ವಿಜಯಸಾಕ್ಷಿ ಸುದ್ದಿ, ಗದಗ : ಅಹಿಂದ ನಾಯಕ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಷಡ್ಯಂತ್ರ ರೂಪಿಸುತ್ತಿರುವ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ವಿರುದ್ಧ ಕರ್ನಾಟಕ ಪ್ರದೇಶದ ಕುರುಬರ ಸಂಘದ ಜಿಲ್ಲಾ ಘಟಕದ ವತಿಯಿಂದ ಇದೇ ಆಗಸ್ಟ್ 5ರಂದು ನಗರದ ಟಿಪ್ಪು ಸುಲ್ತಾನ್ ಸರ್ಕಲ್ನಿಂದ ಜಿಲ್ಲಾಡಳಿತ ಕಚೇರಿವರೆಗೆ ಮೌನ ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸಲಾಗವದು ಎಂದು ಕುರುಬರ ಸಂಘದ ಜಿಲ್ಲಾಧ್ಯಕ್ಷ ಫಕ್ಕಿರಪ್ಪ ಹೆಬಸೂರ ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಶನಿವಾರ ಕರೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಸುಮಾರು 45 ವರ್ಷಗಳಿಂದ ಕಪ್ಪುಚುಕ್ಕಿ ಇಲ್ಲದೆ ರಾಜಕಾರಣ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದಾರಾಮಯ್ಯರ ಸಾಧನೆಗಳನ್ನು ಸಹಿಸದೆ ಬಿಜೆಪಿ ಹಾಗೂ ಜೆಡಿಎಸ್ನವರು ತೇಜೊವಧೆ ಮಾಡುತ್ತಿದ್ದಾರೆ. ಮುಡಾ ಹಗರಣ ಹಿಡಿದು ಪ್ರತಿಭಟಿಸುತ್ತಿದ್ದಾರೆ. ಆದರೆ, ಸಿದ್ದರಾಮಯ್ಯ ಈ ಪ್ರಕರಣದಲ್ಲಿ ತಪುö್ಪ ಮಾಡಿಲ್ಲ. ಬಿ.ಎಸ್. ಯಡಿಯೂರಪ್ಪ ಜೈಲಿಗೆ ಹೋಗಿ ಬಂದಿದ್ದಾರೆ. ದೇವೇಗೌಡರ ಕುಟುಂಬದ ಬಗ್ಗೆ ಇಡೀ ದೇಶಕ್ಕೆ ಗೊತ್ತಿದೆ. ಆದರೆ, ಸಿದ್ದರಾಮಯ್ಯ ಯಾವುದೇ ಹಗರಣದಲ್ಲಿ ಭಾಗಿಯಾಗಿಲ್ಲ ಎಂದು ಹೇಳಿದರು.
ಅ. 7ರಂದು ಬೆಂಗಳೂರಿನಲ್ಲಿ ಬೃಹತ್ ಸಮಾವೇಶ ಹಮ್ಮಿಕೊಂಡಿದ್ದು, ಆ ಸಭೆಯಲ್ಲಿ ಎಲ್ಲರೂ ಭಾಗವಹಿಸುತ್ತೇವೆ. ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ. ಇದು ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ. ಬಿಜೆಪಿಯವರು ಅಧಿಕಾರದ ಆಸೆಗಾಗಿ ಜನಪರ ಇರುವ ಸರ್ಕಾರವನ್ನು ಅಭದ್ರಗೋಳಿಸಲು ಪ್ರಯತ್ನಿಸುತ್ತಿದ್ದಾರೆ. 15 ಬಾರಿ ಬಜೆಟ್ ಮಂಡಿಸಿದ ಏಕೈಕ ಸಿಎಂ ಸಿದ್ದರಾಮಯ್ಯ ಆಗಿದ್ದಾರೆ.
ಇಂತಹ ನಾಯಕನನ್ನು ಕೆಳಗಿಸಿದರೆ ಅಹಿಂದ ವರ್ಗಗಳಿಂದ ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಫಕ್ಕಿರಪ್ಪ ಹೆಬಸೂರ ಎಚ್ಚರಿಕೆ ನೀಡಿದರು.
ಗದಗ ತಾಲೂಕಾ ಅಧ್ಯಕ್ಷ ನಾಗಪ್ಪ ಗುಗ್ಗರಿ ಅವರು ಮಾತನಾಡಿ, ಬಿಜೆಪಿ, ಜೆಡಿಎಸ್ ಹಾಗೂ ರಾಜ್ಯಪಾಲರು ಕೇಂದ್ರದ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ. ಚುನಾವಣೆ ಪೂರ್ವದಲ್ಲಿ ಜನತೆಗ ನೀಡಿದ ಭರಸವೆಯಂತೆ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿ ಜನ ಮೆಚ್ಚುಗೆ ಗಳಿಸಿರುವುದನ್ನು ಸಹಿಸದೆ ವಿರೋಧ ಪಕ್ಷಗಳು ಕುತಂತ್ರಗಳನ್ನು ಮಾಡುತ್ತಿದ್ದಾರೆ. ಇದಕ್ಕೆ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಶೇಖಣ್ಣ ಕಾಳೆ, ಹೊನ್ನಪ್ಪ ಪೋಟಿ, ಚನ್ನಮ್ಮ ಹುಳಕಣ್ಣವರ, ರೇಖಾ ಜಡಿಯವರ, ನೀಲಪ್ಪ ಗುಡದಣ್ಣವರ, ಶರಣಪ್ಪ ಕುರಿ, ಮಂಜುನಾಥ ಜಡಿ, ಉಮೇಶ ಅರಳಿ, ಕೃಷ್ಣಗೌಡ ಪಾಟೀಲ, ಎಸ್.ಎಸ್. ಕರಡಿ, ಕೆ.ಬಿ. ಕಂಬಳಿ, ನೀಲಪ್ಪ ಪಡಗೇರಿ, ಉಮೇಶ ರೊಳ್ಳಿ, ಮಲ್ಲಪ್ಪ ಕುರಡಗಿ, ಸುರೇಶ ತಳಹಳ್ಳಿ, ಬಸವರಾಜ ಉಮ್ಮಣ್ಣವರ, ಶಿವಕುಮಾರ ಹೈತಾಪೂರ ಮುಂತಾದವರು ಉಪಸ್ಥಿತರಿದ್ದರು.
ಜಿಲ್ಲಾ ಕಾರ್ಯದರ್ಶಿ ಶರಣಬಸಪ್ಪ ಮುದಿಯಣ್ಣನವರ ಮಾತನಾಡಿ, ಜೆಡಿಎಸ್ ಹಾಗೂ ಬಿಜೆಪಿ ನಾಯಕರು ಸಿದ್ದರಾಮಯ್ಯನವರನ್ನು ರಾಜಕೀಯವಾಗಿ ಮುಗಿಸಲು ಸಂಚು ರೂಪಿಸಿದ್ದಾರೆ. ಇಡೀ ದೇಶದಲ್ಲಿ ನರೇಂದ್ರ ಮೋದಿ ಮಾಡಿದ ತಪ್ಪುಗಳ ವಿರುದ್ಧ ರಾಹುಲ್ ಗಾಂಧಿ ನಂತರ ಗಟ್ಟಿ ದ್ವನಿಯಲ್ಲಿ ಮಾತನಾಡಿದ ನಾಯಕ ಸಿದ್ದರಾಮಯ್ಯ. ಇಂತಹ ನಾಯಕನ ವಿರುದ್ಧ ಷಡ್ಯಂತ್ರ ರೂಪಿಸಿದರೇ ಕುರುಬ ಸಮಾಜ ಸುಮ್ಮನಿರುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.



