HomeGadag Newsಧಾರಾಕಾರ ಮಳೆಗೆ ಚಿಗುರೊಡೆದ ಕೃಷಿ ಕನಸು ಶಿರಹಟ್ಟಿಯಲ್ಲಿ ಭರದಿಂದ ಬಿತ್ತನೆ

ಧಾರಾಕಾರ ಮಳೆಗೆ ಚಿಗುರೊಡೆದ ಕೃಷಿ ಕನಸು ಶಿರಹಟ್ಟಿಯಲ್ಲಿ ಭರದಿಂದ ಬಿತ್ತನೆ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಮುಂಗಾರು ಆರಂಭದಲ್ಲೇ ಉತ್ತಮ ಮಳೆಯಾಗಿರುವುದು ಶಿರಹಟ್ಟಿ ತಾಲೂಕಿನ ರೈತರಲ್ಲಿ ಹೊಸ ಆಶಾಭಾವನೆ ಮೂಡಿಸಿದ್ದು, ತಾಲೂಕಿನಾದ್ಯಂತ ಬಿತ್ತನೆ ಕಾರ್ಯ ಜೋರಾಗಿ ಸಾಗುತ್ತಿದೆ. ವಾಡಿಕೆಗಿಂತ ಶೇ.35ರಷ್ಟು ಅಧಿಕ ಮಳೆಯಾಗಿರುವ ಹಿನ್ನೆಲೆಯಲ್ಲಿ ಹೊಲಗಳು ಹದಗೊಂಡಿದ್ದು, ರೈತರು ಬೀಜ ಮತ್ತು ಗೊಬ್ಬರಗಳೊಂದಿಗೆ ಕೃಷಿ ಚಟುವಟಿಕೆಗಳಲ್ಲಿ ತೊಡಗಿದ್ದಾರೆ.

ತಾಲೂಕಿನಲ್ಲಿ ಜನವರಿ 1ರಿಂದ ಜೂನ್ 4ರವರೆಗೆ 130.9 ಮಿ.ಮೀ. ವಾಡಿಕೆ ಮಳೆಯಾಗಬೇಕಾಗಿತ್ತು. ಆದರೆ ಇದೇ ಅವಧಿಯಲ್ಲಿ 176.9 ಮಿ.ಮೀ. ಮಳೆಯಾಗಿದ್ದು, ಶೇ.35ರಷ್ಟು ಹೆಚ್ಚುವರಿ ಮಳೆ ದಾಖಲಾಗಿದೆ. ಮುಂಗಾರು ಪೂರ್ವದಲ್ಲಿಯೇ ಆಗಿಂದಾಗ್ಗೆ ಸುರಿದ ಮಳೆಯಿಂದ ರೈತರು ತಮ್ಮ ಜಮೀನುಗಳನ್ನು ಬಿತ್ತನೆಗೆ ಸಿದ್ಧಪಡಿಸಿಕೊಂಡಿದ್ದರು. ಇದೀಗ ಜಮೀನುಗಳು ಬಿತ್ತನೆಗೆ ಯೋಗ್ಯವಾಗಿರುವುದರಿಂದ ರೈತರು ಬೀಜ-ಗೊಬ್ಬರ ಖರೀದಿಸಿ ಹೊಲಗಳತ್ತ ಮುಖ ಮಾಡಿದ್ದಾರೆ.

ಶಿರಹಟ್ಟಿ ತಾಲೂಕಿನಲ್ಲಿ ಒಟ್ಟು 51,698 ಹೆಕ್ಟೇರ್ ಭೌಗೋಳಿಕ ವಿಸ್ತೀರ್ಣವಿದ್ದು, ಅದರಲ್ಲಿ 46,735 ಹೆಕ್ಟೇರ್ ಪ್ರದೇಶ ಕೃಷಿಗೆ ಯೋಗ್ಯವಾಗಿದೆ. ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 36,430 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡುವ ಗುರಿ ಹೊಂದಲಾಗಿದೆ.

ಈಗಾಗಲೇ 10,355 ಹೆಕ್ಟೇರ್ ಪ್ರದೇಶದಲ್ಲಿ ವಿವಿಧ ಬೆಳೆಗಳ ಬಿತ್ತನೆ ಪೂರ್ಣಗೊಂಡಿದೆ. ಮೆಕ್ಕೆಜೋಳ 8,500 ಹೆಕ್ಟೇರ್, ಹೆಸರು 1,220 ಹೆಕ್ಟೇರ್, ತೊಗರಿ 550 ಹೆಕ್ಟೇರ್, ಶೇಂಗಾ 25 ಹೆಕ್ಟೇರ್, ಸೋಯಾಬಿನ್ 15 ಹೆಕ್ಟೇರ್ ಹಾಗೂ ಹತ್ತಿ 45 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿದೆ. ಮುಂದಿನ ಕೆಲ ದಿನಗಳಲ್ಲಿ ಮಳೆ ಮುಂದುವರಿದರೆ ಬಿತ್ತನೆ ಕಾರ್ಯ ಮತ್ತಷ್ಟು ವೇಗ ಪಡೆಯುವ ನಿರೀಕ್ಷೆಯಿದೆ.

ಕೃಷಿ ಇಲಾಖೆಯ ಅಂಕಿ-ಅಂಶಗಳ ಪ್ರಕಾರ ತಾಲೂಕಿನಲ್ಲಿ ಯೂರಿಯಾ 783.5 ಮೆಟ್ರಿಕ್ ಟನ್, ಡಿಎಪಿ 126.5 ಮೆಟ್ರಿಕ್ ಟನ್ ಹಾಗೂ ಕಾಂಪ್ಲೆಕ್ಸ್ ಗೊಬ್ಬರ 617 ಮೆಟ್ರಿಕ್ ಟನ್ ದಾಸ್ತಾನು ಲಭ್ಯವಿದೆ.

ಹೆಸರು ಬೀಜ 67.20 ಕ್ವಿಂಟಲ್ ದಾಸ್ತಾನು ಇದ್ದು, ಅದರಲ್ಲಿ 66.20 ಕ್ವಿಂಟಲ್ ವಿತರಿಸಲಾಗಿದೆ. ತೊಗರಿ ಬೀಜ 187.20 ಕ್ವಿಂಟಲ್ ವಿತರಿಸಲಾಗಿದೆ. ಮೆಕ್ಕೆಜೋಳ ಬೀಜ 476.24 ಕ್ವಿಂಟಲ್ ಲಭ್ಯವಿದ್ದು, 208.86 ಕ್ವಿಂಟಲ್ ವಿತರಿಸಲಾಗಿದ್ದು, 267.86 ಕ್ವಿಂಟಲ್ ದಾಸ್ತಾನು ಉಳಿದಿದೆ.

ಕೃಷಿ ಇಲಾಖೆಯಿಂದ ಹೆಚ್ಚಿನ ಮಾರ್ಗದರ್ಶನಕ್ಕೆ ಒತ್ತಾಯ

ಪ್ರಸ್ತುತ ಮಾರುಕಟ್ಟೆಯಲ್ಲಿ ವಿವಿಧ ಕಂಪನಿಗಳ ಹಾಗೂ ತಳಿಗಳ ಬೀಜಗಳು ಮಾರಾಟವಾಗುತ್ತಿದ್ದು, ಅವುಗಳ ಗುಣಮಟ್ಟದ ಬಗ್ಗೆ ರೈತರಿಗೆ ಸಮರ್ಪಕ ಮಾಹಿತಿ ನೀಡಬೇಕಾಗಿದೆ. ಕೃಷಿ ಅಧಿಕಾರಿಗಳು ಗ್ರಾಮ ಮಟ್ಟದಲ್ಲಿ ರೈತರ ಜಮೀನುಗಳಿಗೆ ಭೇಟಿ ನೀಡಿ ಬೆಳೆಗಳ ಸ್ಥಿತಿಗತಿ ಪರಿಶೀಲಿಸಬೇಕು ಹಾಗೂ ರೋಗ-ಕೀಟಗಳ ಹತೋಟಿ ಕುರಿತು ಸಲಹೆ ನೀಡಬೇಕು ಎಂಬ ಒತ್ತಾಯ ರೈತರಿಂದ ಕೇಳಿಬಂದಿದೆ.

ಜೊತೆಗೆ ಬೀಜ ಮತ್ತು ಗೊಬ್ಬರಗಳ ಕೃತಕ ಅಭಾವ ಉಂಟಾಗದಂತೆ ನಿಗಾ ವಹಿಸುವುದು, ಬೆಳೆಗಳಲ್ಲಿ ರೋಗ ಹರಡದಂತೆ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಜಾಗೃತಿ ಮೂಡಿಸುವುದು ಹಾಗೂ ಹೆಚ್ಚಿನ ಇಳುವರಿ ಪಡೆಯಲು ವೈಜ್ಞಾನಿಕ ಕೃಷಿ ಪದ್ಧತಿಗಳ ಕುರಿತು ತರಬೇತಿ ನೀಡುವುದು ಅಗತ್ಯವಾಗಿದೆ ಎಂದು ರೈತರು ಅಭಿಪ್ರಾಯಪಟ್ಟಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಸಹಾಯಕ ಕೃಷಿ ನಿರ್ದೇಶಕ ಶಿವಕುಮಾರ ಕಾಶಪ್ಪನವರ, ರೈತರು ಯೂರಿಯಾ ಗೊಬ್ಬರವನ್ನು ಮಿತವಾಗಿ ಬಳಸಬೇಕು. ಬೀಜ ಮತ್ತು ಗೊಬ್ಬರ ಖರೀದಿಸುವಾಗ ಕಡ್ಡಾಯವಾಗಿ ಎಂಆರ್‌ಪಿ ಬಿಲ್ ಪಡೆಯಬೇಕು. ಮಾರಾಟಗಾರರು ಸಹ ರೈತರಿಗೆ ಬಿಲ್ ನೀಡುವುದನ್ನು ಕಡ್ಡಾಯವಾಗಿ ಪಾಲಿಸಬೇಕು. ದಾಸ್ತಾನು ಪ್ರಮಾಣವನ್ನು ಅಂಗಡಿಗಳಲ್ಲಿ ಪ್ರದರ್ಶಿಸುವಂತೆ ಸೂಚಿಸಲಾಗಿದೆ. ನ್ಯಾನೋ ಯೂರಿಯಾ ಹಾಗೂ ನ್ಯಾನೋ ಡಿಎಪಿ ಬಳಕೆ ಮಾಡುವುದರಿಂದ ಗೊಬ್ಬರ ಬಳಕೆ ಕಡಿಮೆಯಾಗಿ ಉತ್ತಮ ಫಲಿತಾಂಶ ಪಡೆಯಬಹುದು ಎಂದು ಸಲಹೆ ನೀಡಿದರು.

“ರೈತರು ಯೂರಿಯಾ ಗೊಬ್ಬರವನ್ನು ಮಿತವಾಗಿ ಬಳಸಬೇಕು. ಬೀಜ-ಗೊಬ್ಬರ ಖರೀದಿಸುವಾಗ ಕಡ್ಡಾಯವಾಗಿ ಬಿಲ್ ಪಡೆಯಬೇಕು. ನ್ಯಾನೋ ಯೂರಿಯಾ ಹಾಗೂ ನ್ಯಾನೋ ಡಿಎಪಿ ಬಳಕೆ ಮಾಡುವುದು ಸೂಕ್ತ.”

 ಶಿವಕುಮಾರ ಕಾಶಪ್ಪನವರ

ಸಹಾಯಕ ಕೃಷಿ ನಿರ್ದೇಶಕ


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!