ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಸಮೀಪದ ಮಾರಪ್ಪನಪಾಳ್ಯದಲ್ಲಿ ನರ್ಸಿಂಗ್ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಬೆಳಕಿಗೆ ಬಂದಿದೆ. ಘಟನೆ ನಡೆದ ಮೂರು ದಿನಗಳ ಬಳಿಕ ಮನೆಯ ಮೇಲ್ಮಹಡಿಯ ಕೊಠಡಿಯಿಂದ ದುರ್ವಾಸನೆ ಬರುತ್ತಿದ್ದ ಹಿನ್ನೆಲೆ ಪರಿಶೀಲನೆ ನಡೆಸಿದ ಕುಟುಂಬಸ್ಥರಿಗೆ ವಿದ್ಯಾರ್ಥಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಮೃತರನ್ನು 20 ವರ್ಷದ ಉದಯ್ ಎಂದು ಗುರುತಿಸಲಾಗಿದೆ. ಅವರು ಬೆಂಗಳೂರಿನ ಕೆಸಿ ಜನರಲ್ ಆಸ್ಪತ್ರೆಯಲ್ಲಿ ಪ್ಯಾರಾ ಮೆಡಿಕಲ್ ವ್ಯಾಸಂಗ ಮಾಡುತ್ತಿದ್ದು, ವಿದ್ಯಾಭ್ಯಾಸದ ಜೊತೆಗೆ ಬಾಟಾ ಶೋರೂಂನಲ್ಲಿ ಪಾರ್ಟ್ಟೈಂ ಉದ್ಯೋಗವೂ ಮಾಡುತ್ತಿದ್ದರು. ಮಗನ ಅನುಕೂಲಕ್ಕಾಗಿ ಪೋಷಕರಾದ ಸುರೇಶ್ ಹಾಗೂ ಪ್ರೇಮಲತಾ ದಂಪತಿ ಮನೆಯ ಮೇಲ್ಮಹಡಿಯಲ್ಲಿ ಪ್ರತ್ಯೇಕ ಕೊಠಡಿ ನಿರ್ಮಿಸಿಕೊಟ್ಟಿದ್ದರು.
ಆದರೆ ಇದೇ ಕೊಠಡಿಯಲ್ಲಿ ಉದಯ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮೂರು ದಿನಗಳ ಕಾಲ ಯಾರಿಗೂ ಈ ಘಟನೆ ಗೊತ್ತಾಗಿರಲಿಲ್ಲ. ಬಳಿಕ ಕೊಠಡಿಯಿಂದ ದುರ್ವಾಸನೆ ಬರುತ್ತಿದ್ದುದನ್ನು ಗಮನಿಸಿದ ಕುಟುಂಬಸ್ಥರು ಪರಿಶೀಲಿಸಿದಾಗ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ ಉದಯ್ ಆನ್ಲೈನ್ ಗೇಮಿಂಗ್ ಚಟಕ್ಕೆ ಒಳಗಾಗಿದ್ದ ಎನ್ನಲಾಗಿದೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣ ಏನು ಎಂಬುದು ಇನ್ನಷ್ಟೇ ತನಿಖೆಯಿಂದ ಸ್ಪಷ್ಟವಾಗಬೇಕಿದೆ. ಮಾಹಿತಿ ಪಡೆದ ಮಾದನಾಯಕನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ನೆಲಮಂಗಲ ಶವಗಾರಕ್ಕೆ ರವಾನಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ.



