ವಿಜಯಸಾಕ್ಷಿ ಸುದ್ದಿ ಗದಗ
ಸೋಂಕು ನಿಯಂತ್ರಣ ಕಾರ್ಯದಲ್ಲಿ ಸೋಂಕಿತ ವ್ಯಕ್ತಿಯನ್ನು ಹತ್ತಿರದ ಕೋವಿಡ್ ಕೇರ್ ಕೇಂದ್ರಕ್ಕೆ ಸ್ಥಳಾಂತರಿಸಿ ಚಿಕಿತ್ಸೆ ನೀಡುವ ಮೂಲಕ ಸೋಂಕಿತ ವ್ಯಕ್ತಿಯ ಕುಟುಂಬದವರಿಗೆ ಸೋಂಕು ತಗಲದಂತೆ ನಿಗಾ ವಹಿಸಬೇಕು. ಸೋಂಕಿತ ವ್ಯಕ್ತಿ ಕೋವಿಡ್ ಕೇಂದ್ರಕ್ಕೆ ಚಿಕಿತ್ಸೆ ಆಗಮಿಸಲು ನಿರಾಕರಿಸಿದ್ದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ ಅನುಸಾರ ಶಿಸ್ತು ಕ್ರಮ ಜರುಗಿಸಬೇಕು. ಜೊತೆಗೆ ಆರೈಕೆ ಕೇಂದ್ರದಲ್ಲಿ ಸೋಂಕಿತರಿಗೆ ಸರಿಯಾದ ಚಿಕಿತ್ಸೆ ಲಭ್ಯವಾಗುತ್ತಿರುವ ಬಗ್ಗೆ ತಹಶೀಲ್ದಾರರು ನಿಯಮಿತವಾಗಿ ಭೇಟಿ ನೀಡುವ ಮೂಲಕ ಮೇಲುಸ್ತುವಾರಿ ನಿರ್ವಹಿಸಲು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಅವರು, ಜಿಲ್ಲಾಧಿಕಾರಿಗಳ ಕಚೇರಿಯ ವಿಡಿಯೋ ಸಭಾಂಗಣದಲ್ಲಿ ಕೋವಿಡ್ ಸೋಂಕು ನಿಯಂತ್ರಣ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕೋವಿಡ್ ಸೋಂಕು ನಿಯಂತ್ರಣಕ್ಕೆ ಜಿಲ್ಲಾದ್ಯಂತ ವಿಧಿಸಲಾದ ಕಠಿಣ ಮಾರ್ಗಸೂಚಿಗಳ ಅನುಷ್ಟಾನದಲ್ಲಿ ಅಧಿಕಾರಿಗಳ ನಿಷ್ಕಾಳಜಿ ಸಹಿಸಲಾಗದು ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ತಿಳಿಸಿದರು.

ಸೋಂಕು ನಿಯಂತ್ರಣ ಕಾರ್ಯದಲ್ಲಿ ನಿಯೋಜಿತ ಅಧಿಕಾರಿಗಳು ಶಿಸ್ತು ಬದ್ಧವಾಗಿ ಕಾರ್ಯನಿರ್ವಹಿಸಬೇಕು. ಸೋಂಕು ನಿಯಂತ್ರಣ ಹಾಗೂ ಸೋಂಕಿನ ಸರಪಳಿ ತುಂಡರಿಸಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದರು.
ಸರ್ಕಾರ ಲಸಿಕೆ ನೀಡಲು ನಿಗದಿಪಡಿಸಿದ ಆದ್ಯತಾ ಗುಂಪುಗಳಿಗೆ ತೀವ್ರ ಗತಿಯಲ್ಲಿ ಲಸಿಕಾಕರಣವನ್ನು ನೀಡಬೇಕು. ಆದ್ಯತಾ ವಲಯಗಳ ಅರ್ಹರೆಲ್ಲರಿಗೂ ಲಸಿಕೆ ದೊರೆಯುವಂತೆ ತಹಶೀಲ್ದಾರರು ಮೇಲುಸ್ತುವಾರಿ ಕಾರ್ಯ ನಿರ್ವಹಿಸಬೇಕು. ಜೊತೆಗೆ ಸೋಂಕು ನಿಯಂತ್ರಣ ಕಾರ್ಯದಲ್ಲಿ ನಿಯೋಜಿತ ವಿವಿಧ ಇಲಾಖೆಗಳ ಜೊತೆಗೆ ಸಮನ್ವಯ ಸಾಧಿಸಿ ಸೋಂಕು ತಡೆಗೆ ಮುಂದಾಗುವಂತೆ ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಸತೀಶಕುಮಾರ್ ಎಂ ಮಾತನಾಡಿ, ಮಳೆಗಾಲ ಆರಂಭವಾಗಿದ್ದು ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು ತಮ್ಮ ವ್ಯಾಪ್ತಿಯ ನಗರ ಪಟ್ಟಣಗಳ ಚರಂಡಿಗಳಲ್ಲಿ ನೀರು ನಿಲ್ಲದಂತೆ ಸ್ವಚ್ಛಗೊಳಿಸಲು ಯೋಜನೆ ಸಿದ್ಧಗೊಳಿಸಿ ಕ್ರಮ ವಹಿಸಬೇಕು. ಜೊತೆಗೆ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಪಾಲಿಸುವ ಮೂಲಕ ಆಸ್ತಿ ಹಾಗೂ ಜೀವ ಹಾನಿ ತಪ್ಪಿಸಲು ಕ್ರಮ ಅಗತ್ಯ ಎಂದರು.
ಸಭೆಯಲ್ಲಿ ಉಪವಿಭಾಗಾಧಿಕಾರಿ ರಾಯಪ್ಪ ಹುಣಸಗಿ , ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅನಿಲಕುಮಾರ್ ಮುದ್ದಾ, ಅವಳಿ ನಗರಸಭೆಯ ಪೌರಾಯುಕ್ತ ರಮೇಶ ಜಾಧವ್, ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ವಸಂತ ಮಡ್ಲೂರ ಸೇರಿದಂತೆ ಆಯಾ ತಾಲೂಕಿನ ತಹಶೀಲ್ದಾರರು, ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು ಹಾಜರಿದ್ದರು.