ವಿಜಯಸಾಕ್ಷಿ ಸುದ್ದಿ, ಬೆಂಗಳೂರು
ಲಾಕ್ ಡೌನ್ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇಂದಿರಾ ಕ್ಯಾಂಟೀನ್ ಗಳ ಮೂಲಕ ಬಡವರಿಗೆ ಅನಕೂಲವಾಗುಂತೆ ಉಚಿತ ಆಹಾರವನ್ನು ನೀಡಲಾಗುತ್ತಿದೆ. ಇದು ಇನ್ನೂ ಮುಂದಿನ ಆರು ತಿಂಗಳವರೆಗೆ ನಡೆಯಬೇಕು ಎಂದು ರಾಜ್ಯ ಸರ್ಕಾರಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಬಡಜನರಿಗೆ ಕೈ ಗೆಟುಕುವ ದರದಲ್ಲಿ ಆಹಾರ ಪದಾರ್ಥಗಳನ್ನು ವಿತರಣೆ ಮಾಡಬೇಕು ಎಂಬುದು ಇಂದಿರಾ ಕ್ಯಾಂಟೀನ್ ಯೋಜನೆಯ ಹಾಗೂ ನಮ್ಮ ಸರ್ಕಾರದ ಮೂಲ ಉದ್ದೇಶವಾಗಿತ್ತು. ಆದರೆ ಈಗಿನ ರಾಜ್ಯ ಸರ್ಕಾರ ಇಂದಿರಾ ಕ್ಯಾಂಟೀನ್ ವಿಚಾರದಲ್ಲಿ ರಾಜಕಾರಣ ಮಾಡುತ್ತಿದೆ. ಈ ಕ್ಯಾಂಟೀನ್ ಗಳಿಗೆ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಹೆಸರು ಇಡಲಾಗಿದೆ ಎಂಬ ಏಕೈಕ ಕಾರಣಕ್ಕೆ ಅನುದಾನ ಬಿಡುಗಡೆ ಮಾಡದೆ, ಮುಚ್ಚಲು ಹೊರಟಿತ್ತು’ ಎಂದಿದ್ದಾರೆ.
‘ಕಳೆದೆರಡು ತಿಂಗಳುಗಳ ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಬಡಜನರ ಹಸಿವು ನೀಗಿಸಲು ನೆರವಾದದ್ದು ನಮ್ಮ ಸರ್ಕಾರದ ಜಾರಿಗೆ ತಂದಿದ್ದ ಇಂದಿರಾ ಕ್ಯಾಂಟೀನ್ ಯೋಜನೆ. ಲಾಕ್ ಡೌನ್ ಇರುವ ಕಾರಣ ಸರ್ಕಾರ ಇಂದಿರಾ ಕ್ಯಾಂಟೀನ್ ಗಳಲ್ಲಿ ಆಹಾರ ಪದಾರ್ಥಗಳನ್ನು ಉಚಿತವಾಗಿ ನೀಡುತ್ತಿತ್ತು’ ಎಂದು ಹೇಳಿದ್ದಾರೆ.
‘ಈಗ ಲಾಕ್ ಡೌನ್ ತೆರವಾಗಿರುವ ಕಾರಣ ರಾಜ್ಯ ಸರ್ಕಾರ ಹಿಂದಿನಂತೆ ಕ್ಯಾಂಟೀನ್ ನಿರ್ವಹಣೆಗೆ ಅನುದಾನ ನೀಡದೆ, ಬೀಗ ಹಾಕಬೇಕಾದ ಸ್ಥಿತಿಗೆ ತಳ್ಳಲಿದೆ. ಈ ಬಗ್ಗೆ ಜನ ಜಾಗೃತರಾಗಬೇಕು. ಇಂಥದ್ದೊಂದು ಜನಪರವಾದ ಯೋಜನೆ ನಿಲ್ಲದಂತೆ ಜನರೇ ಸರ್ಕಾರದ ಕಿವಿಹಿಂಡುವ ಕೆಲಸ ಮಾಡಬೇಕು’ ಎಂದು ಹೇಳಿದ್ದಾರೆ.