ಕೊರೋನಾ ನಿಯಂತ್ರಣ ಕ್ರಮಗಳ ಪಾಲಿಸಿ

0
Spread the love

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ ಗದಗ
ಅ. 28 ರಂದು ಜಿಲ್ಲೆಯಲ್ಲಿ ಜರುಗುವ ಕರ್ನಾಟಕ ಪಶ್ಚಿಮ ಪದವೀಧರ ಮತಕ್ಷೇತ್ರ ಚುನಾವಣೆಯಲ್ಲಿ ಆರೋಗ್ಯ ಇಲಾಖೆ ಹೊರಡಿಸಿರುವ ಕೊವಿಡ್-19 ನಿಯಂತ್ರಣ ಕ್ರಮಗಳ ಪಾಲನೆ ಮಾಡುವುದರೊಂದಿಗೆ ಚುನಾವಣೆಯನ್ನು ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ಹೇಳಿದರು.
ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ತಹಸೀಲ್ದಾರರಿಗೆ ಹಾಗೂ ಚುನಾವಣಾ ದಿನಗಳಂದು ಕರ್ತವ್ಯ ನಿರ್ವಹಿಸುವ ಅಧಿಕಾರಿಗಳಿಗೆ ಆಯೋಜಿಸಿದ್ದ ತರಬೇತಿ ಕಾರ್ಯಕ್ರಮ ಉದ್ದೇಶಿಸಿ ಜಿಲ್ಲಾಧಿಕಾರಿಗಳು ಮಾತನಾಡಿದರು.
ಪ್ರತಿ ಮತಗಟ್ಟೆಗೆ ಅಗತ್ಯವಿರುವಷ್ಟು ಸ್ಯಾನಿಟೈಸರ್, ಸಿಬ್ಬಂದಿಗಳಿಗೆ ಮಾಸ್ಕ್, ಹ್ಯಾಂಡ್‌ಗ್ಲೌಸ್, ಪಲ್ಸ್ ಆಕ್ಷಿಮಿಟರ್, ಥರ್ಮಲ್ ಸ್ಕ್ಯಾನರ್, ಪಿಪಿಇ ಕಿಟ್ ಮತ್ತು ಹ್ಯಾಂಡ್ ವಾಶಗಳನ್ನು ನೀಡಲಾಗುತ್ತಿದ್ದು, ಮತದಾನಕ್ಕೆ ಬರುವ ಮತದಾರರಿಗೆ ಪಲ್ಸ್ ಆಕ್ಷಿಮೀಟರ್ ಹಾಗೂ ಐ.ಆರ್.ಥರ್ಮಲ್ ಸ್ಕ್ಯಾನರ್ ಮೂಲಕ ಆರೋಗ್ಯ ತಪಾಸಣೆಯನ್ನು ನಿಯೋಜಿಸಲಾದ ಆರೋಗ್ಯ ಇಲಾಖೆ ಸಿಬ್ಬಂದಿಗಳು ಮಾಡಬೇಕು ಎಂದರು.
ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ಸುಸಜ್ಜಿತ ಕೋಣೆ, ಕುಡಿಯುವ ನೀರು, ಶೌಚಾಲಯ ಸೇರಿದಂತೆ ಅಗತ್ಯ ಸೌಕರ್ಯಗಳು ಸುಸ್ಥಿತಿಯಲ್ಲಿ ಇರುವುದನ್ನು ಖಾತ್ರಿಪಡಿಸಿಕೊಳ್ಳಬೇಕು. ಪ್ರತಿ ಮತಗಟ್ಟೆ ಹತ್ತಿರ ಕೊವಿಡ್ ಲಕ್ಷಣ ಇರುವವರ ವಿಶ್ರಾಂತಿ, ತಕ್ಷಣ ಆರೈಕೆಗಾಗಿ ಪ್ರತ್ಯೇಕ ಐಸೋಲೇಶನ್ ರೂಮ್ ವ್ಯವಸ್ಥೆ ಮಾಡಬೇಕು.
ಬಿಎಲ್‌ಓಗಳ ಮೂಲಕ ಓಟರ್ ಸ್ಲಿಪ್‌ಗಳನ್ನು ಮತದಾರನ ಮನೆಗೆ ತಲುಪಿಸುವ ಕಾರ್ಯ ನಡೆಯಬೇಕು. ಕೊವಿಡ್-19 ಸೋಂಕಿಗೆ ಒಳಗಾದ ಮತದಾರ ಮತದಾನ ಮಾಡಲು ಬರುವುದನ್ನು ಮುಂಚಿತವಾಗಿ ಖಚಿತಪಡಿಸಿದರೆ, ಅವರಿಗೆ ಅಂಬುಲೆನ್ಸ್ ಮೂಲಕ ಅವರಿದ್ದ ಸ್ಥಳದಿಂದ ನೇರವಾಗಿ ಮತಗಟ್ಟೆಗೆ ಕರೆ ತಂದು, ಮತದಾನದ ನಂತರ ಅವರ ಸ್ಥಳಕ್ಕೆ ಬಿಡಲಾಗುತ್ತದೆ. ಮತದಾನದ ದಿನದಂದು ಸಂಜೆ 4 ಗಂಟೆ ನಂತರದ ಅವಧಿಯನ್ನು ಕೊವಿಡ್ ಸೋಂಕಿತರಿಗೆ ಮತ್ತು ಶಂಕಿತರಿಗೆ, ಕೊವಿಡ್ ಲಕ್ಷಣ ಇರುವವರಿಗೆ ಮತದಾನ ಮಾಡಲು ಅವಕಾಶ ಒದಗಿಸಲಾಗಿದ್ದು, ಎಲ್ಲ ರೀತಿಯ ಆರೋಗ್ಯ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಲು ಸೂಚಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ ಕೆ, ಮಾತನಾಡಿ ಚುನಾವಣಾ ಕಾರ್ಯಕ್ಕೆ ನಿಯೋಜಿಸಲಾದ ಸಿಬ್ಬಂದಿಗಳ ಹಾಗೂ ಮೊಬೈಲ್ ಫೋನ್‌ನಂಬರ್‌ಗಳ ವಿನಿಮಯ ಮಾಡುವುದು ಹಾಗೂ ತಂಡದ ಪ್ರತಿಯೊಬ್ಬರ ಕಾರ್ಯವಿಧಾನದ ಬಗ್ಗೆ ತಿಳುವಳಿಕೆ ನೀಡುವುದು ಪ್ರಿಸೈಡಿಂಗ್ ಅಧಿಕಾರಿಗಳ ಕರ್ತವ್ಯವಾಗಿದ್ದು ಚುನಾವಣಾಧಿಕಾರಿಗೆ ಸಂಬಂಧಿಸಿದ ಎಲ್ಲಾ ಆದೇಶಗಳ ಪ್ರತಿಗಳನ್ನು ಇವರು ಹೊಂದಿರಬೇಕು. ಪೂರ್ವಭಾವಿ ಅಭ್ಯಾಸ ಮತ್ತು ತರಬೇತಿಗಳಿಗೆ ಕಡ್ಡಾಯವಾಗಿ ಹಾಜರಾಗಿ ಸಂಘಟಿತರಾಗಿ ಕಾರ್ಯನಿರ್ವಹಿಸಬೇಕು ಎಮದು ಸೂಚಿಸಿದರು.
ಇದೇ ಸಂದರ್ಭದಲ್ಲಿ ಕೊವಿಡ್-19 ಮುಂಜಾಗೃತಿ ವಿಷಯ ಕುರಿತ ಪೋಸ್ಟರ್‌ಗಳನ್ನು ಜಿಲ್ಲಾಧಿಕಾರಿ ಸುಂದರೇಶ್ ಬಾಬು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ ಕೆ, ಸೇರಿದಂತೆ ಮತ್ತಿತರರು ಬಿಡುಗಡೆಗೊಳಿಸಿದರು.
ಅಪರ ಜಿಲ್ಲಾಧಿಕಾರಿ ಸತೀಶ್ ಕುಮಾರ ಎಂ ಹಾಗೂ ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಸತೀಶ ಬಸರೀಗಿಡದ ಅವರು ಕೊವಿಡ್-19 ಮಾರ್ಗಸೂಚಿಗಳ ಪಾಲನೆ ಕುರಿತು ಮಾತನಾಡಿದರು. ತರಬೇತಿ ಕಾರ್ಯಕ್ರಮದಲ್ಲಿ ಉಪವಿಭಾಗಾಧಿಕಾರಿ ರಾಯಪ್ಪ ಹುಣಸಗಿ, ಡಿಡಿಎಲ್‌ಆರ್ ಅಧಿಕಾರಿ ರವಿಕುಮಾರ ಸೇರಿದಂತೆ ಆಯಾ ತಾಲೂಕುಗಳ ತಹಸೀಲ್ದಾರರು, ಪಿಆರ್‌ಓಗಳು ಹಾಜರಿದ್ದರು.
 


Spread the love

LEAVE A REPLY

Please enter your comment!
Please enter your name here