ವಿಜಯಸಾಕ್ಷಿ ಸುದ್ದಿ, ಚಾಮರಾಜನಗರ
ರಾಜ್ಯದಲ್ಲಿ ಮಹಾಮಾರಿಯ ಅಟ್ಟಹಾಸ ಎಗ್ಗಿಲ್ಲದೆ ಸಾಗುತ್ತಿದೆ. ಈ ನಿಟ್ಟಿನಲ್ಲಿ ಕರ್ಫ್ಯೂ ಜಾರಿಗೊಳಿಸಿದರೂ ಮಹಾಮಾರಿ ಮಾತ್ರ ತನ್ನ ಆಟ ನಿಲ್ಲಿಸುತ್ತಿಲ್ಲ. ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 14 ಜನ ಸೋಂಕಿಗೆ ಬಲಿಯಾಗಿದ್ದಾರೆ. ಆದರೆ, ಈ ಬಾರಿ ಸೋಂಕಿತರ ಆಕ್ಸಿಜನ್ ನ ಕೊರತೆಯಿಂದಾಗಿ ಸತ್ತಿಲ್ಲ.
ಜಿಲ್ಲೆಯ ಯಾವುದೇ ಆಸ್ಪತ್ರೆಯಲ್ಲಿಯೂ ಆಕ್ಸಿಜನ್ ನ ಕೊರತೆಯಾಗಿಲ್ಲ. ಹೀಗಾಗಿ ಸತ್ತವರು ಕೂಡ ಆಕ್ಸಿಜನ್ ನ ಕೊರತೆ ಎದುರಿಸಿಲ್ಲ. ಜಿಲ್ಲಾಸ್ಪತ್ರೆಯಲ್ಲಿ ಅವಶ್ಯಕತೆಗಿಂತ ಹೆಚ್ಚಾಗಿ ಆಕ್ಸಿಜನ್ ಇದೆ. ಸೋಂಕಿತರು ಅಂತಿಮ ಹಂತದಲ್ಲಿ ಆಸ್ಪತ್ರೆಗೆ ದಾಖಲಾಗುತ್ತಿರುವ ಹಿನ್ನೆಲೆಯಲ್ಲಿ ಸಮರ್ಪಕ ಚಿಕಿತ್ಸೆ ದೊರೆಯದೆ ಸಾವನ್ನಪ್ಪುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಕೈ ಮೀರಿದ ನಂತರ ರೋಗಿಗಳು ಆಸ್ಪತ್ರೆಯ ಬಾಗಿಲು ತಟ್ಟುತ್ತಿರುವುದರಿಂದಾಗಿ ಸಾವಿನ ಸಂಖ್ಯೆ ವಿಪರೀತವಾಗಿ ಹೆಚ್ಚಳವಾಗುತ್ತಿದೆ. ಜಿಲ್ಲೆಯಲ್ಲಿ ಮೇ. 4 ರಂದು ಎಂಟು ಜನ ಹಾಗೂ ಮೇ. 5 ರಂದು 8 ಜನ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಮೇ. 3ರಂದು ಆಕ್ಸಿಜನ್ ಕೊರತೆಯಿಂದ 24 ಜನ ಸಾವನ್ನಪ್ಪಿದ್ದಾರೆ. ಇದು ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು.
ಇದರಿಂದಾಗಿ ಎಚ್ಚೆತ್ತುಕೊಂಡಿರುವ ಸರ್ಕಾರ ಜಿಲ್ಲಾಸ್ಪತ್ರೆಗೆ ನಿರಂತರವಾಗಿ ಆಕ್ಸಿಜನ್ ಪೂರೈಕೆ ಮಾಡುತ್ತಿದೆ. ಅಷ್ಟೇ ಅಲ್ಲದೇ, ಸ್ವತಃ ಪರಿಸ್ಥಿತಿ ಅವಲೋಕಿಸಿ, ಸಮಸ್ಯೆ ತಲೆದೋರದಂತೆ ಕಾಣುವ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಕುಮಾರ್ ಕೂಡ ನಿನ್ನೆಯಿಂದ ಚಾಮರಾಜನಗರದಲ್ಲಿಯೇ ವಾಸ್ತವ್ಯ ಹೂಡಿದ್ದಾರೆ.