ಚಿಕ್ಕಮಗಳೂರು:– ಜಿಲ್ಲೆಯ ಕೆಮ್ಮಣ್ಣುಗುಂಡಿಯ ಬಳಿ ಪತ್ನಿ ಜೊತೆ ಅಪಾಯಕಾರಿ ಸ್ಥಳದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ 60 ಅಡಿ ಆಳದ ಪ್ರಪಾತಕ್ಕೆ ಬಿದ್ದು ಶಿಕ್ಷಕ ಸಾವನ್ನಪ್ಪಿದ ದುರ್ಘಟನೆ ಸಂಭವಿಸಿದೆ.
40 ವರ್ಷದ ಸಂತೋಷ್ ಮೃತ ಶಿಕ್ಷಕ. ತರೀಕೆರೆ ತಾಲೂಕಿನ ಕೆಮ್ಮಣ್ಣುಗುಂಡಿಗೆ ಪತ್ನಿ ಜೊತೆ ಸಂತೋಷ್ ಬಂದಿದ್ದರು. ಈ ವೇಳೆ ರಸ್ತೆ ಬದಿ ಪತ್ನಿಯೊಂದಿಗೆ ಸೆಲ್ಫಿ ತೆಗೆದುಕೊಳ್ಳುವಾಗ ಆಯತಪ್ಪಿ ಪ್ರಪಾತಕ್ಕೆ ಬಿದ್ದಿದ್ದಾರೆ. ಬಿದ್ದ ರಭಸಕ್ಕೆ ಅವರ ತಲೆಗೆ ಬಲವಾದ ಗಾಯವಾಗಿ, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಸಂತೋಷ್ ಅವರು ತರೀಕೆರೆ ತಾಲೂಕಿನ ಲಕ್ಷ್ಮೀಸಾಗರ ಶಾಲೆಯಲ್ಲಿ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದರು. ಅಗ್ನಿಶಾಮಕದಳದ ಸಿಬ್ಬಂದಿ ಪ್ರಪಾತದಿಂದ ಮೃತದೇಹವನ್ನು ತೆಗೆದಿದ್ದಾರೆ. ಲಿಂಗದಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.



