ವಿಜಯಸಾಕ್ಷಿ ಸುದ್ದಿ, ಹರಿಹರ: ಮಾನವೀಯ ಸಂಬಂಧಗಳು ಗಟ್ಟಿಗೊಳ್ಳಲು ಹೃದಯ ಶ್ರೀಮಂತಿಕೆ ಬೇಕು. ನಿಜವಾದ ಆಧ್ಯಾತ್ಮ ಅರಿವಿನಿಂದ ಬದುಕಿಗೆ ಶಾಂತಿ ದೊರಕುವುದೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.
ಅವರು ನಗರದ ಶ್ರೀ ಜಗದ್ಗುರು ರೇಣುಕಾಚಾರ್ಯ ಮಂದಿರ ಹಳೇಪೇಟೆ ಶ್ರೀ ಬಸವೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಜರುಗಿದ ಧರ್ಮ ಜಾಗೃತಿ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು.
ನಮಗಾಗಿ ಹೇಗೆ ಸುಖ-ಸಂತೋಷ ಬಯಸುತ್ತೇವೆಯೋ ಅದೇ ರೀತಿ ಇತರರಿಗಾಗಿ ಬಯಸುವುದು ನಿಜವಾದ ಧರ್ಮ. ಒಳ್ಳೆಯ ಹೆಸರು ಹಣಕ್ಕಿಂತಲೂ ಹೆಚ್ಚು ಬೆಲೆ ಬಾಳುವಂತಹುದು. ಸುಳ್ಳು ಹೇಳಲು ಹಲವು ದಾರಿ. ಸತ್ಯಕ್ಕೆ ಇರುವುದೊಂದೇ ದಾರಿ. ಮುಳ್ಳಿನ ನಡುವೆ ಗುಲಾಬಿ ಹೂ ಸುಗಂಧ ಬೀರುವ ಹಾಗೆ, ಕಷ್ಟಗಳ ನಡುವೆ ಬಾಳಿ ಬದುಕಿದರೂ ಆದರ್ಶಗಳನ್ನು ಬಿಡಬಾರದು. ಕೈಲಾಸಕ್ಕಿಂತ ಕಾಯಕ, ಧರ್ಮಕ್ಕಿಂತ ದಯೆ, ಅರಿವಿಗಿಂತ ಆಚಾರ, ಅಧಿಕಾರಕ್ಕಿಂತ ಅಭಿಮಾನ, ಭೌತಿಕ ಆಸ್ತಿಗಿಂತ ಆರೋಗ್ಯ, ಮಾನ-ಸನ್ಮಾನಕ್ಕಿಂತ ಸಂಸ್ಕಾರ, ಸಂಸ್ಕೃತಿ ಅತ್ಯಂತ ಮುಖ್ಯ. ಹೃದಯ ಹೃದ್ಭೂಮಿ ಕೃಷಿಗೈದು, ಶಿವಜ್ಞಾನವೆಂಬ ಬೀಜ ಬಿತ್ತಿ ಸಂಸ್ಕಾರ ನೀಡುವಾತನೇ ನಿಜವಾದ ಗುರು ಎಂದರು.
ಹರಿಹರ ಶಾಸಕ ಬಿ.ಪಿ. ಹರೀಶ್ ಮಾತನಾಡಿ, ಭೌತಿಕ ಬದುಕು ಸದೃಢಗೊಳ್ಳಲು ಧರ್ಮದ ಆಚರಣೆ ಮುಖ್ಯ. ಜೀವನದ ಜಂಜಡದಲ್ಲಿ ಸಿಲುಕಿರುವ ಮನುಷ್ಯನಿಗೆ ಗುರು-ಹಿರಿಯರ ಆಶೀರ್ವಾದ ಅವಶ್ಯಕ. ಮನುಷ್ಯನಿಗೆ ಹೆತ್ತ ತಾಯಿ, ಹೊತ್ತ ನೆಲ ಎಷ್ಟು ಮುಖ್ಯವೋ ಅಷ್ಟೇ ಧರ್ಮವೂ ಮುಖ್ಯವೆಂದರು.
ಹಂಪಸಾಗರದ ಅಭಿನವ ಶಿವಲಿಂಗ ರುದ್ರಮುನಿ ಶಿವಾಚಾರ್ಯ ಸ್ವಾಮಿಗಳು ಉಪಸ್ಥಿತರಿದ್ದರು. ಹರಿಹರ ಕ್ಷೇತ್ರದ ಶಾಸಕರಾದ ಬಿ.ಪಿ. ಹರೀಶ್ ಅವರಿಗೆ ‘ಧರ್ಮಸೇವಾ ವಿಭೂಷಣ’ ಪ್ರಶಸ್ತಿಯನ್ನು ಶ್ರೀ ರಂಭಾಪುರಿ ಜಗದ್ಗುರುಗಳು ಪ್ರದಾನ ಮಾಡಿದರು. ಸಮಾರಂಭದಲ್ಲಿ ಹರಿಹರದ ಮಾಜಿ ಶಾಸಕ ಹೆಚ್.ಎಸ್. ಶಿವಶಂಕರ್, ಮಲೆಬೆನ್ನೂರಿನ ಶ್ರೀ ವೀರಭದ್ರೇಶ್ವರ ಟ್ರಸ್ಟಿನ ಅಧ್ಯಕ್ಷ ಚಿದಾನಂದಪ್ಪ, ಹರಿಹರದ ತಹಸೀಲ್ದಾರ್ ಕೆ.ಎಂ. ಗುರುಬಸವರಾಜ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು.
ಪಟೇಲ್ ಬಸವರಾಜಪ್ಪ, ಗಜಾಪುರದ ವೀರಯ್ಯ ಗುತ್ತೂರು, ಮಲ್ಲಜ್ಜರ ವಿರೂಪಾಕ್ಷಪ್ಪ, ಎನ್.ಹೆಚ್. ಪಾಟೀಲ, ವೀರೇಶ ಮೊದಲಾದ ಗಣ್ಯರಿಗೆ ಮತ್ತು ದಾನಿಗಳಿಗೆ ಶ್ರೀ ರಂಭಾಪುರಿ ಜಗದ್ಗುರುಗಳು ಗುರುರಕ್ಷೆಯಿತ್ತು ಶುಭ ಹಾರೈಸಿದರು. ಗೌರಿಶ್ರೀ, ಕೊಂಡಜ್ಜಿ ಶಾಂಭವಿ, ತೇಜಶ್ರೀ ಭರತ ನಾಟ್ಯ ಮಾಡಿದರು. ಶಾಂತಕುಮಾರಿ ಸ್ವಾಗತಿಸಿದರು. ಗುರು ಬಸವರಾಜ ಮತ್ತು ಡಾ. ಶ್ವೇತಾ ನಿರೂಪಿಸಿದರು. ಕಾಂತರಾಜ ಮತ್ತು ವೀರೇಶ್ ಇವರಿಂದ ಸಂಗೀತ ಜರುಗಿತು. ಸುಲಫಲಮಠದ ಲಿಂ. ಶಾಂತಮ್ಮ-ಪAಚಾಕ್ಷರಯ್ಯನವರ ಸ್ಮರಣಾರ್ಥ ಅವರ ಮಕ್ಕಳು ಅನ್ನ ದಾಸೋಹ ಸೇವೆ ಸಲ್ಲಿಸಿದರು.
ಹರಪನಹಳ್ಳಿ ತಗ್ಗಿನಮಠ ಸಂಸ್ಥಾನದ ವರಸದ್ಯೋಜಾತ ಶಿವಾಚಾರ್ಯ ಸ್ವಾಮಿಗಳು ನೇತೃತ್ವ ವಹಿಸಿ ಮಾತನಾಡಿ, ಸಕಲ ಜೀವಾತ್ಮರಿಗೆ ಲೇಸನ್ನೇ ಬಯಸಿದ ವೀರಶೈವ ಧರ್ಮ ಗಂಡು-ಹೆಣ್ಣು, ಮೇಲು-ಕೀಳು, ಬಡವ-ಬಲ್ಲಿದ ಎನ್ನದೆ ಎಲ್ಲರಿಗೂ ಸಂಸ್ಕಾರ ಕೊಟ್ಟ ಶ್ರೇಯಸ್ಸು ಈ ಧರ್ಮಕ್ಕೆ ಇದೆ. ಶ್ರೀ ಜಗದ್ಗುರು ರೇಣುಕಾಚಾರ್ಯರ ಧಾರ್ಮಿಕ ಮತ್ತು ಸಾಮಾಜಿಕ ಸಂತ್ಕಾçAತಿ ಎಲ್ಲ ಕ್ರಾಂತಿಗಳಿಗೆ ಮೂಲ ಗಂಗೋತ್ರಿ ಎಂದರು.



