತ್ತಿದೆ. ಕುಡಿಯುವ ನೀರಿಗೆ ಆದ್ಯತೆ ನೀಡುವ ಕೆಲಸ ಮಾಡುತ್ತೇವೆ” ಎಂದು ಹೇಳಿದರು.



