ತಮಿಳು ಸಿನಿರಂಗದ ಜನಪ್ರಿಯ ನಟ ದಳಪತಿ ವಿಜಯ್ ಅವರ ವೈಯಕ್ತಿಕ ಜೀವನ ಮತ್ತೆ ಸುದ್ದಿಯ ಕೇಂದ್ರಬಿಂದುವಾಗಿದೆ. 27 ವರ್ಷಗಳ ದಾಂಪತ್ಯ ಜೀವನದ ಬಳಿಕ ಪತ್ನಿ ಸಂಗೀತಾ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ ಎಂಬ ವರದಿಗಳ ನಡುವೆ, ವಿಜಯ್ ಅವರು ನಟಿ ತ್ರಿಷಾ ಕೃಷ್ಣನ್ ಜೊತೆ ಸಾರ್ವಜನಿಕವಾಗಿ ಕಾಣಿಸಿಕೊಂಡಿರುವುದು ಹಲವು ಪ್ರಶ್ನೆಗಳಿಗೆ ಕಾರಣವಾಗಿದೆ.
ಚೆನ್ನೈನಲ್ಲಿ ನಡೆದ ಎಸ್. ಕಲ್ಪತಿ ಸುರೇಶ್ ಮತ್ತು ಮೀನಾಕ್ಷಿ ಸುರೇಶ್ ಅವರ ಪುತ್ರನ ವಿವಾಹ ಸಮಾರಂಭದಲ್ಲಿ ವಿಜಯ್ ಹಾಗೂ ತ್ರಿಷಾ ಒಟ್ಟಿಗೆ ಹಾಜರಾಗಿದ್ದರು. ಈ ಕಾರ್ಯಕ್ರಮದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದ್ದು, ನೆಟ್ಟಿಗರು ವಿವಿಧ ರೀತಿಯಲ್ಲಿ ಪ್ರತಿಕ್ರಿಯಿಸುತ್ತಿದ್ದಾರೆ.
ವಿಜಯ್ ಅವರ ವಿಚ್ಛೇದನ ವಿಚಾರದಲ್ಲಿ ತ್ರಿಷಾ ಹೆಸರು ಕೇಳಿಬರುತ್ತಿರುವುದು ಈ ಹಿಂದೆ ಹರಿದಾಡಿದ ಗಾಸಿಪ್ಗಳಿಗೆ ಮತ್ತೆ ಜೀವ ತುಂಬಿದೆ. ಇಬ್ಬರೂ ದೀರ್ಘಕಾಲದಿಂದ ಸ್ನೇಹಿತರಾಗಿದ್ದು, ಹಲವು ಚಿತ್ರಗಳಲ್ಲಿ ಜೊತೆಯಾಗಿ ನಟಿಸಿದ್ದಾರೆ.
ಈ ವಿವಾದದ ಬಗ್ಗೆ ತಮಿಳುನಾಡಿನಲ್ಲಿ ವಿಭಿನ್ನ ಅಭಿಪ್ರಾಯಗಳು ಕೇಳಿಬರುತ್ತಿವೆ. ಕೆಲವರು ವಿಜಯ್ ಅವರ ನೈತಿಕತೆ ಬಗ್ಗೆ ಪ್ರಶ್ನೆ ಎತ್ತುತ್ತಿದ್ದರೆ, ಅಭಿಮಾನಿಗಳು ಇದು ಮುಂಬರುವ ರಾಜಕೀಯ ಬೆಳವಣಿಗೆಗಳ ನಡುವೆ ಸೃಷ್ಟಿಸಲಾದ ವಿವಾದ ಎಂದು ಹೇಳುತ್ತಿದ್ದಾರೆ.
ವಿಜಯ್ ಅವರ ರಾಜಕೀಯ ಪ್ರವೇಶದ ಹಿನ್ನೆಲೆ ಮತ್ತು ಮುಂದಿನ ವಿಧಾನಸಭಾ ಚುನಾವಣೆಗಳ ಸನ್ನಿವೇಶದಲ್ಲಿ ಈ ವಿಷಯ ಯಾವ ರೀತಿಯ ತಿರುವು ಪಡೆಯುತ್ತದೆ ಎಂಬುದು ಈಗ ಕುತೂಹಲ ಮೂಡಿಸಿದೆ.



