ವಿಜಯಸಾಕ್ಷಿ ಸುದ್ದಿ, ಗದಗ: ನಾಡಿನ ಲಕ್ಷಾಂತರ ಬಡ ಮತ್ತು ಮಧ್ಯಮ ವರ್ಗದ ಮಕ್ಕಳಿಗೆ ಶಿಕ್ಷಣದ ಬೆಳಕು ನೀಡಿದ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳ ಅಸ್ತಿತ್ವ ಇಂದು ಅಪಾಯದಲ್ಲಿದ್ದು, ಕನ್ನಡ ಶಾಲೆಗಳನ್ನು ಉಳಿಸಿ ಬೆಳೆಸಿದರೆ ಮಾತ್ರ ಕನ್ನಡ ಭಾಷೆಯನ್ನು ಉಳಿಸಲು ಸಾಧ್ಯ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.
ನಗರದ ಸಿದ್ದಲಿಂಗ ನಗರದ ಸರ್ಕಾರಿ ಪ್ರೌಢಶಾಲೆಯಲ್ಲಿ ಅವ್ವ ಸೇವಾ ಟ್ರಸ್ಟ್ ವತಿಯಿಂದ ಸಾರ್ಥಕ ಸೇವೆ ಸಲ್ಲಿಸಿದ ಶಿಕ್ಷಕರು ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.
ಶಿಕ್ಷಣವು ಮಕ್ಕಳ ಭವಿಷ್ಯ ರೂಪಿಸುವ ಅತ್ಯಂತ ಪ್ರಮುಖ ಸಾಧನವಾಗಿದೆ. ಬಡ ಹಾಗೂ ಮಧ್ಯಮ ವರ್ಗದ ಮಕ್ಕಳಿಗೆ ಶಿಕ್ಷಣ ನೀಡುತ್ತಿರುವ ಸರ್ಕಾರಿ ಕನ್ನಡ ಶಾಲೆಗಳು ಒಂದೊಂದಾಗಿ ಮುಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಒಂದು ಕಡೆ ಸರ್ಕಾರ ಕನ್ನಡ ಭಾಷೆ ಉಳಿಸುವ ಬಗ್ಗೆ ಮಾತನಾಡುತ್ತಿದ್ದರೆ, ಮತ್ತೊಂದು ಕಡೆ ಕನ್ನಡದ ಬೇರುಗಳಾದ ಶಾಲೆಗಳೇ ಮುಚ್ಚುತ್ತಿರುವುದು ಕಳವಳಕಾರಿ ಸಂಗತಿ ಎಂದು ಹೇಳಿದರು.
ಆಂಗ್ಲ ಮಾಧ್ಯಮದ ವ್ಯಾಮೋಹದಿಂದ ಪಾಲಕರು ಕನ್ನಡ ಶಾಲೆಗಳಿಂದ ದೂರವಾಗುತ್ತಿದ್ದಾರೆ. ಈ ಪರಿಸ್ಥಿತಿ ಬದಲಾಗಬೇಕಾದರೆ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ, ಅಗತ್ಯ ಮೂಲಸೌಕರ್ಯ ಹಾಗೂ ಆಧುನಿಕ ಕಲಿಕಾ ವ್ಯವಸ್ಥೆ ಕಲ್ಪಿಸಬೇಕು. ಪ್ರಾಥಮಿಕ ಹಂತದಿಂದಲೇ ಸ್ಪರ್ಧಾತ್ಮಕ ಶಿಕ್ಷಣಕ್ಕೆ ಒತ್ತು ನೀಡುವ ಮೂಲಕ ಪಾಲಕರಲ್ಲಿ ವಿಶ್ವಾಸ ಮೂಡಿಸಬೇಕು ಎಂದು ಸಲಹೆ ನೀಡಿದರು.
ಶಿಕ್ಷಕರಿಗೆ ಬೋಧನೆ ಹೊರತುಪಡಿಸಿ ಅನಗತ್ಯ ಆಡಳಿತಾತ್ಮಕ ಹಾಗೂ ಇತರ ಜವಾಬ್ದಾರಿಗಳನ್ನು ನೀಡಬಾರದು. ಶಿಕ್ಷಕರು ಒತ್ತಡಮುಕ್ತವಾಗಿ ಪಾಠ ಮಾಡುವ ವಾತಾವರಣ ನಿರ್ಮಿಸಿದರೆ ಮಾತ್ರ ಶಿಕ್ಷಣದ ಗುಣಮಟ್ಟ ಹೆಚ್ಚಲು ಸಾಧ್ಯ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಪ್ರೊ. ಎಸ್.ವಿ. ಸಂಕನೂರ, ಡಾ. ಬಸವರಾಜ ಧಾರವಾಡ, ಎಸ್.ಎಸ್. ಪಟ್ಟಣಶೆಟ್ಟಿ, ಐ.ಬಿ. ಬೆನಕಪ್ಪ, ವಿ.ವಿ. ನಡುವಿನಮನಿ, ಶಂಕರ್ ಹಡಗಲಿ, ವಿದ್ಯಾವತಿ ಗಡಗಿ, ಜಯಲಕ್ಷ್ಮಿ ಅಣ್ಣಿಗೇರಿ, ಎಸ್.ಎಂ. ಅಗಡಿ, ಸುನೀಲ ವರ್ಣೇಕರ, ಮಾಂತೇಶ ಚಿತ್ತರಗಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
“ಕನ್ನಡ ಶಾಲೆಗಳನ್ನು ಉಳಿಸಿ ಬೆಳೆಸಿದರೆ ಮಾತ್ರ ಕನ್ನಡ ಭಾಷೆ ಉಳಿಯುತ್ತದೆ. ಶಾಲೆಗಳ ಅಳಿವು ತಡೆಯಲು ಸರ್ಕಾರ ಇಂದಿನಿಂದಲೇ ವಿಶೇಷ ಯೋಜನೆಗಳನ್ನು ರೂಪಿಸಬೇಕು.”
– ಬಸವರಾಜ ಹೊರಟ್ಟಿ, ವಿಧಾನ ಪರಿಷತ್ ಸಭಾಪತಿ



