ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ
ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಿಂದ ರಾಜ್ಯಸ್ವ ಹೆಚ್ಚಿಸುವ ನಿಟ್ಟಿನಲ್ಲಿ ಇಲಾಖಾ ಅಧಿಕಾರಿಗಳು ಕರ್ತವ್ಯ ನಿರ್ವಹಿಸಬೇಕೆಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ಅವರು ತಿಳಿಸಿದರು.
ನರಗುಂದದ ಗೃಹ ಕಚೇರಿಯಿಂದ ಜರುಗಿದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ಸಭೆಯಲ್ಲಿ ಸಚಿವರು ಮಾತನಾಡಿದರು. ಇಲಾಖೆಯಿಂದ ಜನ ಸಾಮಾನ್ಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಅಧಿಕಾರಿಗಳು ಕರ್ತವ್ಯ ನಿರ್ವಹಿಸಲು ಸೂಚಿಸಿದರು.
ನೂತನ ಮರಳು ನೀತಿ ಜಾರಿಗೆ ತರುವ ಕುರಿತು ಅಗತ್ಯದ ಸಿದ್ಧತೆಗಳನ್ನು ಮಾಡಿಕೊಳ್ಳುವುದರ ಜೊತೆಗೆ ಖನಿಜ ರಕ್ಷಣಾ ಪಡೆ ರಚಿಸಲು ಅಗತ್ಯದ ಕ್ರಮ ಜರುಗಿಸಲು ಸಚಿವರು ಸೂಚಿಸಿದರು. ಅಂತರಾಜ್ಯಗಳಿಂದ ಬರುವ ಉಪ ಖನಿಜಕ್ಕೆ ನಿಯಂತ್ರಣ ಶುಲ್ಕ ಸಂಗ್ರಹಿಸಲು ಸ್ಥಾಪಿಸಲಾದ ಚೆಕ್ ಪೋಸ್ಟ್ಗಳನ್ನು ಬಲಪಡಿಸಿ ಕಟ್ಟುನಿಟ್ಟಾಗಿ ವಾಹನಗಳ ತಪಾಸಣೆ ಕೈಗೊಳ್ಳಲು ತಿಳಿಸಿದರು.
ಕಾರ್ಯಾನುಮತಿ ಪಡೆದು ಪಟ್ಟಾ ಜಮೀನಿನಲ್ಲಿ ಗ್ರಾನೈಟ್ ಗಣಿಗಾರಿಕೆ ನಡೆಸುತ್ತಿರುವವರು ಕಡ್ಡಾಯವಾಗಿ ಲೈಸನ್ಸ್ ಪಡೆದು ಸರಕಾರಕ್ಕೆ ನಿಯಮಾನುಸಾರ ರಾಜಸ್ವ ಪಾವತಿಸಲು ಸ್ಥಳೀಯ ಅಧಿಕಾರಿಗಳು ನಿಗಾವಹಿಸುವಂತೆ ಸೂಚಿಸಲು ಸಚಿವ ಸಿ.ಸಿ.ಪಾಟೀಲ ತಿಳಿಸಿದರು.
ಸಭೆಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಸಚಿವಾಲಯದ ಪ್ರಧಾನ ಕಾರ್ಯದರ್ಶಿ ಕುಮಾರ ನಾಯಕ, ಇಲಾಖೆ ನಿರ್ದೇಶಕ ಡಿ.ಎಸ್. ರಮೇಶ, ಸಚಿವರ ಆಪ್ತ ಕಾರ್ಯದರ್ಶಿ ಕೆ.ಸಿ. ವಿರೂಪಾಕ್ಷ, ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.