ವಿಜಯಸಾಕ್ಷಿ ಸುದ್ದಿ, ಕೊಪ್ಪಳ
ಲಾಕ್ಡೌನ್ ಹಾಗೂ ಜಿಲ್ಲಾಡಳಿತ ಕೈಗೊಂಡ ಕಠಿಣ ಕ್ರಮಗಳಿಂದ ಕೋವಿಡ್ ಸೋಂಕು ಹರಡುವಿಕೆ ನಿಯಂತ್ರಣಕ್ಕೆ ಬರುತ್ತಿದ್ದು, ಜಿಲ್ಲೆಯಲ್ಲಿ ಸೋಂಕಿತರ ಪ್ರಮಾಣದಲ್ಲಿ ಇಳಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ತಿಳಿಸಿದರು.
ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೋವಿಡ್-೧೯ ಕುರಿತು ಮಾಹಿತಿ ನೀಡುವ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಪ್ರತಿನಿತ್ಯ 1,500ರಿಂದ 1800ರವರೆಗೆ ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಪರೀಕ್ಷಾ ಫಲಿತಾಂಶದನ್ವಯ ಜಿಲ್ಲೆಯಲ್ಲಿ ಸೋಂಕಿತರ ಪ್ರಮಾಣದಲ್ಲಿ ಶೇ. 20ರಷ್ಟು ಇಳಿಕೆ ಕಂಡುಬಂದಿದೆ. ಸಾರ್ವಜನಿಕರು ಲಾಕ್ಡೌನ್ ಹಾಗೂ ಜಿಲ್ಲಾಡಳಿತದ ನಿಯಮಗಳನ್ನು ಸೂಕ್ತ ರೀತಿಯಲ್ಲಿ ಅನುಸರಿಸಿ ಸಹಕರಿಸಿದರೆ ಶೀಘ್ರದಲ್ಲಿ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಬಹುದು. ಸಾರ್ವಜನಿಕರು ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು.

ಆಕ್ಸಿಜನ್ ಘಟಕ ಇಂದು ಆರಂಭ
ಜಿಲ್ಲೆಯಲ್ಲಿ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆ ಸಹಿತ ಒಟ್ಟು 712 ಫೆಸಿಲಿಟಿಗಳಲ್ಲಿ ಆಕ್ಸಿಜನ್ ಬೆಡ್ಗಳ ವ್ಯವಸ್ಥೆಯನ್ನು ಮಾಡಲಾಗಿದೆ. ಕನಕಗಿರಿಯಲ್ಲಿ ಆಸ್ಪತ್ರೆಯಲ್ಲಿರುವ ಆಕ್ಸಿಜನ್ ಬೆಡ್ಗಳನ್ನು ಕೋವಿಡ್ ನಿಯಮಾನುಸಾರ ವ್ಯವಸ್ಥೆ ಮಾಡಲಾಗುತ್ತಿದೆ. ಜಿಲ್ಲಾಸ್ಪತ್ರೆಯಲ್ಲಿ ನಿರ್ಮಿಸಲಾಗುತ್ತಿರುವ 1,000 ಎಲ್ಪಿಎಂ ಆಕ್ಸಿಜನ್ ಉತ್ಪಾದನಾ ಘಟಕದ ಕಾರ್ಯವು ಬಹುತೇಕ ಪೂರ್ಣಗೊಂಡಿದ್ದು, ಶನಿವಾರದಿಂದ ಕಾರ್ಯಾರಂಭಗೊಳಿಸಲಾಗುವುದು ಎಂದು ಮಾಹಿತಿ ನೀಡಿದರು.
ಕೋವಿಡ್ ಎರಡನೇ ಅಲೆ ಆರಂಭದಿಂದ ಇಲ್ಲಿಯವರೆಗೆ ಒಟ್ಟು 309 ಜನರು ಮೃತಪಟ್ಟಿದ್ದು, ಅದರಲ್ಲಿ 49 ಸೋಂಕಿತರು ಹೊರ ಜಿಲ್ಲೆಯವರಾಗಿದ್ದಾರೆ. ಜಿಲ್ಲೆಯಲ್ಲಿ ಮೊದಲ ಹಾಗೂ ಎರಡನೇ ಸುತ್ತು ಸೇರಿದಂತೆ ಒಟ್ಟು 2,81,120 ಜನರಿಗೆ ಕೋವಿಡ್ ಲಸಿಕೆಯನ್ನು ನೀಡಲಾಗಿದೆ. ಇನ್ನೂ ಅನೇಕರಿಗೆ ಎರಡನೇ ಡೋಸ್ ಲಸಿಕೆ ನೀಡುವುದು ಬಾಕಿ ಇದೆ. ಲಸಿಕೆ ನಿಯಮಾನುಸಾರ ಮೊದಲ ಡೋಸ್ ನಂತರ ನಿಗದಿತ ಅವಧಿಯನ್ನು ಪೂರ್ಣಗೊಳಿಸಿದವರು ಹತ್ತಿರದ ಲಸಿಕಾ ಕೇಂದ್ರಕ್ಕೆ ಭೇಟಿ ನೀಡಿ ಎರಡನೇ ಡೋಸ್ ಲಸಿಕೆ ಪಡೆಯಬಹುದು.
ಎರಡನೇ ಡೋಸ್ ಲಸಿಕೆಗೆ ಅರ್ಹರಿರುವರಿಗೆ ಸಂದೇಶದ ಮೂಲಕ ಮಾಹಿತಿ ನೀಡಲು ವ್ಯವಸ್ಥೆ ಕಲ್ಪಿಸಲಾಗುತ್ತಿದ್ದು, ಮುಂದಿನ ವಾರದಲ್ಲಿ ವ್ಯವಸ್ಥೆ ಜಾರಿಗೆ ಬರಲಿದೆ ಎಂದರು.
ಮ್ಯೂಕಸ್ ಮೈಕೋಸಿಸ್ ಪ್ರಕರಣಗಳು
ಮ್ಯೂಕಸ್ ಮೈಕೋಸಿಸ್ ಬಾಧಿತ 4 ರೋಗಿಗಳು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ. ಇನ್ನೂ 5 ಜನರು ಸೋಂಕಿಗೆ ಒಳಗಾಗಿರಬಹುದು ಎಂದು ಶಂಕಿಸಲಾಗಿದ್ದು, ಪರೀಕ್ಷಾ ವರದಿಯ ಅನಂತರ ಸೋಂಕು ದೃಢೀಕರಣದ ಬಗ್ಗೆ ಮಾಹಿತಿ ನೀಡಲಾಗುವುದು ಎಂದು ಅವರು ಹೇಳಿದರು.
ಕೋವಿಡ್ ಮೂರನೇ ಅಲೆಯ ಬಗ್ಗೆ ತಜ್ಞರು, ವೈದ್ಯರು ಹಾಗೂ ಮಾಧ್ಯಮಗಳು ಹೇಳುವ ಪ್ರಕಾರ ಕಡಿಮೆ ವಯಸ್ಸಿನ ಅಥವಾ ಚಿಕ್ಕ ಮಕ್ಕಳಿಗೆ ಸೋಂಕು ಹೆಚ್ಚು ಬಾಧಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯಲ್ಲಿ ಶಾಲಾ ಶಿಕ್ಷಕರನ್ನು ಬಳಸಿಕೊಂಡು ಮನೆ ಮನೆಗೆ ತೆರಳಿ ಮಕ್ಕಳ ಸಮೀಕ್ಷೆ ಮಾಡಲಾಗುತ್ತಿದೆ. ಸಮೀಕ್ಷೆಯಲ್ಲಿ ಮಕ್ಕಳು ಹಾಗೂ ಪೋಷಕರು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಾಹಿತಿ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಮಕ್ಕಳ ತಜ್ಞ ವೈದ್ಯರು ಸೇರಿದಂತೆ ವೈದ್ಯಕೀಯ ಸಿಬ್ಬಂದಿ ಕೊರತೆ ಇದ್ದು, ನೇಮಕ ಮಾಡಿಕೊಳ್ಳಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಲಿಂಗರಾಜು ಟಿ. ಉಪಸ್ಥಿತರಿದ್ದರು.