ಕರ್ನಾಟಕ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ; ಕೊಪ್ಪಳ, ಕುಷ್ಟಗಿ ಹಾಗೂ ಯಲಬುರ್ಗಾದಲ್ಲಿ‌ ನೀರಸ, ಗಂಗಾವತಿಯಲ್ಲಿ ತಕ್ಕಮಟ್ಟಿಗೆ ಯಶಸ್ವಿ

0
Spread the love

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ಕೃಷಿ ಕಾಯ್ದೆ ತಿದ್ದುಪಡಿ ವಿರೋಧಿಸಿ ರೈತ ಹಾಗೂ ಕನ್ನಡಪರ ಸಂಘಟನೆಗಳು ನೀಡಿದ ಕರ್ನಾಟಕ ಬಂದ್‌ಗೆ ಕೊಪ್ಪಳ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಳಗಿನಿಂದ ಎಂದಿನಂತೆ ಜಿಲ್ಲೆ ಸಹಜ ಸ್ಥಿತಿಯಲ್ಲಿ ಇತ್ತು.

ಸುಮಾರು 30 ಸಂಘಟನೆಗಳು ಬಂದ್‌ಗೆ ಬೆಂಬಲ ನೀಡಿದ್ದರೂ ಪ್ರತಿಭಟನೆಯಲ್ಲಿ ಅಷ್ಟು ಸಂಖ್ಯೆಯ ಜನರು ಕಾಣದಿರುವುದರಿಂದ ಜಿಲ್ಲಾ ಕೇಂದ್ರದಲ್ಲಿ ಬಂದ್ ಬಿಸಿ ತಟ್ಟಲಿಲ್ಲ. ಅಶೋಕ ವೃತ್ತದಿಂದ ಕೇಂದ್ರೀಯ ಬಸ್ ನಿಲ್ದಾಣದವರೆಗೂ ಸರಕಾರದ ರೈತ ವಿರೋಧಿ ನೀತಿಯನ್ನು ವಿವರಿಸುತ್ತಲೇ ರಸ್ತೆಯ ಅಕ್ಕಪಕ್ಕದ ಅಂಗಡಿಕಾರರಿಗೆ ಬಂದ್ ಮಾಡುವಂತೆ ಮನವಿ ಮಾಡುತ್ತಿರುವುದು ಕಂಡು ಬಂತು.

ಬಸ್ ನಿಲ್ದಾಣದ ವ್ಯವಸ್ಥಾಪಕರಿಗೂ ಬಸ್ ಸಂಚಾರ ಸ್ಥಗಿತಗೊಳಿಸಲು ರೈತ ಸಂಘಟನೆಯ ಮುಖಂಡರು ಮನವಿ ಮಾಡಿದರು. ನಂತರ ಬಸ್ ನಿಲ್ದಾಣದ ಎದುರು ಟೈರ್‌ಗೆ ಬೆಂಕಿ ಹಚ್ಚಿ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು.

ಯಲಬುರ್ಗಾದಲ್ಲಿ‌ ಕಿತ್ತೂರು ಚನ್ನಮ್ಮ ಸರ್ಕಲ್‌ನಿಂದ ತಹಶೀಲ್ದಾರ ಕಚೇರಿವರೆಗೆ ಪ್ರತಿಭಟನಾ ಜಾಥಾ ನಡೆಯಿತು. ಬಳಿಕ ತಹಶೀಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಜಾಥಾ ಮುನ್ನಡೆಯುತ್ತಿದ್ದಂತೆ ಅಂಗಡಿ ಮುಂಗಟ್ಟುಗಳು ಆರಂಭಗೊಂಡವು. ವಾಹನ ಸಂಚಾರ ಎಂದಿನಂತಿತ್ತು.

ಕುಷ್ಟಗಿಯಲ್ಲಿ ಕರ್ನಾಟಕ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಳಗಿನಿಂದ ಮಧ್ಯಾಹ್ನದವರೆಗೆ ಜನ ಹಾಗೂ ವಾಹನ ಸಂಚಾರ ವಿರಳವಾಗಿತ್ತು. ಕ್ರಮೇಣ ವ್ಯಾಪಾರ ವಹೀವಾಟು ಸಹಜ ಸ್ಥಿತಿಗೆ ಬಂತು. ಕಾರ್ಗಿಲ್ ವೃತ್ತದಿಂದ ಬಸವೇಶ್ವರ ವೃತ್ತ ಮಾರ್ಗವಾಗಿ ಜಾಥಾ ನಡೆಸಿದ ಪ್ರತಿಭಟನಾಕಾರರು ತಹಶೀಲ್ದಾರ ಕಚೇರಿ ತಲುಪಿ ತಹಶೀಲ್ದಾರರ ಮೂಲಕ ಸಿಎಂಗೆ ಮನವಿ ಸಲ್ಲಿಸಲಾಯಿತು.

ಗಂಗಾವತಿ, ಕಾರಟಗಿ ಹಾಗೂ ಕನಕಗಿರಿ ಭಾಗದಲ್ಲಿ ಕರ್ನಾಟಕ ಬಂದ್‌ ಬಹುತೇಕ ಯಶಸ್ವಿಯಾಗಿದೆ ಎನ್ನಬಹುದು. ಗಂಗಾವತಿಯ ಕೃಷ್ಣದೇವರಾಯ ವೃತ್ತದಲ್ಲಿ ಜಮಾವಣೆಗೊಂಡ ರೈತ ಹಾಗೂ ಕನ್ನಡಪರ ಸಂಘಟನೆಗಳ ಮುಖಂಡರು ಸರಕಾರದ ಧೋರಣೆ ಖಂಡಿಸಿ, ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿ ಬಹುತೇಕ ಅಂಗಡಿ ಮುಂಗಟ್ಟುಗಳು ಬಂದ್ ಆಗಿದ್ದವು.


Spread the love

LEAVE A REPLY

Please enter your comment!
Please enter your name here