ವಿಜಯಸಾಕ್ಷಿ ಸುದ್ದಿ, ಗದಗ
‘ರಾಜ್ಯದಲ್ಲಿ ಓಮೈಕ್ರಾನ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಅಲ್ಪ ಪ್ರಮಾಣದಲ್ಲಿ ಏರಿಕೆ ಕಾಣುತ್ತಿರುವ ಹಿನ್ನೆಲೆಯಲ್ಲಿ ತಜ್ಞರ ಸಮಿತಿಯ ವರದಿ ಆಧರಿಸಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಡಿ.28ರಿಂದ ಹತ್ತು ದಿನಗಳವರೆಗೆ ರಾತ್ರಿ ಕರ್ಪ್ಯೂ ವಿಧಿಸಿದ್ದಾರೆ’ ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ಹೇಳಿದರು.
ಭಾನುವಾರ ಗದಗ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಅವರು ಮಾತನಾಡಿ, ‘ಬಾರ್ ಆ್ಯಂಡ್ ರೆಸ್ಟೋರೆಂಟ್, ಪಬ್ ಗಳಲ್ಲಿ ಜನಜಂಗುಳಿ ಇರುವ ಸಾರ್ವಜನಿಕ ಸ್ಥಳಗಳಲ್ಲಿ ಶೇ.50 ರಷ್ಟು ಜನರಿಗೆ ಮಾತ್ರ ಸ್ಥಳವಕಾಶ ನೀಡಿ ಆದೇಶಿಸಿದ್ದಾರೆ. ರಾಜ್ಯದ ಜನರ ಆರೋಗ್ಯದ ಹಿತದೃಷ್ಟಿಯನ್ನಿಟ್ಟುಕೊಂಡು ಇಂತಹ ರಾಜ್ಯ ಸರ್ಕಾರ ಇಂತಹ ನಿರ್ಧಾರೆ ತೆಗದುಕೊಂಡಿದೆ’ ಎಂದರು.
‘ಕೋವಿಡ್ ಒಂದು ಮತ್ತು ಎರಡನೇ ಅಲೆಗಳಲ್ಲಿ ಸ್ನೇಹಿತರು, ಹಿತೈಷಿಗಳು, ಕುಟುಂಬಕ್ಕೆ ಆಧಾರಸ್ತಂಭವಾಗಿದ್ದವರನ್ನು ಕಳೆದುಕೊಂಡ ದುಃಖದ ಪರಿಸ್ಥಿತಿಯನ್ನು ಕಣ್ಣಾರೆ ಕಂಡಿದ್ದೇವೆ. ಈ ಬಾರಿ ಅಂತಹ ಪರಿಸ್ಥಿತಿ ಮರುಕಳಿಸಬಾರದು. ಹೀಗಾಗಿ ಮುಖ್ಯಮಂತ್ರಿಗಳು ಜಾರಿ ಮಾಡಿರುವ ಆದೇಶವನ್ನು ನಾವೆಲ್ಲರೂ ತಪ್ಪದೇ ಪಾಲಿಸಿ ಜನರ ಆರೋಗ್ಯದ ಕಡೆಗೆ ಹೆಚ್ಚಿನ ಗಮನ ಹರಿಸೋಣ. ಜನ ಜೀವನಕ್ಕೆ ಹಾನಿಯಾಗದಂತೆ ಮೂರನೇ ಅಲೆ ನಿಯಂತ್ರಿಸುವಲ್ಲಿ ಯಶಸ್ವಿಯಾಗೋಣ’ ಎಂದು ಸಚಿವರು ಮನವಿ ಮಾಡಿದರು.