ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ
ಗದಗ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಅ. 21ರಂದು ಬೆಳಗ್ಗೆ ನಗರದ ಜಿಲ್ಲಾ ಪೊಲೀಸ್ ಕಚೇರಿ ಆವರಣದಲ್ಲಿ ಕರ್ತವ್ಯ ಪಾಲನೆಯಲ್ಲಿ ಪ್ರಾಣಾರ್ಪಣೆ ಮಾಡಿದ ಪೊಲೀಸರ ನೆನಪಿಗಾಗಿ ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮ ಜರುಗಿತು.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರಾಜಶೇಖರ ವಿ. ಪಾಟೀಲ, ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು, ಜಿಲ್ಲಾ ಪಂಚಾಯತ್ ಸಿಇಒ ಡಾ. ಆನಂದ ಕೆ. ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಹುತಾತ್ಮರ ಸ್ಮಾರಕಕ್ಕೆ ಪುಷ್ಪಗುಚ್ಛ ಅರ್ಪಿಸುವ ಮೂಲಕ ಗೌರವ ನಮನ ಸಲ್ಲಿಸಿದರು.
ಪೊಲೀಸ್ ಹುತಾತ್ಮರ ದಿನಾಚರಣೆ ಕುರಿತು ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್., ಕಳೆದ ಒಂದು ವರ್ಷದಲ್ಲಿ ಕರ್ನಾಟಕದ 17 ಸೇರಿದಂತೆ ದೇಶದಲ್ಲಿ ಒಟ್ಟು 264 ಜನ ಕರ್ತವ್ಯ ನಿರತ ಪೊಲೀಸ್ ಅಧಿಕಾರಿ, ಸಿಬ್ಬಂದಿ ಪ್ರಾಣಾರ್ಪಣೆ ಮಾಡಿದ್ದು, ಅವರ ಪ್ರಾಣ ಬಲಿದಾನ ನೆನೆಯುವ ದಿನ ಇದಾಗಿದೆ. 1959 ರಿಂದ ಪ್ರತಿ ವರ್ಷ ಅ. 21ರಂದು ಪೊಲೀಸ್ ಹುತಾತ್ಮರ ದಿನವನ್ನು ಆಚರಿಸಲಾಗುತ್ತಿದೆ ಎಂದ ಅವರು, ಹುತಾತ್ಮರಾದ ಪೊಲೀಸರ ಹೆಸರುಗಳನ್ನು ವಾಚಿಸಿದರು.
ಕವಾಯತು ಸಮಾದೇಷ್ಠರಿಂದ ವಂದನೆ ಸಲ್ಲಿಸಿ, ಬಳಿಕ ವಿವಿಧ ಶಸ್ತ್ರಾಸ್ತ್ರ ಕವಾಯತು ನಡೆಯಿತು. ಅನಂತರ ಮೌನಾಚರಣೆ ಮಾಡಲಾಯಿತು. ಪೊಲೀಸ್ ಇಲಾಖೆಯ ಹಿರಿಯ, ಕಿರಿಯ ಅಧಿಕಾರಿಗಳು ಸಿಬ್ಬಂದಿಗಳು ಹಾಜರಿದ್ದರು.
Trending Now



