ಬೆಂಗಳೂರು: ಅತಿಥಿ ಶಿಕ್ಷಕಿಯೊಬ್ಬರಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಪ್ರಕರಣವನ್ನು ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ. ಆರೋಪಿ ಲಿಂಗರಾಜು ನಾಯಕ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ ವಜಾಗೊಳಿಸಿ, ಪ್ರಕರಣದ ಸಂಪೂರ್ಣ ವಿಚಾರಣೆ ನಡೆಯಬೇಕು ಎಂದು ಸೂಚಿಸಿದೆ.
ಪ್ರಕರಣದ ದಾಖಲೆಗಳನ್ನು ಪರಿಶೀಲಿಸಿದ ನ್ಯಾಯಾಲಯ, ಇದು ಸಮ್ಮತಿಯ ಸಂಬಂಧವಲ್ಲ, ಬಲವಂತದ ಲೈಂಗಿಕ ದೌರ್ಜನ್ಯವಾಗಿದೆ ಎಂದು ಸ್ಪಷ್ಟಪಡಿಸಿದೆ. ಆರೋಪಿಯು ತನ್ನ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು, ಮೊದಲು ನಗ್ನ ಚಿತ್ರಗಳನ್ನು ಪಡೆದು ನಂತರ ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಪೀಠ ಗಮನಿಸಿದೆ.
ಉದ್ಯೋಗ ಕಳೆದುಕೊಳ್ಳುವ ಭಯ ಹಾಗೂ ಸಾರ್ವಜನಿಕ ಅವಮಾನ ಭೀತಿಯಿಂದ ಸಂತ್ರಸ್ತೆಯನ್ನು ಒತ್ತಾಯಿಸಿ ದೌರ್ಜನ್ಯ ನಡೆಸಲಾಗಿದೆ ಎಂದು ನ್ಯಾಯಾಲಯ ಹೇಳಿದೆ. ಈ ಹಂತದಲ್ಲಿ ಪ್ರಕರಣ ರದ್ದುಪಡಿಸಲು ಅವಕಾಶ ಇಲ್ಲ ಎಂದು ತಿಳಿಸಿದೆ.
ಪ್ರಕರಣದ ಹಿನ್ನೆಲೆ:
2023ರಲ್ಲಿ ಶಿವಮೊಗ್ಗದ ಸರ್ಕಾರಿ ಶಾಲೆಯಲ್ಲಿ ಅತಿಥಿ ಶಿಕ್ಷಕಿಯಾಗಿ ಕೆಲಸಕ್ಕೆ ಸೇರಿದ ಮಹಿಳೆಯೊಂದಿಗೆ ಆರೋಪಿ ಪರಿಚಯ ಬೆಳೆಸಿಕೊಂಡಿದ್ದನು. ಬಳಿಕ ಕಚೇರಿಗೆ ಕರೆಯಿಸಿಕೊಂಡು ದೌರ್ಜನ್ಯ ಎಸಗಿದ್ದು, ಕೆಲಸದಿಂದ ತೆಗೆಸುವುದಾಗಿ ಬೆದರಿಸಿ ನಗ್ನ ಚಿತ್ರಗಳನ್ನು ಕಳುಹಿಸಲು ಒತ್ತಾಯಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ.
ಈ ಚಿತ್ರಗಳನ್ನು ಆಧಾರ ಮಾಡಿಕೊಂಡು ಹಲವು ಸ್ಥಳಗಳಲ್ಲಿ ದೌರ್ಜನ್ಯ ಮುಂದುವರಿಸಿದ್ದಾನೆ ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾರೆ. ಆರ್ಥಿಕ ಸಂಕಷ್ಟದಿಂದ ವಿಷಯವನ್ನು ಬಹಿರಂಗಪಡಿಸದಿದ್ದರೂ, ಬಳಿಕ ಪತಿಗೆ ಮಾಹಿತಿ ನೀಡಿ ದೂರು ದಾಖಲಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಪಟ್ಟಿ ಸಲ್ಲಿಸಿದ್ದು, ಅದನ್ನು ಪ್ರಶ್ನಿಸಿ ಆರೋಪಿ ಹೈಕೋರ್ಟ್ ಮೆಟ್ಟಿಲೇರಿದ್ದನು.



