ವಿಜಯಸಾಕ್ಷಿ ಸುದ್ದಿ, ಗದಗ:
‘ಸರ್ಕಾರಿ ಕೆಲಸ ದೇವರ ಕೆಲಸ’ ಈ ಧ್ಯೇಯ ವಾಕ್ಯ ಹೆಸರಿಗಷ್ಟೇ. ಆದ್ರೆ, ಕಾರ್ಯಗತದಲ್ಲಿಲ್ಲ ಎಂಬುವುದಕ್ಕೆ ಸರ್ಕಾರಿ ಅಧಿಕಾರಿಗಳ ಇಂತಹ ಬೇಜವಾಬ್ದಾರಿ ಮಾತುಗಳೇ ಸಾಕ್ಷಿ.
ಮುಂಡರಗಿ ತಾಲೂಕಿನ ಡಂಬಳ ಗ್ರಾಮದಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟ ನಿಷೇಧಿಸುವಂತೆ ಆಗ್ರಹಿಸಿ ಮಹಿಳಾ ಸಂಘಟನೆಗಳ ಪ್ರತಿನಿಧಿಗಳು ಹಾಗೂ ಗ್ರಾಮ ಪಂಚಾಯತಿ ಜನಪ್ರತಿನಿಧಿಗಳು ಡಿ.29ರಂದು ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪಾದಯಾತ್ರೆ ಹಮ್ಮಿಕೊಳ್ಳುತ್ತಿದ್ದಾರೆ. ಆದರೆ, ಪಾದಯಾತ್ರೆ ಕೈಗೊಂಡ ಗ್ರಾ.ಪಂ. ಸದಸ್ಯರಿಗೆ ಹಾಗೂ ಮಹಿಳೆಯರಿಗೆ ಅಬಕಾರಿ ಇಲಾಖೆಯ ಅಧಿಕಾರಿಗಳು ‘ಮದ್ಯ ಮಾರಾಟ ಮಾಡುತ್ತಿರುವ ಅಂಗಡಿಗಳ ಮೇಲೆ ದಾಳಿ ಮಾಡುತ್ತೇವೆ. ನೀವು ಬನ್ನಿ!’ ಎಂದು ಕರೆಯುತ್ತಿದ್ದಾರೆ.
ಅಧಿಕಾರಿಗಳ ಇಂತಹ ಬೇಜವಾಬ್ದಾರಿತನ ಮಾತಿಗೆ ಆಕ್ರೋಶಗೊಂಡಿರುವ ಗ್ರಾ.ಪಂ. ಸದಸ್ಯೆ ಅಶ್ವಿನಿ ಮೇಗೂರ ಅವರು ‘ವಿಜಯಸಾಕ್ಷಿ’ಯೊಂದಿಗೆ ಮಾತನಾಡಿ, ‘ಗ್ರಾಮದ ಅಭಿವೃದ್ಧಿಗಾಗಿ ನಾವು ಜನಪ್ರತಿನಿಧಿಗಳಾಗಿದ್ದೇವೆ. ಎಲ್ಲಿ ಮದ್ಯ ಮಾರಾಟ ಮಾಡುತ್ತಿದ್ದಾರೆ ಎಂಬ ಬಗ್ಗೆ ಮಾಹಿತಿ ನೀಡಿದ್ದೇವೆ. ಆದರೆ, ಅದೇ ವಿಚಾರವಿಟ್ಟುಕೊಂಡು ‘ದಾಳಿ ಮಾಡಲು ನೀವು ಬನ್ನಿ’ ಎಂದು ಕರೆಯುತ್ತಿದ್ದು, ಈ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಆರೋಪಿಸಿದರು.
‘ಅಬಕಾರಿ ಇಲಾಖೆಯಲ್ಲಿ ನಾವು ಸೇವೆ ಸಲ್ಲಿಸುತ್ತಿದ್ದರೆ ಆ ಕಾರ್ಯವನ್ನು ನಾವೇ ಮಾಡುತ್ತಿದ್ದೇವು. ಕಾನೂನು ಬಾಹಿರ ಕೆಲಸ ಮಾಡುತ್ತಿರುವವರ ಕುರಿತು ಮಾಹಿತಿ ನೀಡಿದಾಗ ಗೌಪ್ಯ ಕಾರ್ಯಾಚರಣೆ ನಡೆಸಬೇಕಾದ ಅಧಿಕಾರಿಗಳು, ಅಕ್ರಮದ ಬಗ್ಗೆ ಮಾಹಿತಿ ನೀಡದವರನ್ನೇ ಆರೋಪಿ ಸ್ಥಾನದಲ್ಲಿ ನಿಲ್ಲಿಸುವ ಹುನ್ನಾರ ನಡೆಯುತ್ತಿದೆ’ ಎಂದು ದೂರಿದರು.