ವಿಜಯಸಾಕ್ಷಿ ಸುದ್ದಿ, ರಾಯಚೂರು
ಕೊರೊನಾ ಸೋಂಕಿತ ದಂಪತಿಯ ವಿರುದ್ಧ ಕೋವಿಡ್ ಉಲ್ಲಂಘನೆಯ ಪ್ರಕರಣ ದಾಖಲಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ದೇವದುರ್ಗ ತಾಲೂಕಿನ ವಿರಗೋಟ ಗ್ರಾಮದ ವ್ಯಾಪ್ತಿಯಲ್ಲಿ ಬರುವ ಕುರುಬರದೊಡ್ಡಿ ನಿವಾಸಿಯಾಗಿರುವ ದಂಪತಿಗಳ ಮೇಲೆಯೇ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಐಪಿಸಿ 269, 270 ಅಡಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಅಲ್ಲದೇ, ಈ ದಂಪತಿಯ ಮನೆಯ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದೆ. ಇದರೊಂದಿಗೆ ಇವರ ಪಡಿತರ ಚೀಟಿಯನ್ನು ಕೂಡ ರದ್ದುಗೊಳಿಸಲಾಗಿದೆ.
ಇತ್ತೀಚೆಗಷ್ಟೇ ಈ ದಂಪತಿಗಳಿಗೆ ಕೊರೊನಾ ಸೋಂಕು ತಗುಲಿದ್ದು ದೃಢವಾಗಿತ್ತು. ಹೀಗಾಗಿ ದಂಪತಿಗಳನ್ನು ಹೋಂ ಕ್ವಾರಂಟೈನ್ ಮಾಡಲು ಆರೋಗ್ಯ ಸಿಬ್ಬಂದಿ ದೊಡ್ಡಿಗೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಅಧಿಕಾರಿಗಳಿಗೆ ಸ್ಪಂದಿಸದ ದಂಪತಿ, ಅವರನ್ನೇ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ಅಲ್ಲದೇ, ಅಧಿಕಾರಿಗಳ ಕೈಗೆ ಸಿಗದೆ ಮನೆ, ಗುಡ್ಡದಲ್ಲಿ ಅಡಗಿ ಕುಳಿತಿದ್ದರು.
ಈ ಸಂದರ್ಭದಲ್ಲಿ ಅಧಿಕಾರಿಗಳು ಎಷ್ಟೇ ಮನವೊಲಿಸಿದರೂ ಈ ದಂಪತಿ ಮಾತ್ರ ಅವರ ಮಾತಿಗೆ ಸ್ಪಂದನೆ ನೀಡಿರಲಿಲ್ಲ. ಬದಲಾಗಿ ಅಧಿಕಾರಿಗಳನ್ನೇ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ಹೀಗಾಗಿಯೇ ಅವರ ವಿರುದ್ಧ ಎಫ್ ಐಆರ್ ದಾಖಲಾಗಿದೆ.