ಕಾರಹುಣ್ಣಿಮೆ: ಎತ್ತು ಗುದ್ದಿ ಸೈನಿಕನಾಗುವು ಕನಸ್ಸು ಹೊತ್ತ ಯುವಕ ಸಾವು

0
Spread the love

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ

Advertisement

ತಾಲೂಕಿನ ಸೂರಣಗಿ ಗ್ರಾಮದಲ್ಲಿ ಕಾರಹುಣ್ಣಿಮೆ ಪ್ರಯುಕ್ತ ಕರಿಹರಿಯುವ ಹಬ್ಬದ ಸಂದರ್ಭದಲ್ಲಿ ಎತ್ತು ಗುದ್ದಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಯುವಕನೋರ್ವ ಚಿಕಿತ್ಸೆ ಫಲಿಸದೆ ಜೀವ ಬಿಟ್ಟಿದ್ದಾನೆ.

ಕೋವಿಡ್-೧೯ ಹಿನ್ನೆಲೆ ಕಾರಹುಣ್ಣಿಮೆ ದಿನ ಎತ್ತುಗಳನ್ನು ಓಡಿಸುವ ಹಬ್ಬ ಆಚರಣೆ ಮಾಡಬಾರದು ಎಂದು ತಾಲೂಕಾಡಳಿತ, ಪೊಲೀಸ್ ಮತ್ತು ಗ್ರಾಪಂನವರು ಸೂಚಿಸಿದ್ದರೂ ನಿಯಮ ಉಲ್ಲಂಘಿಸಿ ಗ್ರಾಮದಲ್ಲಿ ಗುರುವಾರ ಸಂಜೆ ಕರಿ ಹರಿಯುವ ಹಬ್ಬ ಆಚರಣೆ ಮಾಡಿದ್ದರು.

ಈ ವೇಳೆ ರಭಸದಿಂದ ಓಡಿ ಬಂದ ಎತ್ತೊಂದು ಗ್ರಾಮದ ಯುವಕ ಕಿರಣಕುಮಾರ ಮಲಕಾಜಪ್ಪ ನೆರ್ತಿ (22) ಎಂಬಾತನಿಗೆ ಬಲವಾಗಿ ಗುದ್ದಿದೆ. ತೀವ್ರ ಗಾಯಗೊಂಡ ಯುವಕನನ್ನು ಹುಬ್ಬಳ್ಳಿಯ ಕಿಮ್ಸ್‌ಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಆತ ಶುಕ್ರವಾರ ಸಂಜೆ ಅಸುನೀಗಿದ್ದಾನೆ.

ಮೃತ ಯುವಕ ಪದವೀಧರನಾಗಿದ್ದು, ತಂದೆ ನಿವೃತ್ತ ಸೈನಿಕ. ಯುವಕನೂ ತಂದೆಯ ಸೈನಿಕ ಕೋಟಾದಡಿ ಸೈನಿಕ ಸೇವೆ ಸೇರಲು ದೈಹಿಕ ಪರೀಕ್ಷೆಯಲ್ಲಿ ಪಾಸಾಗಿ ಲಿಖಿತ ಪರೀಕ್ಷೆ ಬರೆಯಲು ಸಿದ್ಧತೆ ನಡೆಸಿದ್ದ ಎನ್ನಲಾಗಿದೆ.

ಪ್ರಕರಣ ದಾಖಲು

ಸೂರಣಗಿ ಗ್ರಾಮದ ದೊಡ್ಡ ಹನುಮಪ್ಪನ ಗುಡಿಯ ಮುಂದೆ ಸಾರ್ವಜನಿಕ ರಸ್ತೆಯಲ್ಲಿ ಗುರುವಾರ ಮಧ್ಯಾಹ್ನ 3 ಗಂಟೆಯಿಂದ ಕೋವಿಡ್ ನಿಯಮ ಉಲ್ಲಂಘಿಸಿ ಎತ್ತುಗಳನ್ನು ಓಡಿಸುವ ಹಬ್ಬವನ್ನು ಆಯೋಜಿಸಲಾಗಿತ್ತು. ಸಾಕಷ್ಟು ಸಂಖ್ಯೆಯಲ್ಲಿ ಜನರೂ ಸೇರಿದ್ದರು. ಕರಿ ಹರಿಯುವ ಹಬ್ಬದಲ್ಲಿ ರಭಸದಿಂದ ಓಡಿ ಬಂದ ಎತ್ತು ತನ್ನನ್ನು ಹಿಡಿಯಲು ಪ್ರಯತ್ನಿಸಿದ ಯುವಕ ಕಿರಣ್ ಕುಮಾರ್ ಹೊಟ್ಟೆ ಹಾಗೂ ಎದೆಯ ಭಾಗಕ್ಕೆ ಬಲವಾಗಿ ಗುದ್ದಿದ ಪರಿಣಾಮ, ಯುವಕ ಗಂಭೀರವಾಗಿ ಗಾಯಗೊಂಡಿದ್ದ.

ನಿಯಮ ಮೀರಿ ಕರಿ ಹರಿಯುವ ಹಬ್ಬ ಆಯೋಜಿಸಿದ್ದ, ಸ್ಯಾನಿಟೈಸರ್, ಮಾಸ್ಕ್ ಹಾಗೂ ಸಾಮಾಜಿಕ ಅಂತರವಿಲ್ಲದೆ ಪಾಲ್ಗೊಂಡಿದ್ದ ಆರೋಪದಲ್ಲಿ 21 ಜನರ ವಿರುದ್ಧ ಕೋವಿಡ್ ನಿಯಮಾನುಸಾರ ಪ್ರಕರಣ ದಾಖಲಿಸಲಾಗಿದೆ ಎಂದು ಲಕ್ಷ್ಮೇಶ್ವರ ಠಾಣೆ ಪಿಎಸ್‌ಐ ಎಸ್.ವೈ. ಲೋಹಾರ ತಿಳಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here