ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ನಿರೀಕ್ಷಿತ ಪ್ರಮಾಣದಲ್ಲಿ ಮುಂಗಾರು ಮಳೆಯಾಗದ ಪರಿಣಾಮ ತೇವಾಂಶದ ಕೊರತೆಯಿಂದ ಬೆಳೆಗಳು ನಾಶವಾಗುತ್ತಿದ್ದು, ಬೇಸತ್ತ ರೈತರು ತಾವೇ ಬೆಳೆಗಳನ್ನು ಹರಗಿ ಹಾಕುವ ಪರಿಸ್ಥಿತಿ ಎದುರಾಗಿದೆ. ನರೇಗಲ್ಲ ಹೋಬಳಿ ವ್ಯಾಪ್ತಿಯ ಅಬ್ಬಿಗೇರಿ ಗ್ರಾಮದ ರೈತ ಸಿದ್ದಪ್ಪ ಹನಮನಾಳ ಅವರು ಮಂಗಳವಾರ ತಮ್ಮ ಎರಡು ಎಕರೆ ಜಮೀನಿನಲ್ಲಿ ಬಿತ್ತನೆ ಮಾಡಿದ್ದ ಉಳ್ಳಾಗಡ್ಡಿ ಹಾಗೂ ಮೆಣಸಿನಕಾಯಿ ಬೆಳೆಯನ್ನು ಟ್ರ್ಯಾಕ್ಟರ್ ಮೂಲಕ ಹರಗಿ ನಾಶಪಡಿಸಿದರು.
ದುಬಾರಿ ಬೆಲೆಗೆ ಬೀಜ, ಗೊಬ್ಬರ ಖರೀದಿಸಿ ಉತ್ತಮ ಆದಾಯದ ನಿರೀಕ್ಷೆಯಲ್ಲಿ ಬಿತ್ತನೆ ಮಾಡಿದ್ದರೂ, ಮಳೆಯ ಕೊರತೆಯಿಂದ ಬೆಳೆ ಸಮರ್ಪಕವಾಗಿ ಮೊಳಕೆಯೊಡೆಯಲಿಲ್ಲ. ಅಲ್ಪಸ್ವಲ್ಪ ಬಂದಿದ್ದ ಬೆಳೆ ಸಹ ಬಿಸಿಗಾಳಿ ಮತ್ತು ತೇವಾಂಶದ ಕೊರತೆಯಿಂದ ಒಣಗುತ್ತಿದ್ದು, ಹಾಕಿದ ಬಂಡವಾಳವೂ ಕೈತಪ್ಪಿದಂತಾಗಿದೆ ಎಂದು ರೈತ ಸಿದ್ದಪ್ಪ ಹನಮನಾಳ ಅಳಲು ತೋಡಿಕೊಂಡರು.
ರೋಣ ತಾಲೂಕು ರೈತ ಸಂಘದ ಅಧ್ಯಕ್ಷ ಎಸ್.ಎ. ಚೌರೆಡಿ ಮಾತನಾಡಿ, ಗದಗ ಜಿಲ್ಲೆಯಲ್ಲಿ ಮುಂಗಾರು ಸಂಪೂರ್ಣ ವಿಫಲವಾಗಿದ್ದು, ಬಹುತೇಕ ಬೆಳೆಗಳು ನಾಶವಾಗುವ ಹಂತ ತಲುಪಿವೆ. ಜಿಲ್ಲಾಧಿಕಾರಿಗಳು ಜಮೀನುಗಳಿಗೆ ಭೇಟಿ ನೀಡಿ ವಾರ ಕಳೆದರೂ ಯಾವುದೇ ಪರಿಹಾರ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.
ರೈತರು ಪ್ರತಿದಿನ ಬೆಳೆ ನಾಶಪಡಿಸುತ್ತಿದ್ದರೂ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ರಾಜ್ಯ ಸರ್ಕಾರ ತಕ್ಷಣವೇ ಬೆಳೆಹಾನಿ ಪರಿಹಾರ ಹಾಗೂ ಬೆಳೆ ವಿಮೆ ಬಿಡುಗಡೆಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
“ಸಾಲ ಮಾಡಿ ಬೆಳೆ ಬೆಳೆದಿದ್ದೇವೆ. ಮಳೆ ಕೈಕೊಟ್ಟಿದ್ದರಿಂದ ಬೆಳೆ ಸಂಪೂರ್ಣ ಹಾಳಾಗಿದೆ. ಗದಗ ಜಿಲ್ಲೆಯನ್ನು ತಕ್ಷಣ ಬರಪೀಡಿತ ಎಂದು ಘೋಷಿಸಿ ರೈತರಿಗೆ ಸೂಕ್ತ ಪರಿಹಾರ ನೀಡಬೇಕು.”
– ಸಿದ್ದಪ್ಪ ಹನಮನಾಳ, ರೈತ



