ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದ್ರೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಿ; ಡಿಸಿ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ

Advertisement

ಕೋವಿಡ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಉಲ್ಬಣಗೊಳ್ಳುತ್ತಿದ್ದು ಕೋವಿಡ್ ಸೋಂಕು ನಿಯಂತ್ರಣ ಕಾರ್ಯಕ್ಕೆ ಜಿಲ್ಲೆಯ ಅಧಿಕಾರಿಗಳು ಪ್ರಥಮಾದ್ಯತೆ ನೀಡುವ ಮೂಲಕ ಸೋಂಕು ನಿಯಂತ್ರಣಕ್ಕೆ ಮುಂದಾಗಬೇಕು. ಸೋಂಕು ನಿಯಂತ್ರಣ ನಿಯಮಗಳನ್ನು ಉಲ್ಲಂಘಿಸುವ ಸಂಸ್ಥೆ , ವ್ಯಾಪಾರಸ್ಥರು, ಸಾರ್ವಜನಿಕರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿಯ ವಿಡಿಯೋಸಭಾಂಗಣದಲ್ಲಿ ಮಂಗಳವಾರ ಕೋವಿಡ್ ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ತಹಶೀಲ್ದಾರರು, ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು, ಪೊಲೀಸ್ ಅಧಿಕಾರಿಗಳ , ಕಾರ್ಯನಿರ್ವಹಣಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿಗಳು ಮಾತನಾಡಿದರು.

ತಾಲೂಕಾವಾರು ತಂಡಗಳನ್ನು ರಚಿಸಿಕೊಂಡು ಸೋಂಕು ನಿಯಂತ್ರಣದ ಬಗ್ಗೆ ನಿಗಾ ವಹಿಸಬೇಕು. ಜನ ಸಾಂದ್ರತೆ ಇರುವ ಸ್ಥಳಗಳಲ್ಲಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಮಾರುಕಟ್ಟೆಗಳಲ್ಲಿ ಕೋವಿಡ್ ನಿಯಮ ಉಲ್ಲಂಘಿಸುವವರ ಮೇಲೆ ಪ್ರಕರಣ ದಾಖಲಿಸಿ ದಂಡ ವಿಧಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಾಗಿ ಸೂಚಿಸಿದರು.

ತಾಲೂಕಾ ಮಟ್ಟದಲ್ಲಿ ರಚಿಸುವ ತಂಡದಲ್ಲಿ ತಹಶೀಲ್ದಾರರು, ಇ.ಓ, ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು, ಹಾಗೂ ಪೊಲೀಸ್ ಅಧಿಕಾರಿಗಳನ್ನೊಳಗೊಂಡ ತಂಡ ರಚಿಸಿ ಕಾರ್ಯಾಚರಣೆ ಕೈಗೊಳ್ಳಬೇಕು. ಈ ಕಾರ್ಯದಲ್ಲಿ ನಿಧಾನ ಗತಿಯನ್ನು ಸಹಿಸಲಾಗುವುದಿಲ್ಲವೆಂದು ಅಧಿಕಾರಿಗಳಿಗೆ ಎಚ್ಚರಿಸಿದರು.

ಕೋವಿಡ್ ಕಾರ್ಯನಿರ್ವಹಣೆಯಲ್ಲಿ ನಿಷ್ಕಾಳಜಿ ತೋರುವ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.

ಕಳೆದ ಸಾಲಿನಲ್ಲಿ ಜಿಲ್ಲಾದ್ಯಂತ ಕೋವಿಡ್ ಸೋಂಕು ನಿಯಂತ್ರಣಕ್ಕೆ ಅಧಿಕಾರಿಗಳು ಉತ್ತಮವಾಗಿ ಕಾರ್ಯನಿರ್ವಹಿಸಿರುತ್ತೀರಿ. ಅದೇ ರೀತಿ ಕೋವಿಡ್ ಸೋಂಕಿನ 2 ನೇ ಅಲೆಯ ನಿಯಂತ್ರಣದಲ್ಲಿಯೂ ಅಧಿಕಾರಿಗಳು ಬದ್ಧತೆಯಿಂದ ಕರ್ತವ್ಯ ನಿಷ್ಟೆ ತೋರುವಂತೆ ಸೂಚಿಸಿದರು.
ಜಿಲ್ಲಾದ್ಯಂತ ಜಾತ್ರೆ ಉತ್ಸವಗಳನ್ನು ನಿಷೇಧಿಸಲಾಗಿದೆ. ಒಂದು ವೇಳೆ ಜಾತ್ರೆ ಉತ್ಸವಗಳು ನಡೆದಲ್ಲಿ ಆಯೋಜಕರ ಮೇಲೆ ಪ್ರಕರಣ ದಾಖಲಿಸಿ ದಂಡ ವಿಧಿಸುವಂತೆ ತಿಳಿಸಿದರು.

ಮದುವೆ ಸಮಾರಂಭ, ಜನ್ಮದಿನಾಚರಣೆ, ಅಂತ್ಯಕ್ರಿಯೆ ನಡೆಸಲು ನಿಯಮಾನುಸಾರ ಜನಸಂಖ್ಯೆ ಮಿತಿಗೊಳಿಸಿ ಅವಕಾಶ ಒದಗಿಸಲಾಗಿದೆ. ಸರ್ಕಾರ ನಿಗದಿಗೊಳಿಸಿದ ಜನ ಮಿತಿಗಿಂತ ಅಧಿಕ ಜನ ಸೇರಿದಲ್ಲಿ ಪ್ರಕರಣ ದಾಖಲಿಸಿ ದಂಡ ವಿಧಿಸುವುದು ಅನಿವಾರ್ಯ ಎಂದರು.

ವ್ಯಾಪಾರಸ್ಥರು ವ್ಯವಹರಿಸುವಾಗ ತಪ್ಪದೇ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಸೂಚಿಸಬೇಕು. ಅಲ್ಲದೇ ಅಂಗಡಿಯ ಮುಂಬಾಗಿಲಿಗೆ ಮಾಸ್ಕ್ ಧರಿಸುವುದು ಕಡ್ಡಾಯವೆಂಬ ಸೂಚನಾಫಲಕ ಅಳವಡಿಸಿ ವ್ಯವಹರಿಸಬೇಕು. ಸಂಕೀರ್ಣ, ಮಾರ್ಟ್ ಹಾಗೂ ಮಾರುಕಟ್ಟೆ ವ್ಯಾಪಾರಸ್ಥರು ನಿಯಮ ಉಲ್ಲಂಘನೆ ಕಂಡು ಬಂದಲ್ಲಿ ಶಿಕ್ಷೆಗೆ ಒಳಪಡಿಸಬೇಕು. ಈ ಎಲ್ಲ ಕ್ರಮಗಳನ್ನು ನಿಯೋಜಿತ ಅಧಿಕಾರಿಗಳು ಕಡ್ಡಾಯವಾಗಿ ಪಾಲನೆ ಮಾಡುವುದರೊಂದಿಗೆ ಸೋಂಕು ನಿಯಂತ್ರಣಕ್ಕೆ ಶ್ರಮಿಸಬೇಕೆಂದು ಸೂಚಿಸಿದರು.

ಜಿಲ್ಲಾ ಪೊಲೀಸವರಿಷ್ಟಾಧಿಕಾರಿ ಯತೀಶ್ ಎನ್ ಮಾತನಾಡಿ, ತಾಲೂಕಾವಾರ ತಹಶೀಲ್ದಾರರು ಮದುವೆ ಸಮಾರಂಭಗಳಿಗೆ ಪರವಾನಿಗೆ ನೀಡಿದಲ್ಲಿ ಮಾಹಿತಿಯನ್ನು ಸಂಬಂಧಿಸಿದ ವ್ಯಾಪ್ತಿಯ ಪೊಲೀಸ್ ಠಾಣೆಗೆ ನೀಡಬೇಕು. ಮದುವೆ ಸಮಾರಂಭಗಳು ನಡೆಯುವ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಕೋವಿಡ್ ನಿಯಮಗಳ ಉಲ್ಲಂಘನೆಯಾಗದಂತೆ ನೋಡಿಕೊಳ್ಳಬೇಕು. ಅಲ್ಲದೇ ಸರ್ಕಾರಿ ನೌಕರರು ಹಾಗೂ ಪೊಲೀಸ್ ಅಧಿಕಾರಿಗಳು ಕಡ್ಡಾಯವಾಗಿ ನಿಯಮಾನುಸಾರ ಮಾಸ್ಕ್ ಧರಿಸಿ ಕರ್ತವ್ಯ ನಿರ್ವಹಿಸುವಂತೆ ಸೂಚಿಸಿದರು.

ಅಪರಜಿಲ್ಲಾಧಿಕಾರಿ ಸತೀಶಕುಮಾರ್ ಎಂ ಮಾತನಾಡಿ, ಪ್ರತಿ ತಾಲೂಕಿಗೆ ಕೋವಿಡ್ ಸೋಂಕು ನಿಯಮ ಮಾರ್ಗಸೂಚಿಗಳ ಪಾಲನೆಗಾಗಿ ತಲಾ 5 ಕಾರ್ಯಪಡೆ ತಂಡಗಳನ್ನು ರಚಿಸಿ ಕಾರ್ಯಾಚರಣೆ ಮಾಡಬೇಕು. ಪ್ರತಿದಿನ ಸಾಯಂಕಾಲ ಜಿಲ್ಲಾಡಳಿತಕ್ಕೆ ವಹಿಸಿದ ಕ್ರಮದ ವರದಿ ನೀಡಬೇಕು ಎಂದರು.

ಸಭೆಯಲ್ಲಿ ಉಪವಿಭಾಗಾಧಿಕಾರಿ ರಾಯಪ್ಪ ಹುಣಸಗಿ, ನಗರಸಭೆ ಪೌರಾಯುಕ್ತ ರಮೇಶ ಜಾಧವ, ತಹಶೀಲ್ದಾರರು, ತಾ.ಪಂ.ಕಾರ್ಯನಿರ್ವಹಣಾಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು, ಪೊಲೀಸ್ ಇಲಾಖೆಯ ಅಧಿಕಾರಿಗಳು, ಜಿಲ್ಲಾಧಿಕಾರಿಗಳ ಕಚೇರಿಯ ಶಿರಸ್ತೇದಾರ ರೇವಣಕರ್ ಸೇರಿದಂತೆ ಮತ್ತಿತರರು ಹಾಜರಿದ್ದರು.


Spread the love

LEAVE A REPLY

Please enter your comment!
Please enter your name here