ಹಾಸನ: ಜಿಲ್ಲೆಯ ಸಕಲೇಶಪುರ ತಾಲೂಕಿನ ಮೂಗಲಿ ಗ್ರಾಮದಲ್ಲಿ ಕಾಡಾನೆ ದಾಳಿಗೆ ಮಹಿಳೆಯೊಬ್ಬರು ಮೃತಪಟ್ಟ ಘಟನೆ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. 40 ವರ್ಷದ ಮಹಿಳೆಯ ಜೀವ ಹೋದ ಸುದ್ದಿ ತಿಳಿದ ಸಚಿವ ಈಶ್ವರ ಖಂಡ್ರೆ ತೀವ್ರ ಬೇಸರ ವ್ಯಕ್ತಪಡಿಸಿದ್ದು, ಅಧಿಕಾರಿಗಳಿಗೆ ತಕ್ಷಣ ಕಾರ್ಯಾಚರಣೆಗೆ ಇಳಿಯುವಂತೆ ಕಠಿಣ ಸೂಚನೆ ನೀಡಿದ್ದಾರೆ.
ಆನೆಯನ್ನು ತಕ್ಷಣವೇ ಮರಳಿ ಕಾಡಿಗೆ ಕಳುಹಿಸುವುದು ಅಥವಾ ಸೆರೆಗೆ ಪಡೆಯುವಂತೆ ವನ್ಯಜೀವಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಹಾಸನದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಕೂಡಲೇ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿ ನಿಭಾಯಿಸಬೇಕು ಎಂದು ಆದೇಶಿಸಲಾಗಿದೆ.
“ಹೋದ ಜೀವ ಮರಳಿ ತರಲು ಸಾಧ್ಯವಿಲ್ಲ, ಆದರೆ ಕುಟುಂಬಕ್ಕೆ ಸರ್ಕಾರ ಆಸರೆಯಾಗಬೇಕು” ಎಂದು ಸಚಿವರು ಹೇಳಿದ್ದಾರೆ. ಮೃತರ ಕುಟುಂಬಕ್ಕೆ ನಿಯಮಾನುಸಾರ ಪರಿಹಾರ ನೀಡಲಾಗುವುದು ಎಂದು ಸ್ಪಷ್ಟಪಡಿಸಿದ್ದು, ಮುಂದಿನ ದಿನಗಳಲ್ಲಿ ಇಂತಹ ದುರಂತಗಳು ಮರುಕಳಿಸದಂತೆ ಆನೆ ಕಾರ್ಯಪಡೆ ನಿಯೋಜನೆ, ಎಚ್ಚರಿಕೆ ಸಂದೇಶ ಮತ್ತು ಕಠಿಣ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದ್ದಾರೆ.



