ಬೆಂಗಳೂರು: ಗೋವಿಂದರಾಜನಗರ ಕ್ಷೇತ್ರದ ಶಾಸಕ ಪ್ರಿಯಾಕೃಷ್ಣ ಅವರಿಗೆ ಸಚಿವ ಸ್ಥಾನ ನೀಡದಿರುವುದನ್ನು ವಿರೋಧಿಸಿ ಬೆಂಬಲಿಗರು ಹಾಗೂ ಮಾಜಿ ಶಾಸಕ ಎಂ. ಕೃಷ್ಣಪ್ಪ ಅಭಿಮಾನಿಗಳು ಬೆಂಗಳೂರಿನಲ್ಲಿ ಭಾರೀ ಪ್ರತಿಭಟನೆ ನಡೆಸಿದ್ದಾರೆ. ನಾಗರಭಾವಿಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಕಾರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಕಾರ್ಯಕರ್ತರು, ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಚಿವ ಸಂಪುಟ ವಿಸ್ತರಣೆಗೆ ಅನುಮತಿ ದೊರೆತ ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಾಗರಭಾವಿಯ ಅಜ್ಜಯ್ಯನ ಶಾಖಾ ಮಠಕ್ಕೆ ಭೇಟಿ ನೀಡಿದ್ದರು. ಈ ವೇಳೆ ರಸ್ತೆಯಲ್ಲಿ ಜಮಾಯಿಸಿದ್ದ ಕಾರ್ಯಕರ್ತರು ಸಿಎಂ ಕಾರನ್ನು ತಡೆಯಲು ಮುಂದಾಗಿದ್ದಾರೆ.
ಪರಿಸ್ಥಿತಿ ಉದ್ವಿಗ್ನವಾಗುತ್ತಿದ್ದಂತೆ ಭದ್ರತಾ ಸಿಬ್ಬಂದಿ ಎಚ್ಚರಿಕೆ ವಹಿಸಿದ್ದು, ಮುಖ್ಯಮಂತ್ರಿ ಕಾರು ಯು-ಟರ್ನ್ ಪಡೆದು ಹಿಂತಿರುಗಿದೆ. ಆದರೂ ಆಕ್ರೋಶಗೊಂಡ ಕಾರ್ಯಕರ್ತರು ಕಾರಿನ ಹಿಂದೆಯೇ ಓಡಿ ಪ್ರತಿಭಟನೆ ಮುಂದುವರಿಸಿದ್ದಾರೆ.
ನಾಗರಭಾವಿ ಸರ್ಕಲ್ ಹಾಗೂ ವಿಜಯನಗರ ಮುಖ್ಯ ರಸ್ತೆಯಲ್ಲಿ ಜಮಾಯಿಸಿದ ಕೃಷ್ಣಪ್ಪ ಬೆಂಬಲಿಗರು ಮತ್ತು ಮಹಿಳಾ ಕಾರ್ಯಕರ್ತೆಯರು ರಸ್ತೆ ಮಧ್ಯೆಯೇ ಕುಳಿತು, ಮಲಗಿ ಪ್ರತಿಭಟನೆ ನಡೆಸಿದರು. ಇದರಿಂದ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತು.
ಪ್ರತಿಭಟನಾಕಾರರು ಟೈರ್ಗಳಿಗೆ ಬೆಂಕಿ ಹಚ್ಚಿ ರಸ್ತೆ ತಡೆ ನಡೆಸಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.
ಪ್ರತಿಭಟನೆಯ ಪರಿಣಾಮ ಮೈಸೂರು ರಸ್ತೆಯಲ್ಲಿ ಸುಮಾರು 4 ಕಿಲೋಮೀಟರ್ಗೂ ಹೆಚ್ಚು ದೂರ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಪೊಲೀಸರು ಪ್ರತಿಭಟನಾಕಾರರನ್ನು ಚದುರಿಸಿ ಸಂಚಾರ ವ್ಯವಸ್ಥೆ ಸರಿಪಡಿಸಲು ಕ್ರಮ ಕೈಗೊಂಡಿದ್ದಾರೆ.



