ಶಿವಮೊಗ್ಗ: ಓದಿನ ವಿಚಾರದಲ್ಲಿ ಪೋಷಕರು ಬುದ್ಧಿವಾದ ಹೇಳಿದ್ದರಿಂದ ಮನನೊಂದಿದ್ದ 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿನಿಯನ್ನು ಸೃಷ್ಟಿ (14) ಎಂದು ಗುರುತಿಸಲಾಗಿದೆ. ನಗರದ ಖಾಸಗಿ ಶಾಲೆಯೊಂದರಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಚೆನ್ನಾಗಿ ಓದುವಂತೆ ಪೋಷಕರು ಪದೇಪದೇ ಬುದ್ಧಿವಾದ ಹೇಳುತ್ತಿದ್ದ ಹಿನ್ನೆಲೆಯಲ್ಲಿ ಆಕೆ ಮನನೊಂದಿದ್ದಳು ಎನ್ನಲಾಗಿದೆ.
ಪೋಷಕರು ದೇವಸ್ಥಾನಕ್ಕೆ ತೆರಳಿದ್ದ ಸಂದರ್ಭದಲ್ಲಿ ಮನೆಯಲ್ಲಿ ಒಬ್ಬಳೇ ಇದ್ದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪೂಜೆ ಮುಗಿಸಿ ಪೋಷಕರು ಮನೆಗೆ ವಾಪಸ್ ಬಂದಾಗ ಘಟನೆ ಬೆಳಕಿಗೆ ಬಂದಿದೆ.
ಓದಿನ ವಿಚಾರವಾಗಿ ಪೋಷಕರು ಪದೇಪದೇ ಹೇಳುತ್ತಿದ್ದ ಮಾತುಗಳಿಂದ ಮನನೊಂದಿರುವುದಾಗಿ ಡೆತ್ ನೋಟ್ನಲ್ಲಿ ಉಲ್ಲೇಖಿಸಿದ್ದಾಳೆ ಎನ್ನಲಾಗಿದೆ.
ಘಟನೆ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.



