HomeKarnataka Newsಪೂಜ್ಯರ ಬೇಡಿಕೆಗಳನ್ನು ಪರಿಶೀಲಿಸಿ ಹಂತ ಹಂತವಾಗಿ ಜಾರಿ: ಸಿ.ಎಂ ಸಿದ್ದರಾಮಯ್ಯ

ಪೂಜ್ಯರ ಬೇಡಿಕೆಗಳನ್ನು ಪರಿಶೀಲಿಸಿ ಹಂತ ಹಂತವಾಗಿ ಜಾರಿ: ಸಿ.ಎಂ ಸಿದ್ದರಾಮಯ್ಯ

For Dai;y Updates Join Our whatsapp Group

Spread the love

ಬೆಂಗಳೂರು ಫೆ 24: ಬಸವ ತತ್ವ, ವಚನ ಸಂಸ್ಕೃತಿ, ಶರಣರ ಹೋರಾಟದ ಬಗ್ಗೆ ನಮ್ಮ ಸರ್ಕಾರಕ್ಕೆ ಪೂರ್ಣ ಬದ್ಧತೆ ಇದ್ದು, ಪೂಜ್ಯರ ಬೇಡಿಕೆಗಳಲ್ಲಿ ಸಾಧ್ಯ ಇರುವವಗಳನ್ನು ಹಂತ ಹಂತವಾಗಿ ಈಡೇರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು.‌ ಕಾವೇರಿ ನಿವಾಸದಲ್ಲಿ ತಮ್ಮನ್ನು ಭೇಟಿಯಾದ ಲಿಂಗಾಯತ ಸ್ವಾಮೀಜಿಗಳು, ಸಚಿವರು, ಶಾಸಕರು, ಸಮಾಜದ ಮುಖಂಡರ ಸಭೆಯಲ್ಲಿ ಮಾತನಾಡಿದರು.

ಮೊದಲ ಬಾರಿ ಮುಖ್ಯಮಂತ್ರಿ ಆದಾಗ ಬಸವ ಜಯಂತಿಯಂದೇ ಪ್ರಮಾಣವಚನ ಸ್ವೀಕರಿಸಿದೆ. ಬಸವಣ್ಣನವರ ಭಾವಚಿತ್ರ ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯಗೊಳಿಸಿದ್ದು ನಮ್ಮದೇ ಕಾಂಗ್ರೆಸ್ ಸರ್ಕಾರ ಎಂದರು. ಬಸವಣ್ಣನವರ ವಿಚಾರ ಮತ್ತು ಹೋರಾಟ ಜಾತ್ಯತೀತ ಸಮಾಜ ನಿರ್ಮಾಣಕ್ಕೆ ಪೂರಕ. ಜಾತಿವಾದಿ ಪಟ್ಟಭದ್ರರಿಗೆ ಬಸವಣ್ಣನವರ ವಿಚಾರಗಳು ಹಿಡಿಸಲ್ಲ.
ಪಟ್ಟಭದ್ರರು ಬಹಿರಂಗವಾಗಿ ಬಸವಣ್ಣನವರನ್ನು ವಿರೋಧಿಸಲು ಸಾಧ್ಯವಿಲ್ಲ. ಅದಕ್ಕೇ ಆಂತರಿಕವಾಗಿ ವಿರೋಧಿಸುತ್ತಿದ್ದಾರೆ ಎಂದರು.

ಜಾತಿ ವ್ಯವಸ್ಥೆ ಬಹಳ ಗಟ್ಟಿಯಾಗಿ ಬೇರೂರಿದೆ. ಇದಕ್ಕೆ ಪಟ್ಟಭದ್ರರು ನೀರು ಗೊಬ್ಬರ ಹಾಕುತ್ತಿದ್ದಾರೆ. ಜಾತ್ಯತೀತ, ಸಮ ಸಮಾಜ ನಿರ್ಮಾಣ ಮಾಡಲು ಬಸವಣ್ಣನವರ ಹೋರಾಟ ಪೂರಕ. ನಮ್ಮ ಜಾತಿ ವ್ಯವಸ್ಥೆಗೆ ಚಲನೆ ಇಲ್ಲ. ಜಾತಿ ಜಡತ್ವ, ಆರ್ಥಿಕ ಜಡತ್ವ ಇರುವ ಸಮಾಜದಲ್ಲಿ ಚಲನೆ ಸಾಧ್ಯವಿಲ್ಲ. ಬಸವಣ್ಣನವರ ವಿಚಾರಗಳೇ ಅಂಬೇಡ್ಕರ್ ವಿಚಾರಗಳಾಗಿದ್ದು ಇವೆಲ್ಲವೂ ಸಂವಿಧಾನದಲ್ಲಿ ಅಡಕವಾಗಿವೆ ಎಂದರು.

ಗೋರುಚ ಅಧ್ಯಕ್ಷತೆಯಲ್ಲಿ ಅನುಭವ ಮಂಟಪ ಪುನರುಜ್ಜೀವನಕ್ಕೆ ಮುಂದಾಗಿದ್ದು ನಾವು. ಅನುಭವ ಮಂಟಪ ಮೊದಲ ಪ್ರಜಾಪ್ರಭುತ್ವದ ವೇದಿಕೆ. ಯಾರ ಒತ್ತಾಯವೂ ಇಲ್ಲದ ವೇಳೆಯಲ್ಲೇ ನಮ್ಮ ಸರ್ಕಾರ ಅನುಭವ ಮಂಟಪ ಪುನರುಜ್ಜೀವನಕ್ಕೆ ಮುಂದಾಗಿತ್ತು. ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ್ದು ಕಾಂಗ್ರೆಸ್ ಸರ್ಕಾರ ಎಂದರು.

ಸ್ವಾಮೀಜಿಗಳ ನಿಯೋಗದ ಬೇಡಿಕೆಗಳು..

ನಾಡಿನ ಸಾಂಸ್ಕೃತಿಕ ನಾಯಕ ಎಂದು ಘೋಷಿತರಾಗಿರುವ ವಿಶ್ವಗುರು ಬಸವೇಶ್ವರರ ವಿಚಾರಧಾರೆಯನ್ನು ಪರಿಣಾಮಕಾರಿಯಾಗಿ ಜನಮಾನಸಕ್ಕೆ ತಲುಪಿಸುವ ನಿಟ್ಟಿನಲ್ಲಿ ಈ ವರ್ಷದ ಬಜೆಟ್ ನಲ್ಲಿ ರೂ 100 ಕೋಟಿ ನೀಡುವ ಜೊತೆಗೆ, ಮುಂದಿನ ನಾಲ್ಕು ವರ್ಷಗಳ ಬಜೆಟ್ ನಲ್ಲಿ ತಲಾ 100 ಕೋಟಿಯಂತೆ ಒಟ್ಟು ರೂ 500 ಕೋಟಿ ಅನುದಾನ ನೀಡಬೇಕು.

ಮುಖ್ಯಮಂತ್ರಿ ಭೇಟಿಗೂ ಮುನ್ನ ಈ ಸಂಬಂಧ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರ ರೇಸ್ ಕೋರ್ಸ್ ರಸ್ತೆಯ ಅಧಿಕೃತ ನಿವಾಸದಲ್ಲಿ ಬೆಳಿಗ್ಗೆ ಮಠಾಧೀಶರು, ಸಮುದಾಯದ ಸಚಿವರು, ಶಾಸಕರು ಸಭೆ ನಡೆಸಿದರು. ರಾಜ್ಯದೆಲ್ಲೆಡೆಯಿಂದ ಆಗಮಿಸಿದ್ದ ಸಮುದಾಯದ ಸ್ವಾಮೀಜಿಗಳು, ಶಾಸಕರು, ಮಾಜಿ ಶಾಸಕರು ಹಾಗೂ ಸಂಘ ಸಂಸ್ಥೆಗಳ ಪ್ರಮುಖರು ಸಭೆಯಲ್ಲಿ ಪಾಲ್ಗೊಂಡು ಚರ್ಚಿಸಿದರು. ನಂತರ, ಮುಖ್ಯಮಂತ್ರಿಯವರ ಅಧಿಕೃತ ನಿವಾಸ ‘ಕಾವೇರಿ’ಗೆ ತೆರಳಿ ಮನವಿ ಸಲ್ಲಿಸಿದರು.

ಯುವ ಪೀಳಿಗೆಗೆ ಬಸವಣ್ಣ ಅವರನ್ನು ಪರಿಚಯಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಕೆಲವು ಮಹತ್ವದ ಕ್ರಮಗಳನ್ನು ಕೈಗೊಳ್ಳಬೇಕೆಂದು ಇತ್ತೀಚೆಗೆ ಚಿತ್ರದುರ್ಗದಲ್ಲಿ ನಡೆದ 13ನೇ ಅಖಿಲಭಾರತ ಶರಣ ಸಾಹಿತ್ಯ ಸಮ್ಮೇಳನದಲ್ಲಿ ಪರಮಪೂಜ್ಯರು, ಗಣ್ಯರು, ಚಿಂತಕರು, ಅಭಿಪ್ರಾಯಪಟ್ಟಿದ್ದಾರೆ. ನಂತರದಲ್ಲಿಯೂ ಈ ಕುರಿತು ಹಲವು ಸಭೆಗಳನ್ನು ನಡೆಸಿ ಹಿಂತಚಿಂತಕರೆಲ್ಲರ ಅಭಿಪ್ರಾಯಗಳನ್ನು ಕ್ರೋಢಿಕರಿಸಲಾಗಿದೆ. ಅದರಂತೆ, ಕಾರ್ಯಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರಸಕ್ತ ಸಾಲಿನ ಬಜೆಟ್ ನಿಂದಲೇ ಅಗತ್ಯ ಅನುದಾನ ಒದಗಿಸಬೇಕು.

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯಲ್ಲಿ ಬಸವಣ್ಣನ ಬೃಹತ್ ಪ್ರತಿಮೆ ಪ್ರತಿಷ್ಠಾಪಿಸಬೇಕು. ಜೊತೆಗೆ, ಬೆಂಗಳೂರಿನಲ್ಲಿ 25 ಎಕರೆ ಪ್ರದೇಶದಲ್ಲಿ ಅಕ್ಷರಧಾಮದ ಮಾದರಿಯಲ್ಲಿ ಬೃಹತ್ ‘ಶರಣ ದರ್ಶನ’ ಕೇಂದ್ರ ಸ್ಥಾಪಿಸಿ, ಅಲ್ಲಿ, ಉದ್ಯಾನ, ಗ್ರಂಥಾಲಯ, ಅತಿಥಿಕೇಂದ್ರ, ದಾಸೋಹ ಭವನ, ಸಭಾಂಗಣ ನಿರ್ಮಿಸಿ ಪ್ರವಾಸಿ ತಾಣವನ್ನಾಗಿಸಬೇಕು ಎಂಬುದನ್ನು ಬಾಲ್ಕಿ ಮಠದ ಬಸವಲಿಂಗ ಪಟ್ಟದೇವರು ಸ್ವಾಮೀಜಿ ಅವರು ಎಲ್ಲರ ಪರವಾಗಿ ಮುಖ್ಯಮಂತ್ರಿಯವರ ಗಮನಕ್ಕೆ ತಂದರು.

ಎಲ್ಲ ಶರಣರ ಜನ್ಮ ಸ್ಥಳ, ಐಕ್ಯಸ್ಥಳ ಹಾಗೂ ಇತರೆ ಸ್ಮಾರಕಗಳ ರಕ್ಷಣೆಗಾಗಿ ‘ಪ್ರತ್ಯೇಕ ಶರಣ ಸ್ಮಾರಕ ರಕ್ಷಣೆ ಪ್ರಾಧಿಕಾರ’ ರಚಿಸಬೇಕು.

*ಬಸವಕಲ್ಯಾಣದಲ್ಲಿ ನಿರ್ಮಿಸುತ್ತಿರುವ ಅನುಭವ ಮಂಟಪದ ಸದ್ಬಳಕೆಯಾಗಲು ಅಲ್ಲಿಯೇ ‘ವಚನ ವಿಶ್ವವಿದ್ಯಾಲಯ’ ಮತ್ತು ಸಂಶೋಧನ ಕೇಂದ್ರ ಆರಂಭಿಸಬೇಕು.

ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ‘ಬಸವಭವನ’ ನಿರ್ಮಿಸಿ, ಅಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನಿರಂತರವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಬೇಕು.

ವಚನ ಸಾಹಿತ್ಯ ಸಂಗ್ರಹ, ಪ್ರಕಟಣೆ, ಮರು ಪ್ರಕಟಣೆ, ಹಸ್ತಪ್ರತಿಗಳ ದಾಖಲೀಕರಣ, ಶರಣ ಕ್ಷೇತ್ರಗಳ ಅಧ್ಯಯನ ಮತ್ತು ದಾಖಲೀಕರಣ, ವಿಚಾರಸಂಕಿರಣ, ಸಮ್ಮೇಳನಗಳು, ವಚನಾಧಾರಿತ ಸಾಂಸ್ಕೃತಿಕ ಕಾರ್ಯಕ್ರಮಗಳು ಇತ್ಯಾದಿ ಚಟುವಟಿಕೆಗಳನ್ನು ನಡೆಸಲು ಶರಣ ಸಾಹಿತ್ಯ ಮತ್ತು ಸಂಸ್ಕೃತಿ ಪ್ರಸಾರಕ್ಕಾಗಿಯೇ ಇರುವ ಸಂಸ್ಥೆಗಳಿಗೆ ಅನುದಾನ ಒದಗಿಸಬೇಕು ಎಂದರು.

ಮುಂದಿನ ಐದು ವರ್ಷಗಳಲ್ಲಿ 500 ಕೋಟಿ ಅನುದಾನ ಒದಗಿಸುವ ಮೂಲಕ ಸಾಂಸ್ಕೃತಿಕ ನಾಯಕ ಬಸವಣ್ಣನವರನ್ನು ಮುಂಬರುವ ಪೀಳಿಗೆಗಳಿಗೆ ಪರಿಚಯಿಸುವುದಕ್ಕೆ ಸಂಬಂಧಿಸಿದ ಈ ಕಾರ್ಯಯೋಜನೆಗಳಿಗೆ ಚಾಲನೆ ನೀಡಿ, ಇತಿಹಾಸ ಸದಾ ನೆನಪಿಸಿಕೊಳ್ಳುವಂತಹ ಕಾರ್ಯಕ್ಕೆ ಮುಂದಾಗಬೇಕು ಎಂದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!