ಕೂಡಲೇ ಬೆಳಗಾವಿ ಸುವರ್ಣ ಸೌಧದಲ್ಲಿ ಅಧಿವೇಶನ ನಡೆಸಿ

0
Spread the love

ರಾಜ್ಯ ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ

Advertisement

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ಬೆಳಗಾವಿಯ ಸುವರ್ಣಸೌಧದಲ್ಲಿಯೇ ವಿಧಾನ ಮಂಡಲ ಅಧಿವೇಶನ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಈ ಸಂಬಂಧ ಸಿಎಂ ಯಡಿಯೂರಪ್ಪ ಹಾಗೂ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಪತ್ರ ಬರೆದಿರುವ ಮಾಜಿ ಸಿಎಂ ಸಿದ್ದರಾಮಯ್ಯ ಬೆಳಗಾವಿಯಲ್ಲಿ ಕೂಡಲೇ ವಿಧಾನ ಮಂಡಲ ಅಧಿವೇಶನ ನಡೆಸುವಂತೆ ಆಗ್ರಹಿಸಿದ್ದಾರೆ.

ಕರ್ನಾಟಕ ರಾಜ್ಯ ವಿಧಾನಮಂಡಲದ ಸರ್ಕಾರಿ ಕಾರ್ಯಕಲಾಪಗಳ ನಿರ್ವಹಣೆ ಅಧಿನಿಯಮದಂತೆ ಜುಲೈ ತಿಂಗಳಲ್ಲಿ ವಿಧಾನಸಭೆಯ ಅಧಿವೇಶನ ನಡೆಸಬೇಕಾಗಿತ್ತು. ಆದರೆ ಸರ್ಕಾರ ಇದುವರೆಗೂ ಅಧಿವೇಶನ ನಡೆಸಲು ಯಾವುದೇ ಕ್ರಮ ಕೈಗೊಳ್ಳದಿರುವುದು ನಿಯಮಬಾಹಿರ ಕ್ರಮವಾಗಿದೆ ಎಂದವರು ದೂರಿದ್ದಾರೆ.

ರಾಜ್ಯದ ಜನರು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಮುಖ್ಯವಾಗಿ ರಾಜ್ಯದ ಆರ್ಥಿಕ, ರಾಜಕೀಯ, ಆಡಳಿತಾತ್ಮಕ ಮತ್ತು ಆರೋಗ್ಯ ಕ್ಷೇತ್ರಗಳ ಆರೋಗ್ಯ ಕುಸಿದು ಬಿದ್ದಿದೆ. ಕೋವಿಡ್ 2ನೇ ಅಲೆ ರಾಜ್ಯ ಸರ್ಕಾರ ನಿಭಾಯಿಸಿದ ರೀತಿ ಅತ್ಯಂತ ಅರಾಜಕವಾಗಿತ್ತು. ಜನರ ಪಾಲಿಗೆ ಮಾರಣಾಂತಿಕವಾಗಿತ್ತು. ಮತ್ತೆ 3ನೇ ಅಲೆಯ ಭೀತಿ ಜನರನ್ನು ಕಾಡುತ್ತಿದೆ. ಜನರಿಗೆ ಸಮರ್ಪಕವಾಗಿ ಲಸಿಕೆ ಸಿಕ್ಕಿಲ್ಲ. 3ನೇ ಅಲೆಯನ್ನೂ ನಿಭಾಯಿಸಲು ಸರ್ಕಾರ ಯಾವ ತಯಾರಿ ಮಾಡಿಕೊಂಡಿದೆ ಎಂಬ ಕುರಿತು ಮಾಹಿತಿ ಇಲ್ಲ. ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಬೇಕಾದ ನ್ಯಾಯಯುತವಾದ ಹಣ ನೀಡದೇ ವಂಚಿಸುತ್ತಿದೆ. ಆದರೂ ರಾಜ್ಯ ಸರ್ಕಾರ ಕೈಕಟ್ಟಿ ಕೂತಿದೆ. ಇದರೆ ಜೊತೆಗೆ ರಾಜ್ಯ ಸರ್ಕಾರ ಭೀಕರ ಭ್ರಷ್ಟಾಚಾರದಲ್ಲಿ ಮುಳುಗಿರುವ ಗಂಭೀರ ಆರೋಪಗಳನ್ನು ಎದುರಿಸುತ್ತಿದೆ.

ರಾಜ್ಯವನ್ನು ಮತ್ತೆ ಪ್ರವಾಹ ಭೀತಿ ಕಾಡುತ್ತಿದೆ. ಕಳೆದ 2 ವರ್ಷಗಳಲ್ಲಿ ಪ್ರವಾಹದಿಂದ ಸಂಭವಿಸಿದ ಹಾನಿಗೆ ಸಮರ್ಪಕ ಪರಿಹಾರ ನೀಡಿಲ್ಲ. ಕೃಷಿ ಕ್ಷೇತ್ರವನ್ನು ಸಂಪೂರ್ಣ ನಿರ್ಲಕ್ಷಿಸಲಾಗಿದೆ. ಶಿಕ್ಷಣ ವ್ಯವಸ್ಥೆಯೂ ಅಧೋಗತಿಗಿಳಿದಿದೆ ಎಂದು ಟೀಕಿಸಿದ್ದಾರೆ.
ರಾಜ್ಯದ ಅನೇಕ ಜಿಲ್ಲೆಗಳಲ್ಲಿ ದಲಿತ, ದಮನಿತ ಹೆಣ್ಣು ಮಕ್ಕಳ ಮೇಲೆ ಘೋರ ಅತ್ಯಾಚಾರ ಪ್ರಕರಣಗಳು, ಮರ್ಯಾದಾ ಹತ್ಯೆಗಳು, ಆತ್ಮಹತ್ಯೆಗಳು ಹೆಚ್ಚಾಗುತ್ತಿವೆ. ಕೃಷಿ ಕ್ಷೇತ್ರದ ಕುರಿತ ಸರ್ಕಾರದ ನಿರ್ಲಕ್ಷ್ಯ ಹೆಚ್ಚುತ್ತಿದೆ. ಮತ್ತೆ ಅಕ್ರಮ ಗಣಿಗಾರಿಕೆ ದಂಧೆ ಹೆಚ್ಚಿದೆ. ರಾಜ್ಯದ ಒಟ್ಟಾರೆ ಆಡಳಿತ ಅಂಧಕಾರದಲ್ಲಿ ಮುಳುಗಿದೆ ಎಂದು ಆರೋಪಿಸಿದ್ದಾರೆ.

ರಾಜ್ಯದ ಜನರು ಅನುಭವಿಸುತ್ತಿರುವ ಸಂಕಷ್ಟಗಳ ಕುರಿತು ಚರ್ಚಿಸಿ ಅವುಗಳಿಗೆ ಸಮರ್ಪಕ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ನಿಯಮ ಪ್ರಕಾರ ಪ್ರತಿ ವರ್ಷ ಕನಿಷ್ಟ 60 ದಿನಗಳ ಕಾಲ ಅಧಿವೇಶ ನಡೆಸಬೇಕು. ಮೇಲೆ ಉಲ್ಲೇಖಿಸಿದ ಕಾಯ್ದೆಯ ಪ್ರಕಾರ ವರ್ಷದಲ್ಲಿ ಕನಿಷ್ಠ 4 ಅಧಿವೇಶನಗಳನ್ನು ನಡೆಸಬೇಕು. ಜನೆವರಿಯಲ್ಲಿ 15, ಮಾರ್ಚ್‍ನಲ್ಲಿ 20, ಜುಲೈನಲ್ಲಿ 15 ಮತ್ತು ನವೆಂಬರ್‍ನಲ್ಲಿ 10 ದಿನಗಳ ಕಾಲ ಅಧಿವೇಶನ ನಡೆಸಬೇಕು. ಆದರೆ, ಬಿಜೆಪಿ ಆಡಳಿತದ ಸರ್ಕಾರ ಈ ನಿಯಮಗಳನ್ನೆಲ್ಲ ಗಾಳಿಗೆ ತೂರುತ್ತಿದೆ.

2020ರಲ್ಲಿ ಒಟ್ಟಾರೆ 31 ದಿನಗಳ ಕಾಲ ಮತ್ತು 2021ರಲ್ಲಿ ಇದೂವರೆಗೆ 20 ದಿನಗಳ ಕಾಲ ಮಾತ್ರ ಅಧಿವೇಶನ ನಡೆಸಿದೆ. ಬೆಳಗಾವಿಯಲ್ಲಿ ಇದೂವರೆಗೆ ಒಂದು ಅಧಿವೇಶನವನ್ನೂ ನಡೆಸಿಲ್ಲ. ಸರ್ಕಾರದ ನಿಯಮ ಬಾಹಿರವಾದ ಈ ಕ್ರಮ ಅಕ್ಷಮ್ಯವಾಗುತ್ತದೆ. ಆದ್ದರಿಂದ ಕೂಡಲೇ ಅಧಿವೇಶನ ನಡೆಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here