HomeSports Newsಭಾರತ ಮಹಿಳಾ ತಂಡಕ್ಕೆ ಶಾಕ್: ಟಿ20 ವಿಶ್ವಕಪ್ʼನಿಂದ ಕನ್ನಡತಿ ಶ್ರೇಯಾಂಕಾ ಪಾಟೀಲ್ ಔಟ್!

ಭಾರತ ಮಹಿಳಾ ತಂಡಕ್ಕೆ ಶಾಕ್: ಟಿ20 ವಿಶ್ವಕಪ್ʼನಿಂದ ಕನ್ನಡತಿ ಶ್ರೇಯಾಂಕಾ ಪಾಟೀಲ್ ಔಟ್!

For Dai;y Updates Join Our whatsapp Group

Spread the love

ಮುಂಬೈ: ಐಸಿಸಿ ಮಹಿಳಾ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭರ್ಜರಿ ಆರಂಭ ಪಡೆದಿರುವ ಭಾರತ ಮಹಿಳಾ ಕ್ರಿಕೆಟ್ ತಂಡಕ್ಕೆ ದೊಡ್ಡ ಆಘಾತ ಎದುರಾಗಿದೆ. ತಂಡದ ಪ್ರಮುಖ ಆಲ್‌ರೌಂಡರ್ ಹಾಗೂ ಕನ್ನಡತಿ ಶ್ರೇಯಾಂಕಾ ಪಾಟೀಲ್ ಗಾಯದ ಕಾರಣದಿಂದ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ.

ನೆದರ್ಲೆಂಡ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಪಾದಕ್ಕೆ ಗಾಯವಾಗಿರುವ ಶ್ರೇಯಾಂಕಾ ಅವರಿಗೆ ಸಂಪೂರ್ಣ ಚೇತರಿಕೆಗೆ ಹೆಚ್ಚಿನ ಸಮಯ ಅಗತ್ಯವಿರುವುದರಿಂದ, ವಿಶ್ವಕಪ್‌ನ ಉಳಿದ ಪಂದ್ಯಗಳಲ್ಲಿ ಅವರು ಭಾಗವಹಿಸುವುದಿಲ್ಲ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

ಬುಧವಾರ ನಡೆದ ನೆದರ್ಲೆಂಡ್ಸ್ ವಿರುದ್ಧದ ಪಂದ್ಯದಲ್ಲಿ ಈ ಘಟನೆ ಸಂಭವಿಸಿತ್ತು. ಎದುರಾಳಿ ತಂಡದ ಇನ್ನಿಂಗ್ಸ್‌ನ 6ನೇ ಓವರ್‌ನ ಮೊದಲ ಎಸೆತದ ವೇಳೆ ಮಿಡ್‌ವಿಕೆಟ್ ಪ್ರದೇಶದತ್ತ ತೆರಳುತ್ತಿದ್ದ ಚೆಂಡನ್ನು ತಡೆಯಲು ಪ್ರಯತ್ನಿಸಿದ ಶ್ರೇಯಾಂಕಾ ಕಾಲು ಜಾರಿ ಬಿದ್ದು ಗಾಯಗೊಂಡಿದ್ದರು. ಬಳಿಕ ಅವರು ಮೈದಾನ ತೊರೆಯಬೇಕಾಯಿತು.

ಶ್ರೇಯಾಂಕಾ ಅವರ ಸ್ಥಾನಕ್ಕೆ ಯುವ ಆಟಗಾರ್ತಿ ಪ್ರೇಮಾ ರಾವತ್ ಅವರನ್ನು ಭಾರತ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಈ ಬದಲಾವಣೆಗೆ ಐಸಿಸಿ ಮಹಿಳಾ ಟಿ20 ವಿಶ್ವಕಪ್ ತಾಂತ್ರಿಕ ಸಮಿತಿಯು ಅಧಿಕೃತ ಅನುಮೋದನೆ ನೀಡಿದೆ. ಟೂರ್ನಿಯ ನಿಯಮಗಳ ಪ್ರಕಾರ, ಗಾಯಗೊಂಡ ಆಟಗಾರ್ತಿಯ ಬದಲಿಗೆ ಹೊಸ ಆಟಗಾರ್ತಿಯನ್ನು ಸೇರಿಸಲು ತಾಂತ್ರಿಕ ಸಮಿತಿಯ ಅನುಮತಿ ಕಡ್ಡಾಯವಾಗಿದೆ.

24 ವರ್ಷದ ಪ್ರೇಮಾ ರಾವತ್ ಇತ್ತೀಚಿನ ದಿನಗಳಲ್ಲಿ ತಮ್ಮ ಉತ್ತಮ ಪ್ರದರ್ಶನದ ಮೂಲಕ ಗಮನ ಸೆಳೆದಿದ್ದರು. ಮಹಿಳಾ ಏಷ್ಯಾ ಕಪ್ ರೈಸಿಂಗ್ ಸ್ಟಾರ್ಸ್ ಟೂರ್ನಿಯಲ್ಲಿ ಭಾರತ ‘ಎ’ ತಂಡದ ಪರ ಆಡಿದ್ದ ಅವರು 9.62ರ ಸರಾಸರಿಯಲ್ಲಿ 8 ವಿಕೆಟ್ ಪಡೆದು ಮಿಂಚಿದ್ದರು.

ಇದರ ಜೊತೆಗೆ, ವುಮೆನ್ಸ್ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್)‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಪ್ರತಿನಿಧಿಸಿರುವ ಪ್ರೇಮಾ, ಕಳೆದ ಎರಡು ಆವೃತ್ತಿಗಳಲ್ಲಿ ಒಟ್ಟು ಆರು ಪಂದ್ಯಗಳನ್ನು ಆಡಿದ್ದು, ಮೂರು ವಿಕೆಟ್ ಕಬಳಿಸಿದ್ದಾರೆ.

ಗಾಯದ ಸಮಸ್ಯೆಯಿಂದ ಚೇತರಿಸಿಕೊಂಡು ಇತ್ತೀಚೆಗಷ್ಟೇ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಮರಳಿದ್ದ ಶ್ರೇಯಾಂಕಾ ಅವರಿಗೆ ಇದು ಮತ್ತೊಂದು ಹಿನ್ನಡೆಯಾಗಿದೆ. ವಿಶ್ವಕಪ್‌ನಲ್ಲಿ ಪಾಕಿಸ್ತಾನ ವಿರುದ್ಧ ನಡೆದ ಪಂದ್ಯದಲ್ಲಿ ಅವರು ಮೂರು ಓವರ್‌ಗಳಲ್ಲಿ ಕೇವಲ 17 ರನ್ ನೀಡಿ ಪರಿಣಾಮಕಾರಿ ಪ್ರದರ್ಶನ ನೀಡಿದ್ದರು.

ಭಾರತ ತಂಡ ಈಗಾಗಲೇ ಆರಂಭಿಕ ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸಿ ಟೂರ್ನಿಯಲ್ಲಿ ಉತ್ತಮ ಸ್ಥಿತಿಯಲ್ಲಿದ್ದರೂ, ಶ್ರೇಯಾಂಕಾ ಅವರ ಅನುಪಸ್ಥಿತಿ ಮುಂದಿನ ಪಂದ್ಯಗಳಲ್ಲಿ ತಂಡಕ್ಕೆ ಸವಾಲಾಗಿ ಪರಿಣಮಿಸುವ ಸಾಧ್ಯತೆ ಇದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!