ವಿಜಯಸಾಕ್ಷಿ ಸುದ್ದಿ, ಬೆಂಗಳೂರು
ಮಹಾಮಾರಿಯ 2ನೇ ಅಲೆಯಿಂದ ಜನ ಕಂಗಾಲಾಗಿದ್ದಾರೆ. ಲಾಕ್ ಡೌನ್ ನಿಂದಾಗಿ ಬಡವರಿಗೆ ಸರ್ಕಾರ ಆಸರೆಯಾಗುವ ಪ್ರಯತ್ನ ಮಾಡುತ್ತಿದೆ. ಬಡವರು ಹಾಗೂ ಶ್ರಮಿಕ ವರ್ಗದ ಜನರಿಗೆ ಸಿಎಂ ಯಡಿಯೂರಪ್ಪ ಅವರು ರೂ. 1,250 ಕೋಟಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ.
ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ, ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಹೂ ಬೆಳೆಗಾರರಿಗೆ ಪ್ರತಿ ಹೆಕ್ಟೇರ್ ಗೆ ರೂ. 10 ಸಾವಿರ ಸಹಾಯಧನ, ಹಣ್ಣು, ತರಕಾರಿ ನಷ್ಟಕ್ಕೆ ಪ್ರತಿ ಹೆಕ್ಟೇರ್ ರೂ. 10 ಸಾವಿರ ಪರಿಹಾರ ನೀಡುವುದಾಗಿ ಸರ್ಕಾರ ಘೋಷಿಸಿದೆ.
ಆಟೋ, ಕ್ಯಾಬ್ ಚಾಲಕರಿಗೆ ರೂ. 3 ಸಾವಿರ, ಕಟ್ಟಡ ಕಾರ್ಮಿಕರಿಗೆ ತಲಾ ರೂ. 3 ಸಾವಿರ, ಅಗಸ, ಚಮ್ಮಾರ, ಕಮ್ಮಾರ ಸೇರಿದಂತೆ ಅಸಂಘಟಿತರಿಗೆ ರೂ. 2 ಸಾವಿರ, ರಸ್ತೆ ಬದಿ ವ್ಯಾಪಾರಿಗಳಿಗೆ ರೂ. 2 ಸಾವಿರ, ರಸ್ತೆ ಬದಿಯ ವ್ಯಾಪಾರಿಗಳಿಗೆ ರೂ. 2 ಸಾವಿರ, ಕಲಾವಿದರು, ಕಲಾ ತಂಡಕ್ಕೆ ರೂ. 3 ಸಾವಿರ ಘೋಷಿಸಿದ್ದಾರೆ. ಅಲ್ಲದೇ, ಸಾಲ ಮರುಪಾವತಿಗೆ ಜುಲೈವರೆಗೆ ಅವಧಿ ವಿಸ್ತರಣೆ ಮಾಡಿದ್ದಾರೆ.
ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ ಬಿಪಿಎಲ್ ಕಾರ್ಡ್ ದಾರರಿಗೆ ತಲೆಗೆ 5 ಕೆಜಿ ಅಕ್ಕಿ ನೀಡಲಾಗುವುದು. ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದವರಿಗೂ ರೇಷನ್ ಕೊಡಲಾಗುತ್ತದೆ. ಅಲ್ಲದೆ ಮೇ, ಜೂನ್ ರೇಷನ್ ಕೊಡಲಾಗುತ್ತದೆ ಎಂದು ಸಿಎಂ ಹೇಳಿದ್ದಾರೆ.
ಸಾಲ ಮರುಪಾವತಿಗೆ 3 ತಿಂಗಳ ಅವಕಾಶ ಇದ್ದು, 3 ತಿಂಗಳ ಬಡ್ಡಿಯನ್ನು ಸರ್ಕಾರವೇ ಭರಿಸಲಿದೆ. ಅಲ್ಲದೇ, ಲಾಕ್ ಡೌನ್ ಬಗ್ಗೆ ಮೇ. 23ರಂದು ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ. ಪ್ರತಿ ಪಂಚಾಯತಿಗೆ ಕೋವಿಡ್ ನಿರ್ವಹಣೆಗೆ ರೂ. 50 ಸಾವಿರ ಹಣ ನೀಡಲಾಗುವುದು. ಅಲ್ಲದೇ, ಲೈನ್ ಮ್ಯಾನ್, ಗ್ಯಾಸ್ ತಲುಪಿಸೋರು, ಶಿಕ್ಷಕರು ಫ್ರಂಟ್ ಲೈನ್ ವರ್ಕರ್ಸ್ ಎಂದು ಸರ್ಕಾರ ಘೋಷಿಸಿದೆ.