ವಿಜಯಸಾಕ್ಷಿ ಸುದ್ದಿ, ಧಾರವಾಡ: ಆಸ್ಪತ್ರೆಗಳಿಗೆ ಬರುವ ರೋಗಿಗಳಿಗೆ ಉತ್ತಮ ಚಿಕಿತ್ಸೆ, ಉಚಿತ ಔಷಧೋಪಚಾರ ನೀಡಬೇಕು. ಗರ್ಭಿಣಿಯರಿಗೆ, ಬಾಣಂತಿಯರಿಗೆ ಮತ್ತು ನವಜಾತ ಶಿಶುಗಳಿಗೆ ಸಕಾಲಕ್ಕೆ ಅಗತ್ಯ ಚಿಕಿತ್ಸೆ, ಔಷಧಿ ನೀಡಿ, ಯಾವುದೇ ಸಾವು-ನೋವು ಆಗದಂತೆ ವೈದ್ಯರು ಮುನ್ನೆಚ್ಚರಿಕೆ ವಹಿಸಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದರು.
ಅವರು ಧಾರವಾಡ ಜಿಲ್ಲಾ ಆಸ್ಪತ್ರೆಯ ವಿವಿಧ ವಿಭಾಗಗಳಿಗೆ, ತಾಯಿ-ಮಕ್ಕಳ ಆಸ್ಪತ್ರೆಗೆ ಭೇಟಿ ನೀಡಿ ಮಾತನಾಡಿದರು.
ಜಿಲ್ಲಾ ಆಸ್ಪತ್ರೆಯ ಹೊರ ರೋಗಿಗಳ ಚಿಕಿತ್ಸಾ ವಿಭಾಗ, ಶಸ್ತ್ರ ಚಿಕಿತ್ಸಾ ವಿಭಾಗ, ಹೆರಿಗೆ ವಿಭಾಗ, ತಾಯಿ-ಮಕ್ಕಳ ಆಸ್ಪತ್ರೆ, ರೋಗಿ ಪಾಲಕರ ವಿಶ್ರಾಂತಿ ಸ್ಥಳಗಳಿಗೆ ಭೇಟಿ ನೀಡಿ, ಚಿಕಿತ್ಸೆಗೆ ಆಗಮಿಸಿದ್ದ ರೋಗಿಗಳನ್ನು, ಪಾಲಕರನ್ನು ಮಾತನಾಡಿಸಿ, ಜಿಲ್ಲಾ ಆಸ್ಪತ್ರೆ ವೈದ್ಯರ ಸ್ಪಂದನೆ, ಚಿಕಿತ್ಸೆಗಳ ಬಗ್ಗೆ ಮಾಹಿತಿ ಪಡೆದರು. ಜಿಲ್ಲಾ ಆಸ್ಪತ್ರೆಯ ಕಾರ್ಯನಿರ್ವಹಣೆ ಬಗ್ಗೆ ಸಾರ್ವಜನಿಕರಿಂದ ಅಭಿಪ್ರಾಯ ಪಡೆದುಕೊಂಡರು.
ಶೌಚಾಲಯಗಳಿಗೆ ಭೇಟಿ ನೀಡಿ, ನೀರು, ನೈರ್ಮಲ್ಯ ಕಾಪಾಡುವಂತೆ ಮತ್ತು ಶೌಚಾಲಯಗಳನ್ನು ನಿರಂತರವಾಗಿ ಸ್ವಚ್ಛಗೊಳಿಸುವಂತೆ ಅವರು ತಿಳಿಸಿದರು. ಚಿಕಿತ್ಸೆಗೆ ಆಗಮಿಸುವ ರೋಗಿಗಳಿಂದ ಅಥವಾ ರೋಗಿಗಳ ಸಂಬಂಧಿಕರಿಂದ ಯಾವುದೇ ಹಣ, ಇತರೆ ವಸ್ತುಗಳನ್ನು ಪಡೆಯುತ್ತಾರೆಯೇ ಮತ್ತು ರೋಗಿಗಳಿಗೆ ಹೊರಗಿನ ಔಷಧಿಗಳನ್ನು ಸೂಚಿಸುತ್ತಾರೆಯೇ ಎಂದು ಪ್ರಶ್ನಿಸಿ ಸಾರ್ವಜನಿಕರಿಂದ ಮಾಹಿತಿ ಪಡೆದುಕೊಂಡರು. ಸಾರ್ವಜನಿಕರು ಅಂತಹ ಯಾವುದೇ ಘಟನೆಗಳು ನಡೆದಿರುವುದಿಲ್ಲ. ಆಸ್ಪತ್ರೆಯಲ್ಲಿ ಲಭ್ಯವಿರುವ ಔಷಧಿಯನ್ನು ನೀಡುತ್ತಾರೆ. ಚಿಕಿತ್ಸೆ ನೀಡುವಲ್ಲಿ ಯಾವುದೇ ರೀತಿಯ ವಿಳಂಬ, ತೊಂದರೆ ಇರುವುದಿಲ್ಲ ಎಂದು ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.
ನಂತರ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗಳ ಚಿಕಿತ್ಸೆಗಾಗಿ 250 ಹಾಸಿಗೆ ಹಾಗೂ ತಾಯಿ-ಮಕ್ಕಳ ಆಸ್ಪತ್ರೆಯ 100 ಹಾಸಿಗೆ ಸೇರಿ ಒಟ್ಟು 350 ಬೆಡ್ ವ್ಯವಸ್ಥೆ ಇದೆ. ಪ್ರತಿದಿನ ಸುಮಾರು 1,100ದಿಂದ 1,700ರಷ್ಟು ಹೊರರೋಗಿಗಳು ನೋಂದಣಿ ಮಾಡಿಕೊಳ್ಳುತ್ತಾರೆ. ಅಂದಾಜು ಪ್ರತಿದಿನ 150 ಜನರಿಗೆ ಎಕ್ಸರೇ, 35 ಜನರಿಗೆ ಓ.ಬಿ.ಜಿ ಸ್ಕ್ಯಾನ್, 80 ಜನರಿಗೆ ಜನರಲ್ ಸ್ಕ್ಯಾಯನ್, 25 ಜನರಿಗೆ ಸಿಟಿ ಸ್ಕ್ಯಾನ್ ಮಾಡಲಾಗುತ್ತದೆ. ಪ್ರತಿ ತಿಂಗಳು ಸರಾಸರಿ 450ಕ್ಕೂ ಹೆಚ್ಚು ಹೆರಿಗೆ ಆಗುತ್ತವೆ. 400ಕ್ಕೂ ಹೆಚ್ಚು ಜನರು ಶಸ್ತ್ರ ಚಿಕಿತ್ಸೆಗೆ ಒಳಪಡುತ್ತಾರೆ. ಆಯುಷ್ಮಾನ್ ಭಾರತ, ಪ್ರಧಾನ ಮಂತ್ರಿ ಜನಾರೋಗ್ಯ ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ ಯೋಜನೆಯಡಿಯಲ್ಲಿ ಶೇ. 89ರಷ್ಟು ಚಿಕಿತ್ಸಾ ಪೂರ್ವ ದೃಢೀಕರಣದಿಂದ ಆರ್ಥಿಕ ಸೌಲಭ್ಯ ಪಡೆಯಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ತಿಳಿಸಿದರು.
ಎಚ್.ಎಂ.ಪಿ.ವಿ ಪ್ರಕರಣಗಳ ನಿರ್ವಹಣೆಗೆ, ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಇದುವರೆಗೆ ಯಾವುದೇ ಪ್ರಕರಣಗಳು ವರದಿಯಾಗಿಲ್ಲ. ಅಗತ್ಯ ಬಿದ್ದರೆ ಚಿಕಿತ್ಸೆಗಾಗಿ 10 ಬೆಡ್ ಮೀಸಲಿಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಸಂಗಪ್ಪ ಗಾಬಿ, ಜಿಲ್ಲಾ ಆರೋಗ್ಯಧಿಕಾರಿ ಡಾ. ಶಶಿ ಪಾಟೀಲ, ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ. ಸುಜಾತ ಹಸವೀಮಠ ಅವರು ಜಿಲ್ಲಾಧಿಕಾರಿಗಳ ಭೇಟಿ ಸ್ಥಳದಲ್ಲಿ ಹಾಜರಿದ್ದು, ಅಗತ್ಯ ಮಾಹಿತಿ, ವಿವರಣೆ ನೀಡಿದರು.
ಜಿಲ್ಲೆಯಲ್ಲಿ ಗರ್ಭಿಣಿಯರ ಸಾವಿನ ಪ್ರಮಾಣ ಕಡಿಮೆ ಇದೆ. ಈಗ ಆಗುತ್ತಿರುವ ಸಾವುಗಳನ್ನು ನಿಯಂತ್ರಿಸಲು ಸೂಕ್ತ ಮುಂಜಾಗೃತವಹಿಸಲಾಗುತ್ತಿದೆ. ಧಾರವಾಡ ಜಿಲ್ಲೆಗೆ ನೆರೆಯ ಉತ್ತರಕನ್ನಡ, ಬೆಳಗಾವಿ, ಬಾಗಲಕೋಟ, ಗದಗ ಮತ್ತು ಹಾವೇರಿ ಜಿಲ್ಲೆಯ ರೋಗಿಗಳು, ಗರ್ಭಿಣಿಯರು ಆಗಮಿಸಿ ಚಿಕಿತ್ಸೆ ಪಡೆಯುತ್ತಾರೆ ಎಂದು ಜಿಲ್ಲಾಧಿಕಾರಿಗಳು ವಿವರಿಸಿದರು.



