ವಿಜಯಸಾಕ್ಷಿ ಸುದ್ದಿ, ಗದಗ: ಭಾರತೀಯ ಸಂಸ್ಕೃತಿಯಲ್ಲಿ ಹಿರಿಯ ನಾಗರಿಕರಿಗೆ ವಿಶಿಷ್ಟ ಗೌರವವನ್ನು ಹಾಗೂ ಪ್ರಾಶಸ್ತ್ಯವನ್ನು ಕೊಡಲಾಗಿದೆ. ಹಿರಿಯ ನಾಗರಿಕರ ಮಾರ್ಗದರ್ಶನ ಹಾಗೂ ಅನುಭವಗಳು ಯುವ ಪೀಳಿಗೆಗೆ ದಾರಿದೀಪವಾಗಿದ್ದು, ಸಂತಸಮಯ ಹಾಗೂ ಬಲಿಷ್ಠ ಸಮಾಜ ಕಟ್ಟುವಲ್ಲಿ ಹಿರಿಯ ನಾಗರಿಕರ ಪಾತ್ರ ಮುಖ್ಯವಾಗಿದೆ ಎಂದು ರಾಜ್ಯದ ಕಾನೂನು, ಪ್ರವಾಸೋದ್ಯಮ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಅಭಿಪ್ರಾಯಪಟ್ಟರು.
ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ನಲ್ಲಿ ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಇವರುಗಳ ಸಹಯೋಗದಲ್ಲಿ ಬುಧವಾರ `ಹಿರಿಯ ನಾಗರಿಕರು: ನಮ್ಮ ಆಶೋತ್ತರಗಳು, ನಮ್ಮ ಯೋಗಕ್ಷೇಮ ಮತ್ತು ನಮ್ಮ ಹಕ್ಕುಗಳನ್ನು ಸ್ಥಳೀಯ ಮತ್ತು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯಬಲ್ಲ ಸಶಕ್ತರು’ ಎಂಬ ಘೋಷವಾಕ್ಯದಡಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ-2025 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಹಿರಿಯ ನಾಗರಿಕರಿಗೆ ಸರ್ಕಾರದಿಂದ ವಿವಿಧ ಯೋಜನೆಗಳ ಸೌಲಭ್ಯ ವಿತರಣೆ ಹಾಗೂ ಇನ್ನಿತರ ಸಮಸ್ಯೆಗಳು ಉಂಟಾದಲ್ಲಿ ಜಿಲ್ಲಾಡಳಿತ ಆ ಸಮಸ್ಯೆಗಳಿಗೆ ಸ್ಪಂದಿಸುತ್ತದೆ. ಪ್ರಭುವಿನೆಡೆಗೆ ಪ್ರಭುತ್ವ ಯಂತ್ರದಲ್ಲಿಯೂ ಸಹ ಹಿರಿಯ ನಾಗರಿಕರು ತಮ್ಮ ಸಮಸ್ಯೆಗಳ ಕುರಿತು ದೂರು ದಾಖಲಿಸಬಹುದಾಗಿದೆ ಎಂದು ಸಚಿವ ಎಚ್.ಕೆ. ಪಾಟೀಲ ತಿಳಿಸಿದರು.
ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಹಿರಿಯ ನಾಗರಿಕರನ್ನು ಗೌರವಿಸಲಾಯಿತು. ಹಿರಿಯ ನಾಗರಿಕರಿಗಾಗಿ ಆಯೋಜಿಸಲಾಗಿದ್ದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಚಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ, ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಪದ್ಮಾವತಿ ಜಿ, ಗದಗ ಜಿಲ್ಲಾ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಪ್ರೊ. ಕೆ.ಎಚ್. ಬೇಲೂರ, ಗದಗ ಜಿಲ್ಲಾ ಹಿರಿಯ ನಾಗರಿಕರ ಸಂಘದ ಅಧ್ಯಕ್ಷ ಜಿ.ಎಸ್. ಹಿರೇಮಠ, ಕ.ರಾ.ಹಿ.ನಾ ಹಾಗೂ ನಿ.ನಾ. ಸಂಘದ ಎಸ್.ಕೆ. ಖಂಡೆಪ್ಪಗೌಡರ, ಗದಗ ಪ್ರೋಬಸ್ ಕ್ಲಬ್ನ ಬಿ.ಎಸ್. ಗೌಡರ, ಡಾ. ರಾಜೇಂದ್ರ ಗೋಡಬೋಲೆ, ಹಿರಿಯ ನಾಗರಿಕರ ಸಂಘದ ತಾಲೂಕಾ ಘಟಕದ ಅಧ್ಯಕ್ಷರು, ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂಘಗಳ, ಸ್ವಯಂ ಸೇವಾ ಸಂಸ್ಥೆಗಳ ಮುಖ್ಯಸ್ಥರು, ಬಿ.ಎಮ್. ಬಿಳೆಯಲಿ, ಹನುಮಂತಪ್ಪ ಗರಗ, ಬಸಯ್ಯ ಸ್ಥಾವರಮಠ, ಲೋಕಪ್ಪ ಸೇರಿದಂತೆ ವಿವಿಧ ಹಿರಿಯ ನಾಗರಿಕರು, ಗಣ್ಯರು ಹಾಜರಿದ್ದರು.
ನಾಡಗೀತೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಕೆ. ಮಹಾಂತೇಶ್ ಸ್ವಾಗತಿಸಿದರು. ಪ್ರೊ. ಬಾಹುಬಲಿ ಜೈನರ್ ಕಾರ್ಯಕ್ರಮ ನಿರೂಪಿಸಿದರು.
ಹಿರಿಯ ನಾಗರಿಕರನ್ನು ಪ್ರತಿಯೊಬ್ಬರೂ ಗೌರವಿಸಬೇಕು ಹಾಗೂ ಪೂಜ್ಯ ಭಾವನೆಯಿಂದ ಕಾಣಬೇಕು. ಹಿರಿಯ ನಾಗರಿಕರು ತಮ್ಮ ತಮ್ಮ ಕುಟುಂಬಗಳಲ್ಲಿ ಸಾಕ್ಷಿಪ್ರಜ್ಞೆಯಾಗಿ ಮಾರ್ಗದರ್ಶನ ಮಾಡುತ್ತಾರೆ. ಭಾರತೀಯ ಸಮಾಜದಲ್ಲಿ ಹಿರಿಯರಿಗೆ ಕೊಟ್ಟಿರುವ ಗೌರವದ ಸಂಸ್ಕೃತಿಯಿಂದ ಭಾರತ ದೇಶವು ಸುಸಂಸ್ಕೃತ ಹಾಗೂ ಸಂತೋಷಕರ ಸಮಾಜವನ್ನಾಗಿಸಲು ಕಾರಣವಾಗಿದೆ. ಹಿರಿಯ ನಾಗರಿಕರಿಗೆ ಸರ್ಕಾರದಿಂದ ವಿವಿಧ ಯೋಜನೆಗಳು ಜಾರಿಯಲ್ಲಿದ್ದು, ಅವುಗಳ ಸದ್ಬಳಕೆಯಾಗಬೇಕು ಎಂದು ಸಚಿವ ಎಚ್.ಕೆ. ಪಾಟೀಲ ತಿಳಿಸಿದರು.



