HomeIndia Newsರಾಜಕೀಯದಿಂದಲ್ಲ, ಚುನಾವಣೆಯಿಂದ ನಿವೃತ್ತಿ: ಸ್ಪರ್ಧಿಸದಿರಲು ಮೂರು ಕಾರಣ ಬಿಚ್ಚಿಟ್ಟ ಸಿದ್ದರಾಮಯ್ಯ

ರಾಜಕೀಯದಿಂದಲ್ಲ, ಚುನಾವಣೆಯಿಂದ ನಿವೃತ್ತಿ: ಸ್ಪರ್ಧಿಸದಿರಲು ಮೂರು ಕಾರಣ ಬಿಚ್ಚಿಟ್ಟ ಸಿದ್ದರಾಮಯ್ಯ

For Dai;y Updates Join Our whatsapp Group

ಮಂಡ್ಯ: 2028ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ತಮ್ಮ ನಿರ್ಧಾರದ ಹಿಂದಿನ ಮೂರು ಪ್ರಮುಖ ಕಾರಣಗಳನ್ನು ಸ್ವತಃ ಸಾಮಾಜಿಕ ಜಾಲತಾಣಗಳ ಮೂಲಕ ಬಹಿರಂಗಪಡಿಸಿದ್ದಾರೆ. ರಾಜಕೀಯ ಕಲುಷಿತಗೊಂಡಿರುವುದು, ವಯಸ್ಸಿನ ಕಾರಣದಿಂದ ಹಿಂದಿನಂತೆ ಕೆಲಸ ಮಾಡಲು ಸಾಧ್ಯವಾಗದಿರುವುದು ಹಾಗೂ ಹಣದ ಪ್ರಭಾವ ಹೆಚ್ಚಾಗಿರುವ ಚುನಾವಣೆಗಳೇ ಈ ತೀರ್ಮಾನದ ಪ್ರಮುಖ ಕಾರಣಗಳೆಂದು ಅವರು ಹೇಳಿದ್ದಾರೆ.

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ನಡೆದ ಕೆ.ಆರ್.ಪೇಟೆ ಕೃಷ್ಣ ಅವರ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದ ಸಿದ್ದರಾಮಯ್ಯ, ಬಳಿಕ ಸಾಮಾಜಿಕ ಜಾಲತಾಣದಲ್ಲಿ ತಮ್ಮ ನಿರ್ಧಾರದ ಕುರಿತು ಸುದೀರ್ಘವಾಗಿ ಬರೆದುಕೊಂಡಿದ್ದಾರೆ.

“2028ರ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ. ಆದರೆ ಸಕ್ರಿಯ ರಾಜಕಾರಣದಲ್ಲಿ ಮುಂದುವರಿದು ಜನರ ಕಷ್ಟ–ಸುಖಗಳಿಗೆ ಧ್ವನಿಯಾಗಿರುತ್ತೇನೆ. ಮತ್ತೊಮ್ಮೆ ಚುನಾವಣೆಗೆ ಸ್ಪರ್ಧಿಸುವಂತೆ ವರುಣ ಕ್ಷೇತ್ರದ ಜನರು ಒತ್ತಾಯಿಸುತ್ತಿದ್ದಾರೆ. ಆದರೂ ಇನ್ನು ಮುಂದೆ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸಬಾರದು ಎಂದು ತೀರ್ಮಾನಿಸಿದ್ದೇನೆ. ಈ ಹಿಂದೆ ಜನರೇ ನಮ್ಮನ್ನು ದುಡ್ಡು ಖರ್ಚು ಮಾಡಿ ಗೆಲ್ಲಿಸುತ್ತಿದ್ದರು. ಆದರೆ ಈಗ ಪರಿಸ್ಥಿತಿ ಸಂಪೂರ್ಣ ಬದಲಾಗಿದೆ” ಎಂದು ಅವರು ತಿಳಿಸಿದ್ದಾರೆ.

ವಯಸ್ಸು ಕೂಡ ತಮ್ಮ ನಿರ್ಧಾರಕ್ಕೆ ಕಾರಣವಾಗಿದೆ ಎಂದು ಹೇಳಿರುವ ಸಿದ್ದರಾಮಯ್ಯ, “ಈಗ ನನಗೆ 79 ವರ್ಷ. ಸರ್ಕಾರದ ಅವಧಿ ಮುಗಿಯುವ ವೇಳೆಗೆ 81–82 ವರ್ಷವಾಗಿರುತ್ತದೆ. ಆಗ ಹಿಂದಿನಂತೆ ಆರೋಗ್ಯ ಹಾಗೂ ಉತ್ಸಾಹದಿಂದ ಕೆಲಸ ಮಾಡಲು ಸಾಧ್ಯವಾಗುವುದಿಲ್ಲ. 2028ಕ್ಕೆ ನನ್ನ ರಾಜಕೀಯ ಜೀವನಕ್ಕೆ 50 ವರ್ಷಗಳು ಪೂರ್ಣಗೊಳ್ಳಲಿವೆ. 1978ರಲ್ಲಿ ತಾಲೂಕು ಮಂಡಳಿ ಸದಸ್ಯನಾಗಿ ಆರಂಭವಾದ ನನ್ನ ರಾಜಕೀಯ ಪಯಣದಲ್ಲಿ ಸೋಲು-ಗೆಲುವು ಎರಡನ್ನೂ ಕಂಡಿದ್ದೇನೆ. ಆದರೆ ನನ್ನ ಸಿದ್ಧಾಂತಗಳಿಗೆ ವಿರುದ್ಧವಾಗಿ ಎಂದಿಗೂ ನಡೆದುಕೊಂಡಿಲ್ಲ” ಎಂದು ಹೇಳಿದ್ದಾರೆ.

ಇಂದಿನ ರಾಜಕೀಯದಲ್ಲಿ ಹಣದ ಪ್ರಭಾವ ಹೆಚ್ಚಿರುವುದನ್ನೂ ಅವರು ಉಲ್ಲೇಖಿಸಿದ್ದಾರೆ. “ಚುನಾವಣೆಯಲ್ಲಿ ಸ್ಪರ್ಧಿಸಿದರೆ ಅಭ್ಯರ್ಥಿಗಳೇ ಮತದಾರರಿಗೆ ಹಣ ನೀಡಬೇಕಾದ ಪರಿಸ್ಥಿತಿ ಬಂದಿದೆ. ರಾಜಕಾರಣ ಸಾಕಷ್ಟು ಕಲುಷಿತವಾಗಿದೆ. ಪ್ರಾಮಾಣಿಕ ರಾಜಕಾರಣಕ್ಕೆ ಉಳಿಗಾಲಿಲ್ಲದಂತಾಗಿದೆ. ಇದೇ ಕಾರಣದಿಂದ ಮುಂದಿನ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಿರ್ಧರಿಸಿದ್ದೇನೆ. ಐದು ದಶಕಗಳ ಕಾಲ ರಾಜ್ಯದ ಜನರು ನನ್ನನ್ನು ತಮ್ಮ ಮನೆಯವನಂತೆ ಪ್ರೀತಿಸಿದ್ದಾರೆ. ಆ ಋಣ ತೀರಿಸಲು ಮುಂದಿನ ಜೀವನವನ್ನೂ ಜನಸೇವೆಗೆ ಮೀಸಲಿಡುತ್ತೇನೆ” ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img