ಮಂಡ್ಯ: ಈಜಲು ತೆರಳಿದ್ದ ಬಾಲಕ ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿದ ದುರ್ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ನಂದೀಪುರ ಗ್ರಾಮದಲ್ಲಿ ನಡೆದಿದೆ.
ಮೃತ ಬಾಲಕನನ್ನು ಮಳವಳ್ಳಿ ತಾಲೂಕಿನ ದಳವಾಯಿ ಕೋಡಿಹಳ್ಳಿ ಗ್ರಾಮದ ಶಿವಣ್ಣ ಅವರ ಪುತ್ರ ಪೃಥ್ವಿನ್ (15) ಎಂದು ಗುರುತಿಸಲಾಗಿದೆ. ಆತ ದಳವಾಯಿ ಕೋಡಿಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದನು.
ಭಾನುವಾರ ಶಾಲೆಗೆ ರಜೆ ಇದ್ದ ಕಾರಣ, ಪೃಥ್ವಿನ್ ತನ್ನ ನಾಲ್ವರು ಸ್ನೇಹಿತರೊಂದಿಗೆ ಮಧ್ಯಾಹ್ನ ಈಜಲು ತೆರಳಿದ್ದನು. ಆದರೆ ಸಂಜೆವರೆಗೆ ಮನೆಗೆ ವಾಪಸ್ಸಾಗದ ಹಿನ್ನೆಲೆಯಲ್ಲಿ ಪೋಷಕರು ಹುಡುಕಾಟ ಆರಂಭಿಸಿದರು.
ತನಿಖೆ ವೇಳೆ ಬಾಲಕ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಮಾಹಿತಿ ಲಭ್ಯವಾಯಿತು. ನಂತರ ನಂದೀಪುರ ಗ್ರಾಮದ ರಾಜೇಗೌಡ ಅವರ ಜಮೀನಿನಲ್ಲಿರುವ ಕೃಷಿ ಹೊಂಡದಲ್ಲಿ ಸೋಮವಾರ ಬೆಳಿಗ್ಗೆ ಬಾಲಕನ ಮೃತದೇಹ ಪತ್ತೆಯಾಯಿತು. ಈ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.



