HomeKarnataka Newsವಿನಯ್ ಕುಲಕರ್ಣಿ ಜಾಮೀನು ಅರ್ಜಿ: ಆದೇಶ ಕಾಯ್ದಿರಿಸಿದ ಹೈಕೋರ್ಟ್

ವಿನಯ್ ಕುಲಕರ್ಣಿ ಜಾಮೀನು ಅರ್ಜಿ: ಆದೇಶ ಕಾಯ್ದಿರಿಸಿದ ಹೈಕೋರ್ಟ್

For Dai;y Updates Join Our whatsapp Group

Spread the love

ಬೆಂಗಳೂರು: ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರು ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಪೂರ್ಣಗೊಳಿಸಿ, ಆದೇಶ ಕಾಯ್ದಿರಿಸಿದೆ. ವಿನಯ್ ಕುಲಕರ್ಣಿ ಅವರು ಎರಡನೇ ಬಾರಿ ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಸುನೀಲ್ ದತ್ತ ಯಾದವ್ ಅವರು ನಡೆಸಿದರು.

ಅರ್ಜಿದಾರರ ಪರ ವಕೀಲರು ವಾದ ಮುಂದುವರೆಸಿ, ಕೊಲೆ ಪ್ರಕರಣದಲ್ಲಿ ಕುಲಕರ್ಣಿ ಅವರ ಯಾವುದೇ ಪಾತ್ರವಿಲ್ಲ ಎಂದು ಪ್ರತಿಪಾದಿಸಿದರು. ಅಲ್ಲದೆ, ಕೊಲೆ ನಡೆದ ಸ್ಥಳದಲ್ಲೂ ಅವರು ಹಾಜರಿರಲಿಲ್ಲ. ಪ್ರಕರಣದಲ್ಲಿ ಇತರೆ ಆರೋಪಿಗಳಿಗೆ ಈಗಾಗಲೇ ಜಾಮೀನು ಮಂಜೂರಾಗಿರುವುದನ್ನೂ ನ್ಯಾಯಾಲಯದ ಗಮನಕ್ಕೆ ತಂದರು.

ಜಾಮೀನು ನೀಡುವ ಸಂದರ್ಭದಲ್ಲಿ ವಿಧಿಸುವ ಷರತ್ತುಗಳನ್ನು ಉಲ್ಲಂಘಿಸುವುದು ಮತ್ತು ಜಾಮೀನು ರದ್ದುಪಡಿಸುವುದು ಎರಡು ವಿಭಿನ್ನ ಅಂಶಗಳಾಗಿವೆ ಎಂದು ವಾದಿಸಿದ ವಕೀಲರು, ಅರ್ಜಿದಾರರಿಗೆ ಜಾಮೀನು ನೀಡಿರುವುದು ತಪ್ಪು ಎಂದು ಸುಪ್ರೀಂ ಕೋರ್ಟ್ ಹೇಳಿಲ್ಲ ಎಂದು ಸ್ಪಷ್ಟಪಡಿಸಿದರು. ಷರತ್ತು ಉಲ್ಲಂಘನೆಯ ಹಿನ್ನೆಲೆಯಲ್ಲಿ ಮಾತ್ರ ಜಾಮೀನು ರದ್ದುಪಡಿಸಲಾಗಿದ್ದು, ಹೊಸದಾಗಿ ಜಾಮೀನು ಅರ್ಜಿ ಸಲ್ಲಿಸಲು ಅವಕಾಶವಿದೆ ಎಂದು ಸುಪ್ರೀಂ ಕೋರ್ಟ್ ಆದೇಶದಲ್ಲಿ ಉಲ್ಲೇಖಿಸಿದೆ ಎಂದು ಹೇಳಿದರು.

ಇನ್ನು ಅರ್ಜಿದಾರರ ವಿರುದ್ಧ ಇಬ್ಬರು ಅಧಿಕಾರಿಗಳ ಪಾಟಿ ಸವಾಲು (ಕ್ರಾಸ್ ಎಕ್ಸಾಮಿನೇಶನ್) ಬಾಕಿ ಇರುವುದರಿಂದ, ಜಾಮೀನು ಮಂಜೂರು ಮಾಡಬೇಕೆಂದು ಕುಲಕರ್ಣಿ ಪರ ವಕೀಲರು ಮನವಿ ಮಾಡಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸಿಬಿಐ ಪರ ವಕೀಲರು, ಪ್ರಕರಣದಲ್ಲಿ ತನಿಖಾಧಿಕಾರಿಗಳಲ್ಲದೆ ಇನ್ನೂ ಇಬ್ಬರು ಪ್ರಮುಖ ಸಾಕ್ಷಿಗಳ ವಿಚಾರಣೆ ಬಾಕಿ ಇರುವುದರಿಂದ, ಈ ಹಂತದಲ್ಲಿ ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು ಎಂದು ವಾದಿಸಿದರು.

ಇದಕ್ಕೂ ಮುನ್ನದ ವಿಚಾರಣೆಯಲ್ಲಿ ಸಿಬಿಐ ಪರ ವಕೀಲರು, ಜಾಮೀನು ಮಂಜೂರು ಮಾಡುವ ಸಂದರ್ಭದಲ್ಲಿ ವಿಧಿಸಿದ್ದ ಷರತ್ತುಗಳನ್ನು ಪಾಲಿಸುವುದಾಗಿ ಮುಚ್ಚಳಿಕೆ ಬರೆದುಕೊಟ್ಟಿದ್ದ ಅರ್ಜಿದಾರರು, ಬಳಿಕ ಅದನ್ನು ಉಲ್ಲಂಘಿಸಿದ್ದಾರೆ ಎಂದು ನ್ಯಾಯಾಲಯದ ಗಮನಕ್ಕೆ ತಂದಿದ್ದರು. ಷರತ್ತು ಉಲ್ಲಂಘನೆಯ ಹಿನ್ನೆಲೆಯಲ್ಲಿ ಜಾಮೀನು ರದ್ದುಪಡಿಸಿದ ನಂತರ ಮತ್ತೆ ಜಾಮೀನು ನೀಡುವ ಬಗ್ಗೆ ಯಾವುದೇ ನಿರ್ದಿಷ್ಟ ತೀರ್ಪುಗಳಿಲ್ಲ ಎಂದು ವಾದಿಸಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ ವಿನಯ್ ಕುಲಕರ್ಣಿ ಪರ ವಕೀಲರು, ಪ್ರಾಸಿಕ್ಯೂಷನ್ ಸಾಕ್ಷಿಯೊಬ್ಬರು ತಮ್ಮ ಕಕ್ಷಿದಾರರಿಗೆ ನಮಸ್ಕರಿಸಿದ್ದಕ್ಕೆ ಪ್ರತಿಯಾಗಿ ಆಶೀರ್ವಾದ ನೀಡಿದ ಕಾರಣಕ್ಕೆ ಜಾಮೀನು ರದ್ದುಪಡಿಸಲಾಗಿದೆ ಎಂದು ಹೇಳಿದರು. ಆದರೆ, ಇದೇ ಸಾಕ್ಷಿಯೊಂದಿಗೆ ಹಸ್ತಲಾಘವ ನಡೆಸಿದ ಇತರ ಆರೋಪಿಗಳಿಗೆ ಜಾಮೀನು ಮಂಜೂರಾಗಿದೆ ಎಂದು ವಾದಿಸಿದರು.

ಅಲ್ಲದೆ, ಈ ಪ್ರಕರಣ ರಾಜಕೀಯ ಪ್ರೇರಿತವಾಗಿದ್ದು, ಘಟನೆ ನಡೆದ ನಾಲ್ಕು ವರ್ಷಗಳ ಬಳಿಕ ಸಿಬಿಐ ತನಿಖೆಗೆ ವಹಿಸಲಾಗಿದೆ ಎಂಬ ಅಂಶವನ್ನೂ ಉಲ್ಲೇಖಿಸಿ ಜಾಮೀನು ನೀಡಬೇಕೆಂದು ಮನವಿ ಮಾಡಿದರು. ಅರ್ಜಿದಾರ ಹಾಗೂ ಸಿಬಿಐ ಪರ ವಾದಗಳನ್ನು ಆಲಿಸಿದ ನ್ಯಾಯಪೀಠ, ಅಂತಿಮ ಆದೇಶವನ್ನು ಕಾಯ್ದಿರಿಸಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!