ತುಮಕೂರು: ಉರುಳಿಗೆ ಸಿಲುಕಿ ಸಾವನ್ನಪ್ಪಿದ್ದ ಚಿರತೆಯನ್ನು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡದೆ ಗ್ರಾಮಸ್ಥರೇ ಸುಟ್ಟು ಹಾಕಿದ ಘಟನೆ ತುಮಕೂರು ತಾಲೂಕಿನ ಗೌರಗೊಂಡನಹಳ್ಳಿ ಗೇಟ್ ಬಳಿ ನಡೆದಿದೆ.
ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವಿಡಿಯೋ ಆಧರಿಸಿ ಅರಣ್ಯ ಇಲಾಖೆ ಅಧಿಕಾರಿಗಳು ಮೂವರನ್ನು ಬಂಧಿಸಿದ್ದಾರೆ.
ಬಂಧಿತರನ್ನು ಗೌರಗೊಂಡನಹಳ್ಳಿಯ ಜಿ.ಡಿ. ಶಿವಕುಮಾರ್, ನಾರಾಯಣಪ್ಪ ಹಾಗೂ ಚಂದ್ರಶೇಖರ್ ಎಂದು ಗುರುತಿಸಲಾಗಿದೆ.
ಕಾಡುಪ್ರಾಣಿಗಳ ಹಾವಳಿ ತಪ್ಪಿಸುವ ಉದ್ದೇಶದಿಂದ ನಾರಾಯಣಪ್ಪ ಅವರ ಜಮೀನಿನಲ್ಲಿ ಉರುಳು ಹಾಕಲಾಗಿತ್ತು ಎನ್ನಲಾಗಿದೆ. ಇತ್ತೀಚೆಗೆ ಈ ಉರುಳಿಗೆ ಚಿರತೆ ಸಿಲುಕಿ ಸಾವನ್ನಪ್ಪಿತ್ತು. ಚಿರತೆ ಸಾವನ್ನಪ್ಪಿರುವ ವಿಚಾರವನ್ನು ಅರಣ್ಯಾಧಿಕಾರಿಗಳಿಗೆ ತಿಳಿಸುವ ಬದಲು ಗ್ರಾಮಸ್ಥರು ಅದನ್ನು ಸ್ಥಳದಲ್ಲೇ ಸುಟ್ಟು ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.
ಚಿರತೆ ಸುಡುವ ಸಂದರ್ಭದಲ್ಲಿ ಗ್ರಾಮದ ಕೆಲ ಯುವಕರು ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ವಿಡಿಯೋ ವೈರಲ್ ಆದ ಬಳಿಕ ಅರಣ್ಯ ಇಲಾಖೆ ಅಧಿಕಾರಿಗಳ ಗಮನಕ್ಕೆ ಘಟನೆ ಬಂದಿದೆ.
ವಿಡಿಯೋ ಆಧರಿಸಿ ತನಿಖೆ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ಮುಂದುವರಿದಿದೆ.



