
ವಿಜಯಸಾಕ್ಷಿ ಸುದ್ದಿ,
ಕೊಪ್ಪಳ: ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಲಕ್ಷ್ಮಣ ಚಂದ್ರಪ್ಪ ದೋನಿ ಎಂಬ ಆರೋಪಿಗೆ 20 ವರ್ಷಗಳ ಜೈಲು ಶಿಕ್ಷೆ ಹಾಗೂ ರೂ.30 ಸಾವಿರಗಳ ದಂಡವನ್ನು ವಿಧಿಸಿ ಕೊಪ್ಪಳ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ತ್ವರಿತ ವಿಲೇವಾರಿ ನ್ಯಾಯಾಧೀಶರಾದ(ಪೋಕ್ಸೋ) ಶಂಕರ ಎಂ. ಜಾಲವಾದಿ ಅವರು ತೀರ್ಪು ಪ್ರಕಟಿಸಿದ್ದಾರೆ.
2020 ರ ಸೆಪ್ಟೆಂಬರ್ 11 ರಂದು ಲಕ್ಷö್ಮಣ ಚಂದ್ರಪ್ಪ ದೋನಿ ಎಂಬ ಆರೋಪಿಯು ಕಿಡದಾಳ ಗ್ರಾಮದಲ್ಲಿ ವಾಸಿಸುವ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪವು ತನಿಖೆಯಲ್ಲಿ ಸಾಬೀತಾದ ಹಿನ್ನೆಲೆಯಲ್ಲಿ ಕೊಪ್ಪಳ ಮಹಿಳಾ ಪೊಲೀಸ್ ಠಾಣೆ ಪಿಐ ಮೌನೇಶ್ವರ ಮಾಲಿಪಾಟೀಲ್ ಅವರು ಆರೋಪಿಯ ವಿರುದ್ಧ ದೋಷಾರೋಪಣೆ ಪಟ್ಟಿಯನ್ನು ಸಲ್ಲಿಸಿದ್ದರು.
ಪ್ರಕರಣದಲ್ಲಿ ಆರೋಪಿಯ ವಿರುದ್ಧದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ 20 ವರ್ಷಗಳ ಜೈಲು ಶಿಕ್ಷೆ ಹಾಗೂ ರೂ.30 ಸಾವಿರಗಳ ದಂಡವನ್ನು ವಿಧಿಸಲಾಗಿದೆ. ದಂಡದ ಮೊತ್ತದಲ್ಲಿ ರೂ.25000 ಗಳನ್ನು ಬಾಧಿತಳಿಗೆ ಪರಿಹಾರದ ರೂಪದಲ್ಲಿ ವಿತರಿಸುವಂತೆ ನ್ಯಾಯಾಧೀಶರು ತೀರ್ಪಿನಲ್ಲಿ ಆದೇಶಿಸಿದ್ದಾರೆ. ಈ ಪ್ರಕರಣದಲ್ಲಿ ವಿಶೇಷ ಸರ್ಕಾರಿ ಅಭಿಯೋಜಕರಾದ ಗೌರಮ್ಮ ದೇಸಾಯಿ ಅವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು ಎಂದು ಪ್ರಕಟಣೆ ತಿಳಿಸಿದೆ.