ವಿಜಯಸಾಕ್ಷಿ ಸುದ್ದಿ, ಬೆಳಗಾವಿ
ಪೆಟ್ರೋಲ್ ಕಳ್ಳತನ ಮಾಡುವುದನ್ನು ನೋಡಿದ ಯುವಕನನ್ನು ಕೊಲೆಗೈದು ತಿಪ್ಪೆಗುಂಡಿಯಲ್ಲಿ ಹೂತಿಟ್ಟ ಘಟನೆ ಗೋಕಾಕನಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.
ತಾಲೂಕಿನ ಬಳೋಬಾಳ ಗ್ರಾಮದ ನಿವಾಸಿ ಮಹಾದೇವ ಕಿಚಡಿ(28) ಕೊಲೆಯಾದ ಯುವಕ.
ಗೋಕಾಕ ಬಳೋಬಾಳ ಗ್ರಾಮದ ನಿವಾಸಿಯಾಗಿರುವ ಕೊಲೆ ಆರೋಪಿ ಪ್ರವೀಣ ಸುಣದೋಳಿ ಕೆಲವು ದಿನಗಳ ಹಿಂದೆ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ವಾಹನದಿಂದ ಪೆಟ್ರೋಲ್ ಕಳ್ಳತನ ಮಾಡಲು ಯತ್ನಿಸುತ್ತಿರುವುದನ್ನು ಮಹಾದೇವ ನೋಡಿದ್ದಾನೆ.
ಇದರಿಂದ ಆತಂಕಕ್ಕೆ ಒಳಗಾದ ಪ್ರವೀಣ್ ಕಳ್ಳತನದ ವಿಷಯ ಗ್ರಾಮದ ಜನರಿಗೆ ಗೊತ್ತಾಗಿ ತನ್ನ ಮರ್ಯಾದೆ ಹೋಗುತ್ತದೆಂಬ ಭಯದಿಂದ ಅಲ್ಲಿಯೇ ಇದ್ದ ಕಬ್ಬಿಣದ ರಾಡ್ನಿಂದ ಮಹಾದೇವನಿಗೆ ಹೊಡೆದು ಕೊಲೆ ಮಾಡಿದ್ದಾನೆ.
ಬಳಿಕ ಮೃತದೇಹವನ್ನು ತಿಪ್ಪೆಯೊಂದರಲ್ಲಿ ತೆಗ್ಗು ತೆಗೆದು ಮುಚ್ಚಿದ್ದಾನೆ. ನಾಲ್ಕು ದಿನಗಳ ಬಳಿಕ ಶವ ಕೊಳೆತು ವಾಸನೆ ಬರತೊಡಗಿದ್ದು, ಅನುಮಾನಗೊಂಡ ಗ್ರಾಮಸ್ಥರು ತಿಪ್ಪೆಯಲ್ಲಿ ಅಗೆದು ನೋಡಿದಾಗ ಮೃತದೇಹ ಕಂಡಿದೆ.
ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದು, ಘಟನಾ ಸ್ಥಳಕ್ಕೆ ಆಗಮಿಸಿದ ಘಟಪ್ರಭಾ ಪೊಲೀಸರು ಪರಿಶೀಲನೆ ನಡೆಸಿ ಆರೋಪಿ ಪ್ರವೀಣ್ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ನಡೆದ ಘಟನೆ ವಿವರಿಸಿದ್ದಾನೆ. ಘಟಪ್ರಭಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



