ಬಿಜೆಪಿ ಸರಕಾರ ಅಲ್ಪಸಂಖ್ಯಾತರ ವಿರೋಧಿ: ಸಿರಾಜ್ ಸಿದ್ದಾಪುರ

0
Spread the love

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ

ಸಂವಿಧಾನದ ಮೇಲೆ ಪ್ರಮಾಣ ಮಾಡಿ ಅಧಿಕಾರಕ್ಕೆ ಬಂದ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳು, ಸಚಿವರು ಅಧಿಕಾರಕ್ಕೆ ಬಂದ ನಂತರ ಸಂವಿಧಾನದ ಮೂಲಭೂತ ಆಶಯಗಳ ವಿರುದ್ದ ಕೆಲಸ ಮಾಡುತ್ತಿರುವದು ಅತ್ಯಂತ ವಿಷಾದನೀಯವಾಗಿದೆ. ರಾಜಕೀಯ ಕಾರಣಕ್ಕೆ ಎಲ್ಲ ಪಕ್ಷಗಳು ತಮ್ಮದೇ ಆದ ಆದ್ಯತೆಯ ಕೆಲಸ ಮಾಡುತ್ತ ಆರೋಪ, ಪ್ರತ್ಯಾರೋಪ ಮಾಡುವುದು ಸಾಮಾನ್ಯವಾದರೂ ಯಾವ ಸರಕಾರವೂ ಒಂದು ಸಮುದಾಯವನ್ನು ಇಷ್ಟೊಂದು ಅನ್ಯಾಯ ಮಾಡಿರುವದು ಇತಿಹಾಸದಲ್ಲಿ ಕಂಡು ಬರುವುದಿಲ್ಲ ಎಂದು ಮುಸ್ಲಿಂ ಚಿಂತಕರ ಚಾವಡಿಯ ಪಿಎಂ 15 ಅಂಶಗಳ ಕಾರ್ಯಕ್ರಮ ಅನುಷ್ಠಾನ ಸಮಿತಿಯ ಸದಸ್ಯ ಸಿರಾಜ್ ಸಿದ್ದಾಪುರ ದೂರಿದರು.

ಕೊಪ್ಪಳ ಮೀಡಿಯಾ ಕ್ಲಬ್‌ನಲ್ಲಿ ರವಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿ.ಎಸ್.ಯಡಿಯೂರಪ್ಪನವರ ಸರಕಾರ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮತ್ತು ಅದರ ಮೂಲಕ ರಾಜ್ಯದ ಅಲ್ಪಸಂಖ್ಯಾತ ಸಮುದಾಯವಾದ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಬುದ್ಧ, ಪಾರ್ಸಿ ಮತ್ತು ಜೈನ ಸಮುದಾಯದ ಮೇಲೆ ತೋರಿಸಿದಷ್ಟು ತಾತ್ಸಾರ, ದ್ವೇಷ, ಅಸೂಯೆ ಅನ್ಯಾಯಗಳನ್ನು ದೇಶದ ಯಾವ ರಾಜ್ಯ ಸರಕಾರಗಳು ಕೂಡ ಮಾಡಿರುವ ಉದಾಹರಣೆ ಇಲ್ಲ. ಅವರದ್ದೇ ಪಕ್ಷದ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರವು ಕೂಡ ಒಂದು ಸಮುದಾಯ ಕುರಿತ ಸರಕಾರದ ಜನಪರ, ಕಲ್ಯಾಣ ಯೋಜನೆಯ ಅನುಷ್ಠಾನದಲ್ಲಿ ಇಷ್ಟೊಂದು ದ್ವೇಷಯುತವಾಗಿ ನಡೆದುಕೊಂಡಿಲ್ಲ ಎಂದರು.

ಬಿ.ಎಸ್.ಯಡಿಯೂರಪ್ಪನವರ ನೇತೃತ್ವದ ಸರಕಾರ ಬಂದ ಮೇಲೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಈ ಹಿಂದೆ ನಿಗದಿಗೊಳಿಸುತ್ತ ಬಂದಿರುವ ಅನುದಾನ ಕಡಿತಗೊಳಿಸಿದ್ದಲ್ಲದೇ ಹಲವು ಯೋಜನೆಗಳನ್ನು ನಿಲ್ಲಿಸಿದೆ. ೨೦೧೯-೨೦ನೇ ಸಾಲಿನಲ್ಲಿ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದ ಸರಕಾರ ಬಜೆಟ್‌ನಲ್ಲಿ ಘೋಷಿಸಿದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅನುದಾನವನ್ನು ೧೮೯೭.೦೦ ಕೋ.ರೂ. ಯಿಂದ ೧೫೭೧.೦೦ ಕೋ.ರೂ.ಗೆ ಕಡಿಮೆಗೊಳಿಸಿತು. ೨೦೨೦-೨೧ನೇ ಸಾಲಿನಲ್ಲಿ ಬಿ.ಎಸ್.ಯಡಿಯೂರಪ್ಪನವರ ನೇತೃತ್ವದ ಸರಕಾರ ಮಂಡಿಸಿದ ಬಜೆಟ್‌ನಲ್ಲಿ ೧೧೭೭.೦೦ಕೋ.ರೂ.ಗಳಷ್ಟಿದ್ದ ಅನುದಾನವನ್ನು ಮತ್ತೆ ಕಡಿತಗೊಳಿಸಿ ೧೦೫೫.೦೦ಕೋ.ರೂ.ಗಳಿಗೆ ನಿಗದಿಗೊಳಿಸಿದೆ. ಇತ್ತೀಚಿಗೆ ಮತ್ತೆ ೧೦೫೫.೦೦ ಕೋ.ರೂ.ಗಳಷ್ಟಿದ್ದ ಅನುದಾನದಲ್ಲಿ ೫೦.೦೦ ಕೋ.ರೂ. ಅನುದಾನ ಕಡಿತಗೊಳಿಸಿದೆ.
ಈಗ ಕಡಿತಗೊಳಿಸಿದ ಅನುದಾನದಲ್ಲಿ ಕಳೆದ ೫ ವರ್ಷಗಳಿಂದ ಅನುಷ್ಠಾನ ಮಾಡಲಾಗುತ್ತಿದ್ದ ಹಲವು ಜನಪರ ಕಲ್ಯಾಣ ಯೋಜನೆಗಳನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಅನುಷ್ಠಾನ ಮಾಡುವುದನ್ನು ನಿಲ್ಲಿಸಿದೆ. ಸಿದ್ದರಾಮಯ್ಯನವರ ನೇತೃತ್ವದ ಸರಕಾರ ಜಾರಿಗೊಳಿಸಿದ ಕಾಲೋನಿ ಅಭಿವೃದ್ದಿ ಯೋಜನೆ ಈಗಿನ ಸರಕಾರ ರದ್ದುಗೊಳಿಸಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಶಾದಿಭಾಗ್ಯ ಯೋಜನೆಯನ್ನು ಕೂಡ ರದ್ದುಗೊಳಿಸಿದೆ. ಈ ವರ್ಷ ಇವೆಲ್ಲಕ್ಕಿಂತ ಪ್ರಮುಖ ಯೋಜನೆಗಳಾದ ವಿದೇಶದಲ್ಲಿ ಉನ್ನತ ವ್ಯಾಸಂಗದ ಯೋಜನೆ, ನಾಗರೀಕ ಪರೀಕ್ಷೆ ತರಬೇತಿ ಯೋಜನೆ, ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ, ಮೆರಿಟ್-ಕಮ್ ಮೀನ್ಸ್ ವಿದ್ಯಾರ್ಥಿ ವೇತನ, ಶುಲ್ಕ ವಿನಾಯತಿ, ವಿದ್ಯಾಸಿರಿಯಂತಹ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಪೂರಕವಾದಂತಹ ಯೋಜನೆಗಳ ೨೦೧೯-೨೦ನೇ ಸಾಲಿನ ಅನುದಾನವನ್ನು ಸರಕಾರ ಇಲ್ಲಿಯವರೆಗೆ ಬಿಡುಗಡೆಗೊಳಿಸದೇ ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಚೆಲ್ಲಾಟವಾಡುವಂತಹ ಕೆಲಸ ಮಾಡುತ್ತಿರುವದು ಅಕ್ಷಮ್ಯ ಅಪರಾಧವಾಗುತ್ತದೆ ಎಂದರು.

ಈ ವೇಳೆ ಬಿ.ಪೀರ್‌ಬಾಷಾ
ಮುಸ್ಲಿಂ ಚಿಂತಕರ ಚಾವಡಿ, ರಾಜ್ಯ ಮಾರ್ಗದರ್ಶಕ ಮಂಡಳಿ ಸದಸ್ಯರು, ರಾಜಾಬಕ್ಷಿ ಎಚ್.ವಿ.
ರಾಜ್ಯ ಸಮಿತಿ ಉಪಾಧ್ಯಕ್ಷರು ಹಾಗೂ ಮುಖಂಡ ಎಸ್.ಬಿ.ಖಾದ್ರಿ ಇದ್ದರು.


Spread the love

LEAVE A REPLY

Please enter your comment!
Please enter your name here