ವಿಜಯಸಾಕ್ಷಿ ಸುದ್ದಿ, ಮುಂಡರಗಿ: ಗದಗ ಜಿಲ್ಲೆಯಲ್ಲಿ ಮಳೆ ಕೊರತೆ ಹಾಗೂ ಬೆಳೆ ಹಾನಿಯಿಂದ ಉಂಟಾಗಿರುವ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಅಧಿಕಾರಿಗಳು ಈಗಿನಿಂದಲೇ ಅಗತ್ಯ ಸಿದ್ಧತೆ ಕೈಗೊಂಡು ಹೆಚ್ಚು ಕ್ರಿಯಾಶೀಲತೆಯಿಂದ ಕೆಲಸ ನಿರ್ವಹಿಸಬೇಕು ಎಂದು ಸಂಪುಟ ದರ್ಜೆ ಸಚಿವ ಬಸವರಾಜ ರಾಯರೆಡ್ಡಿ ಸೂಚಿಸಿದರು.
ತಾಲೂಕು ಕಚೇರಿಯಲ್ಲಿ ಶುಕ್ರವಾರ ನಡೆದ ಬರ ಪರಿಸ್ಥಿತಿ ಅವಲೋಕನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬರ ನಿರ್ವಹಣೆಯನ್ನು ಕೇವಲ ಕಾಗದದ ವರದಿಗಳಿಗೆ ಸೀಮಿತಗೊಳಿಸದೆ, ಗ್ರಾಮಗಳಿಗೆ ತೆರಳಿ ರೈತರ ಜಮೀನುಗಳಲ್ಲಿ ವಾಸ್ತವ ಸ್ಥಿತಿ ಪರಿಶೀಲಿಸಿ ವರದಿ ಸಲ್ಲಿಸಬೇಕು ಎಂದು ತಾಕೀತು ಮಾಡಿದರು.
ಇದಕ್ಕೂ ಮುನ್ನ ಮೇವುಂಡಿ ಗ್ರಾಮಕ್ಕೆ ಭೇಟಿ ನೀಡಿ ಮೆಣಸಿನಕಾಯಿ, ಈರುಳ್ಳಿ ಹಾಗೂ ಮೆಕ್ಕೆಜೋಳ ಬೆಳೆಗಳ ಸ್ಥಿತಿಯನ್ನು ವೀಕ್ಷಿಸಿದ ಸಚಿವರು, ರೈತರೊಂದಿಗೆ ಸಮಾಲೋಚನೆ ನಡೆಸಿ ಸಮಸ್ಯೆಗಳನ್ನು ಆಲಿಸಿದರು.
ಪ್ರಸ್ತುತ ಲಭ್ಯವಿರುವ ಅಂಕಿ-ಅಂಶಗಳ ಪ್ರಕಾರ ಗದಗ ಜಿಲ್ಲೆಯನ್ನು ಎನ್ಡಿಆರ್ಎಫ್ ಮಾರ್ಗಸೂಚಿಯಂತೆ ಬರಪೀಡಿತ ಜಿಲ್ಲೆ ಎಂದು ಘೋಷಿಸುವ ಸಾಧ್ಯತೆಗಳಿದ್ದು, ಅಂತಿಮ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಅಧಿಕಾರಿಗಳ ವರದಿಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಸಚಿವರು, “ಬಿತ್ತನೆ ಗುರಿ” ಮತ್ತು “ಸಾಧನೆ” ಎಂಬ ಪದಗಳ ಬದಲಿಗೆ “ವಾಡಿಕೆ ಬಿತ್ತನೆ” ಹಾಗೂ “ವಾಡಿಕೆಗೆ ಹೋಲಿಸಿದ ಬಿತ್ತನೆ” ಎಂಬ ಪದಗಳನ್ನು ಬಳಸುವಂತೆ ಸೂಚಿಸಿದರು.
ಕುಡಿಯುವ ನೀರಿನ ಸಮಸ್ಯೆ, ಮೇವು ಸಂಗ್ರಹ, ಬೆಳೆ ವಿಮೆ ಹಾಗೂ ಬೆಳೆ ಹಾನಿ ಸಮೀಕ್ಷೆಯಲ್ಲಿ ಯಾವುದೇ ನಿರ್ಲಕ್ಷ್ಯ ಇರಬಾರದು. ಅರ್ಹ ರೈತರಿಗೆ ಗರಿಷ್ಠ ಪ್ರಮಾಣದಲ್ಲಿ ಪರಿಹಾರ ದೊರಕುವಂತೆ ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದರು.
“ಬರವನ್ನು ಕಾಗದದ ವರದಿಯಿಂದ ಅಂದಾಜಿಸಬೇಡಿ, ಗ್ರಾಮಗಳಿಗೆ ತೆರಳಿ ರೈತರ ಸಮಸ್ಯೆ ಅರಿತು ತುರ್ತು ಕ್ರಮ ಕೈಗೊಳ್ಳಿ.”
– ಬಸವರಾಜ ರಾಯರೆಡ್ಡಿ, ಉಸ್ತುವಾರಿ ಸಚಿವ



