ವಿಜಯಸಾಕ್ಷಿ ಸುದ್ದಿ, ಗದಗ: ನಿರಂತರವಾಗಿ ಸುರಿಯುತ್ತಿರುವ ಮಳೆಯ ನಡುವೆಯೂ ಆಶಾ ಕಾರ್ಯಕರ್ತೆಯರು 10 ಸಾವಿರ ರೂ ಪ್ರೋತ್ಸಾಹ ಧನ, ಬಾಕಿ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಗರದ ಗಾಂಧಿ ವೃತದಲ್ಲಿ ಹೋರಾಟ ಮುಂದುವರೆಸಿದ್ದು, ಪ್ರತಿಭಟನೆ ವೇಳೆ ಶಾಮಿಯಾನ ಹಾಕಲು ಪೊಲೀಸರು ಅವಕಾಶ ನೀಡಿಲ್ಲ ಎಂದು ಆಕ್ರೋಶವನ್ನು ಹೊರ ಹಾಕಿದರು.
ಆಶಾ ಕಾರ್ಯಕರ್ತೆಯರಿಗೆ ಮೊದಲು ತರಬೇತಿ ನೀಡಿ ಕೆಲಸಕ್ಕೆ ಸೇರಿಸಿಕೊಳ್ಳುತ್ತಾರೆ. ತರಬೇತಿ ನಂತರವೂ ವಿದ್ಯಾರ್ಹತೆ ಎಂಬ ಮಾನದಂಡ ಹೇರಿ ಕೆಲಸದಿಂದ ವಜಾಗೊಳಿಸುವ ಹುನ್ನಾರ ನಡೆದಿದೆ. ಯಾವುದೇ ಆಶಾ ಕಾರ್ಯಕರ್ತೆಯರನ್ನು ತೆಗೆದು ಹಾಕಬಾರದು. ಪ್ರತಿ ತಿಂಗಳ ಪ್ರೋತ್ಸಾಹಧನವನ್ನು 10 ಸಾವಿರ ರೂಗಳಿಗೆ ಹೆಚ್ಚಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಈ ವೇಳೆ ಮಾತನಾಡಿದ ಜಿಲ್ಲಾ ಸಂಚಾಲಕ ಸುರೇಶ್ ಜಿ, ಆಶಾ ಕಾರ್ಯಕರ್ತೆಯರು 17 ವರ್ಷಗಳಿಂದ ತಳ ಹಂತದಲ್ಲಿ ಕೆಲಸ ಮಾಡುತ್ತಿದ್ದಾರೆ. ರಾಷ್ಟ್ರೀಯ ಆರೋಗ್ಯ ಯೋಜನೆಯಡಿಯಲ್ಲಿ ಸೇವೆಯನ್ನು ಗ್ರಾಮಿಣ ಭಾಗದಲ್ಲಿ ಮಾಡುತ್ತಿದ್ದಾರೆ. ಆಶಾ ಕಾರ್ಯಕರ್ತೆಯರ ಹಗಲು-ರಾತ್ರಿ ಸೇವೆಯಿಂದ ಶಿಶು ಮರಣ, ತಾಯಿ ಮರಣದ ಪ್ರಮಾಣದಲ್ಲಿ ಗಣನೀಯ ಇಳಿಕೆ ಆಗಿದೆ ಎಂದು ಹೇಳಿದರು.
ಕೊರೋನಾ ಸಮಯದಲ್ಲಿ ಮೊದಲ ಸಾಲಿನ ಯೋಧರಾಗಿ ಆಶಾ ಕಾರ್ಯಕರ್ತೆಯರು ಕೆಲಸ ಮಾಡಿದ್ದಾರೆ. ಮನೆ-ಮನೆಗೆ ತೆರಳಿ ಅರಿವು ಮೂಡಿಸುವ ಕೆಲಸ ಮಾಡಿದ್ದಾರೆ. ಇಂತಹ ಆಶಾ ಕಾರ್ಯಕರ್ತೆಯರ ಗೋಳನ್ನು ಯಾವ ಸರ್ಕಾರವೂ ಕೇಳುತ್ತಿಲ್ಲ. ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್ ಹಾಗೂ ಅಧಿಕಾರ ನಡೆಸಿರುವ ಜೆಡಿಎಸ್ ಹಾಗೂ ಬಿಜೆಪಿ ಪಕ್ಷಗಳು ನಮ್ಮ ಸಮಸ್ಯೆ ಆಲಿಸುವ ಪ್ರಯತ್ನ ಮಾಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಈಗ ಕೇವಲ 5 ಸಾವಿರ ರೂ ಪ್ರೋತ್ಸಾಹ ಧನ ನೀಡುತ್ತಿದ್ದಾರೆ. ಇದನ್ನು 15 ಸಾವಿರ ರೂಗಳಿಗೆ ಹೆಚ್ಚಿಸುವಂತೆ ಬೆಂಗಳೂರಿನಲ್ಲಿ ಅಹೋರಾತ್ರಿ ಧರಣಿ ಮಾಡಿದಾಗ, 10 ಸಾವಿರ ರೂ ನೀಡುವುದಾಗಿ ಸಿಎಂ ಭರವಸೆ ನೀಡಿದರು. ಆದರೆ, ಅದು ಭರವಸೆಯಾಗಿಯೇ ಉಳಿದಿದೆ. ಸಿಎಂ ಸಿದ್ದರಾಮಯ್ಯ ಸುಳ್ಳು ಹೇಳಿ ನಮ್ಮನ್ನು ಪ್ರತಿಭಟನೆಯಿಂದ ಹಿಂದೆ ಸರಿಯುವಂತೆ ಮಾಡಿದರು. ಸದ್ಯ ಸೇವೆ ಮಾಡುತ್ತಿರುವ ಕಾರ್ಯಕರ್ತೆಯರನ್ನು ಕೆಲಸದಿಂದ ತಗೆಯುವ ಹುನ್ನಾರ ನಡೆದಿದೆ ಎಂದು ಆರೋಪಿಸಿದರು.
ಪ್ರತಿಭಟನೆಯಲ್ಲಿ ಭಾಗ್ಯಜ್ಯೋತಿ, ಲಕ್ಷ್ಮೀ ಪೂಜಾರ, ಗೌರಮ್ಮ ಕಟ್ಟಿಮನಿ, ಪ್ರೇಮಾ ಪಾಟೀಲ, ರಮಿಜಾ ಹಾವೇರಿ, ಸುಮಂಗಲಾ ತಳವಾರ, ಮಂಜುಳಾ ಹೊಸೂರ, ಅನ್ನಪೂರ್ಣ ಖಾಟವಾ, ಗೀತಾ ಭಜಂತ್ರಿ, ಶಾಹಿನ್ ಅಲ್ಮಾಸ್ ಸೇರಿದಂತೆ 200ಕ್ಕೂ ಹೆಚ್ಚು ಕಾರ್ಯಕರ್ತೆಯರು ಭಾಗವಹಿಸಿದ್ದರು.
ಆಶಾ ಕಾರ್ಯಕರ್ತೆಯರಿಗೆ ವಿವಿಧ ಹೆಸರಲ್ಲಿ ಶೋಷಣೆ ಮಾಡಲಾಗುತ್ತಿದೆ. ಆಶಾ ಕಾರ್ಯಕರ್ತೆಯರು 17 ವರ್ಷಗಳಿಂದ ತರಬೇತಿ ಪಡೆದು ನುರಿತ ತಜ್ಞರಂತೆ ಕೆಲಸ ಮಾಡುತ್ತಿದ್ದಾರೆ. ಮೌಲ್ಯಮಾಪನ, ಶಿಕ್ಷಣದ ಹೆಸರಿನಲ್ಲಿ ಕಾರ್ಯಕರ್ತೆಯರನ್ನು ಕೈಬಿಡುವ ಕೆಲಸ ಮಾಡಲಾಗುತ್ತಿದೆ. 60 ವರ್ಷ ಆದವರನ್ನು ಏಕಾಏಕಿ ಕೆಲಸದಿಂದ ಕೈಬಿಡಲಾಗಿದೆ. ಕೈಬಿಡುವ ಮುನ್ನ ಇಡಿಗಂಟು ನೀಡಬೇಕು ಎಂದು ಪ್ರತಿಭಟನಾಕಾರರು ಸರ್ಕಾರವನ್ನು ಒತ್ತಾಯಿಸಿದರು.



