ಲಕ್ನೋ: ಅಯೋಧ್ಯೆ ರಾಮಮಂದಿರದ ದೇಣಿಗೆಗೆ ಸಂಬಂಧಿಸಿದ ಆರೋಪಗಳ ವಿಚಾರವಾಗಿ ಕಾಂಗ್ರೆಸ್ ಹಾಗೂ ಸಮಾಜವಾದಿ ಪಕ್ಷದ ವಿರುದ್ಧ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ರಾಮಭಕ್ತರ ಮೇಲೆ ಗುಂಡು ಹಾರಿಸಿದವರು ಮತ್ತು ಶ್ರೀರಾಮನ ಅಸ್ತಿತ್ವವನ್ನೇ ಪ್ರಶ್ನಿಸಿದ್ದವರು ಇಂದು ಧರ್ಮದ ಬಗ್ಗೆ ಮಾತನಾಡುತ್ತಿರುವುದು ವಿಪರ್ಯಾಸ ಎಂದು ಟೀಕಿಸಿದ್ದಾರೆ.
ಖಾಸಗಿ ವಾಹಿನಿಯೊಂದರ ಕಾರ್ಯಕ್ರಮದಲ್ಲಿ ಮಾತನಾಡಿದ ಯೋಗಿ ಆದಿತ್ಯನಾಥ್, ರಾಮಮಂದಿರ ದೇಣಿಗೆಗೆ ಸಂಬಂಧಿಸಿದಂತೆ ಪ್ರತಿಪಕ್ಷಗಳು ಮಾಡುತ್ತಿರುವ ಭ್ರಷ್ಟಾಚಾರದ ಆರೋಪಗಳಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು.
ಸಮಾಜವಾದಿ ಪಕ್ಷದ ಹಿಂದಿನ ಆಡಳಿತವನ್ನು ಉಲ್ಲೇಖಿಸಿದ ಅವರು, ರಾಮ ಜನ್ಮಭೂಮಿ ಚಳವಳಿಯ ವೇಳೆ ಕರಸೇವಕರ ಮೇಲೆ ಲಾಠಿಚಾರ್ಜ್ ನಡೆಸಿ, ಗುಂಡು ಹಾರಿಸಲು ಆದೇಶ ನೀಡಿದವರೇ ಇಂದು ಧರ್ಮದ ಬಗ್ಗೆ ಉಪದೇಶ ನೀಡುತ್ತಿದ್ದಾರೆ ಎಂದು ಆರೋಪಿಸಿದರು. ರಾಜಕೀಯ ಲಾಭ ಹಾಗೂ ಚುನಾವಣಾ ಅನಿವಾರ್ಯತೆಗಾಗಿ ಪ್ರತಿಪಕ್ಷಗಳು ತಮ್ಮ ನಿಲುವು ಬದಲಾಯಿಸುತ್ತಿವೆ ಎಂದು ಹೇಳಿದರು.
ಭಾರತದ ಅಸ್ಮಿತೆ ಮತ್ತು ಧಾರ್ಮಿಕ ನಂಬಿಕೆಗಳ ವಿರುದ್ಧ ಪ್ರತಿಪಕ್ಷಗಳು ನಿರಂತರವಾಗಿ ದಾಳಿ ನಡೆಸುತ್ತಿವೆ ಎಂದು ಆರೋಪಿಸಿದ ಯೋಗಿ, ತನಿಖೆ ಪೂರ್ಣಗೊಳ್ಳುವ ಮುನ್ನವೇ ಇಡೀ ರಾಮಮಂದಿರ ಟ್ರಸ್ಟ್ಗೆ ಕಳಂಕ ತರುವುದು, ಅಯೋಧ್ಯೆ ಹಾಗೂ ಶ್ರೀರಾಮನ ಪರಂಪರೆಯನ್ನು ಅವಮಾನಿಸುವುದು ಸರಿಯಲ್ಲ ಎಂದು ಪ್ರಶ್ನಿಸಿದರು.
ರಾಮಮಂದಿರ ದೇಣಿಗೆ ಪ್ರಕರಣದ ಕುರಿತು ರಾಜ್ಯ ಸರ್ಕಾರ ಈಗಾಗಲೇ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಿದೆ ಎಂದು ತಿಳಿಸಿದ ಅವರು, ಯಾರ ಬಳಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಸಾಕ್ಷ್ಯಾಧಾರಗಳಿದ್ದರೂ ಅವನ್ನು ಎಸ್ಐಟಿಗೆ ಸಲ್ಲಿಸಬೇಕು ಎಂದು ಮನವಿ ಮಾಡಿದರು.
ತನಿಖಾ ವರದಿ ಬರುವವರೆಗೂ ರಾಮಭಕ್ತರ ಭಾವನೆಗಳಿಗೆ ಧಕ್ಕೆ ಉಂಟುಮಾಡುವ ರೀತಿಯ ಸುಳ್ಳು ವದಂತಿಗಳನ್ನು ಹರಡಬಾರದು ಎಂದು ಪ್ರತಿಪಕ್ಷಗಳಿಗೆ ಎಚ್ಚರಿಕೆ ನೀಡಿದ ಮುಖ್ಯಮಂತ್ರಿ, ತನಿಖೆಯಲ್ಲಿ ಯಾರೇ ತಪ್ಪಿತಸ್ಥರೆಂದು ಸಾಬೀತಾದರೂ ಅವರ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.



