ವಿಜಯಸಾಕ್ಷಿ ಸುದ್ದಿ, ಗದಗ: ಖಾತಾ ಬದಲಾವಣೆಗೆ ಲಂಚದ ಬೇಡಿಕೆ ಇಟ್ಟು ಲಂಚ ಪಡೆಯುವಾಗ ಕಂಪ್ಯೂಟರ್ ಆಪರೇಟರ್ ಎಸಿಬಿ ಬಲೆಗೆ ಬಿದ್ದಿರುವ ಘಟನೆ ಜಿಲ್ಲೆಯ ಶಿರಹಟ್ಟಿ ಪಟ್ಟಣದಲ್ಲಿ ನಡೆದಿದೆ.
ಶಿರಹಟ್ಟಿ ಪಟ್ಟಣದ ಮಹೇಶ್ ಡಿ ಆರ್ ಅವರು ನೀಡಿದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿದ ಎಸಿಬಿ ಅಧಿಕಾರಿಗಳು, ಶಿರಹಟ್ಟಿ ಪಟ್ಟಣ ಪಂಚಾಯತಿಯ ಕಂಪ್ಯೂಟರ್ ಆಪರೇಟರ್ ಶರಣಪ್ಪ ಮಹದೇವಪ್ಪ ಗೌಳಿ ಎಂಬುವರನ್ನು ಲಂಚದ ಹಣ ಪಡೆಯುತ್ತಿದ್ದಾಗ ದಾಳಿ ನಡೆಸಿ ವಂಶಕ್ಕೆ ಪಡೆದಿದ್ದಾರೆ.
ಆರೋಪಿ ಶರಣಪ್ಪ ಗೌಳಿ ಖಾತಾ ಬದಲಾವಣೆ ಮಾಡಿ ಕಂಪ್ಯೂಟರ್ ಉತಾರ ನೀಡಲು ಮಹೇಶ್ ಅವರಿಗೆ 3500 ಲಂಚದ ಬೇಡಿಕೆ ಇಟ್ಟಿದ್ದ. ಈ ಕುರಿತು ಮಹೇಶ್ ಎಸಿಬಿಗೆ ದೂರು ನೀಡಿದ್ದರು. ಇಂದು ಲಂಚದ ಹಣ ನೀಡುವಾಗ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು ಆರೋಪಿತ ಶರಣಪ್ಪನನ್ನು ವಶಕ್ಕೆ ಪಡೆದಿದ್ದಾರೆ.
ಎಸಿಬಿ ಡಿವೈಎಸ್ಪಿ ವಾಸುದೇವರಾಮ್ ಎನ್ ಮಾರ್ಗದರ್ಶನದಲ್ಲಿ ಇನ್ಸ್ ಪೆಕ್ಟರ್ ಗಳಾದ ಆರ್ ಎಫ್ ದೇಸಾಯಿ, ವೈ ಎಸ್ ಧರಣಾ ನಾಯಕ್, ಸಿಬ್ಬಂದಿಗಳಾದ ಎಂ ಎಂ ಅಯ್ಯನಗೌಡರ್, ಆರ್ ಎಚ್ ಹೆಬಸೂರು, ಎನ್ ಎಸ್ ತಾಯಣ್ಣವರ್, ವೀರೇಶ್ ಜೋಳದ್, ಐ ಸಿ ಕರಿಗಾರ ಹಾಗೂ ತಾರಪ್ಪ ದಾಳಿಯಲ್ಲಿ ಭಾಗವಹಿಸಿದ್ದರು.