ಬೆಂಗಳೂರು: ಕಾಂಗ್ರೆಸ್ ಸರ್ಕಾರವನ್ನ ಶಾಶ್ವತವಾಗಿ ಮನೆಗೆ ಕಳುಹಿಸುವ ದಿನ ಬಹಳ ದೂರವಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಸುಳ್ಳು, ಅಪಪ್ರಚಾರ, ಕಪೋಲಕಲ್ಪಿತ ಆರೋಪಗಳು,
ಈಡೇರಿಸಲಾಗದ ಭರವಸೆಗಳ ಆಧಾರದ ಮೇಲೆ ಕನ್ನಡಿಗರಿಗೆ ವಂಚನೆ ಮಾಡಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರವನ್ನ, ಕನ್ನಡಿಗರು ಗಂಟು ಮೂಟೆ ಕಟ್ಟಿ ಶಾಶ್ವತವಾಗಿ ಮನೆಗೆ ಕಳುಹಿಸುವ ದಿನ ಬಹಳ ದೂರವಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಅಂಬಿಕಾಪತಿ ಅವರು ಬಿಬಿಎಂಪಿಗೆ ಸಂಬಂಧಿಸಿದಂತೆ ಮಾಡಿದ್ದ 40% ಕಮಿಷನ್ ಆರೋಪಗಳು ಶುದ್ಧ ಸುಳ್ಳೆಂದು ಲೋಕಾಯುಕ್ತ ತನಿಖಾ ಅಧಿಕಾರಿಗಳು ಸಲ್ಲಿಸಿರುವ ವರದಿಯಲ್ಲೂ ಸಾಬೀತಾಗಿದೆ. ಇಷ್ಟಾದರೂ ಮತ್ತೊಮ್ಮೆ ಎಸ್ ಐಟಿ ರಚನೆ ಮಾಡುತ್ತಿರುವ ಉದ್ದೇಶವೇನು? ಇದು ದ್ವೇಷ ರಾಜಕಾರಣವಲ್ಲದೇ ಮತ್ತೇನು? ಎಂದು ಪ್ರಶ್ನಿಸಿದ್ದಾರೆ.



