ಕಾರವಾರ: ಈಜಲು ತೆರಳಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಉಂಚಳ್ಳಿ ಸಮೀಪದ ಮಾಸ್ತಿಜಡ್ಡಿ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಮಾಸ್ತಿಜಡ್ಡಿ ಗ್ರಾಮದ ಮದನ್ ನಾಯ್ಕ (17) ಹಾಗೂ ಹೊನ್ನಾವರದ ಲೋಹಿತ್ ನಾಯ್ಕ (19) ಎಂದು ಗುರುತಿಸಲಾಗಿದೆ.
ಗ್ರಾಮದ ಹಳ್ಳಕ್ಕೆ ನಿರ್ಮಿಸಲಾಗಿದ್ದ ಬಾಂದಾರದಲ್ಲಿ ಈಜಲು ತೆರಳಿದ್ದ ವೇಳೆ ಇಬ್ಬರೂ 15 ಅಡಿ ಆಳದ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಶ್ರೀ ಮಾರಿಕಾಂಬ ರೆಸ್ಕ್ಯೂ ಟೀಮ್ನ ಗೋಪಾಲ ಗೌಡ ನೇತೃತ್ವದ ತಂಡ ಶೋಧ ಕಾರ್ಯ ನಡೆಸಿ ಇಬ್ಬರ ಮೃತದೇಹಗಳನ್ನು ನೀರಿನಿಂದ ಹೊರತೆಗೆದಿದೆ.
ಘಟನಾ ಸ್ಥಳಕ್ಕೆ ಬನವಾಸಿ ಠಾಣೆ ಪಿಎಸ್ಐ ಮಹಾಂತಪ್ಪ ಕುಂಬಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಶಿರಸಿ ಆಸ್ಪತ್ರೆಗೆ ರವಾನಿಸಲಾಗಿದೆ.
ಈ ಸಂಬಂಧ ಬನವಾಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.



