ಉಡುಪಿ: ಕೋಟ ಸಮೀಪದ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಯುವಕನೊಬ್ಬ ಟೇಬಲ್, ಟಿವಿ ಹಾಗೂ ಮ್ಯೂಸಿಕ್ ಸಿಸ್ಟಮ್ ಅಳವಡಿಸಿ ಸಂಚಾರ ತಡೆದು ಅಟ್ಟಹಾಸ ಮೆರೆದ ಘಟನೆ ನಡೆದಿದೆ. ಪರಿಸ್ಥಿತಿ ನಿಯಂತ್ರಿಸಲು ಬಂದ ಪೊಲೀಸರ ಮೇಲೆಯೂ ಕತ್ತಿ ಬೀಸಿ ಬೆದರಿಕೆ ಹಾಕಿದ ಆರೋಪದಡಿ ಯುವಕನನ್ನು ಬಂಧಿಸಲಾಗಿದೆ.
ಬೆಲ್ಲದ ಗಣಪತಿ ದೇವಸ್ಥಾನ ಸಮೀಪದ ನಿವಾಸಿ ರಂಜಿತ್ ಸೋಮಯಾಜಿ (25) ಹೆದ್ದಾರಿಯಲ್ಲೇ ಟೇಬಲ್ ಇಟ್ಟು ಟಿವಿ ಹಾಗೂ ಸೌಂಡ್ ಸಿಸ್ಟಮ್ ಮೂಲಕ ಜೋರಾಗಿ ಹಾಡುಗಳನ್ನು ಪ್ರಸಾರ ಮಾಡುತ್ತ ವಾಹನಗಳ ಸಂಚಾರಕ್ಕೆ ಅಡ್ಡಿಪಡಿಸಿದ್ದಾನೆ. ಪರಿಣಾಮ ಕೆಲಕಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳ ಸಾಲು ನಿರ್ಮಾಣವಾಗಿ ಸಾರ್ವಜನಿಕರು ಭಯಭೀತರಾಗಿದ್ದರು.
ಪೊಲೀಸರು ಸ್ಥಳಕ್ಕೆ ಆಗಮಿಸಿ ಮನವೊಲಿಸಲು ಮುಂದಾದ ವೇಳೆ ರಂಜಿತ್ ತನ್ನ ಬಳಿಯಿದ್ದ ಕತ್ತಿಯನ್ನು ಹೊರತೆಗೆದು ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾಗಿದ್ದಾನೆ ಎಂದು ತಿಳಿದುಬಂದಿದೆ. ಬಳಿಕ ಪೊಲೀಸರು ಆತನನ್ನು ನಿಯಂತ್ರಣಕ್ಕೆ ತೆಗೆದುಕೊಂಡು ಬಂಧಿಸಿದ್ದಾರೆ.
ಪ್ರಾಥಮಿಕ ವಿಚಾರಣೆಯಲ್ಲಿ ಯುವಕ ಮಾನಸಿಕ ಅಸ್ವಸ್ಥನಾಗಿರುವ ಸಾಧ್ಯತೆ ಬಗ್ಗೆ ಅನುಮಾನ ವ್ಯಕ್ತವಾಗಿದ್ದರೂ, ಕುಟುಂಬಸ್ಥರು ಯಾವುದೇ ವೈದ್ಯಕೀಯ ದಾಖಲೆಗಳನ್ನು ಸಲ್ಲಿಸದ ಹಿನ್ನೆಲೆಯಲ್ಲಿ ಪೊಲೀಸರು ಅಧಿಕೃತ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.
ಘಟನೆಯ ಸಂಪೂರ್ಣ ದೃಶ್ಯ ಸ್ಥಳೀಯರ ಮೊಬೈಲ್ನಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.



